ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದು ಸರ್ಕಾರದ ಗುರಿ: ಸಿದ್ದರಾಮಯ್ಯ

Update: 2024-10-15 08:43 GMT

ಬೆಂಗಳೂರು, ಅಕ್ಟೋಬರ್ 15: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ರಾಜ್ಯ NSS ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ಸಹಭಾಗಿತ್ವದಲ್ಲಿ ವಿಧಾನಸೌಧ ದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ ಯುವ ಅಭಿಯಾನ 2.0 ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಬಳಕೆಯನ್ನು ಮಾಡುವುದಿಲ್ಲ, ಮಾಡಲೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪ್ರತಿಜ್ಞೆಯನ್ನು ಅಕ್ಷರಶ: ಪಾಲಿಸುವ ಕರ್ತವ್ಯವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಸೂಚಿಸಿದರು.

WHO ಸಂಸ್ಥೆಯವರ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎಂದರು.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಯುವಕ ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ಇಂತಹ ದುಶ್ಚಟಗಳನ್ನು ನಿಲ್ಲಿಸಬೇಕೆಂದು ಕರೆ ನೀಡಿದರು.

ರಾಜ್ಯದ ಎಲ್ಲ ಯುವಸಮುದಾಯಗಳು ದುಶ್ಚಟಗಳಿಂದ ದೂರವಾಗುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದಂತೆ, ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಕರ ಜೀವನ ನಡೆಸಿ ಯುವ ಸಮುದಾಯದವರಲ್ಲೂ ಸಂತಸ ಮೂಡುವಂತಾಗಲಿ ಎಂದು ಹಾರೈಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News