ಬಿಜೆಪಿ ಸರಕಾರದ ಶೇ.40 ಪರ್ಸೆಂಟ್ ಕಮಿಷನ್ ಹಗರಣದ ತನಿಖೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-08-11 15:35 GMT

ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು: ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಭರವಸೆಯಂತೆ ಬಿಜೆಪಿ ಸರಕಾರದ 40 ಪರ್ಸೆಂಟ್ ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು ಎಂದು ತಿಳಿಸಿದ್ದಾರೆ.

ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು, ಬಿಜೆಪಿ ಸರಕಾರದ 40 ಪರ್ಸೆಂಟ್ ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೆ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ಧ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ಈ ಎಲ್ಲ ಹಗರಣಗಳ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೆ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

ನಮ್ಮ ಸರಕಾರದ ವಿರುದ್ಧ ಮಾಜಿ ಸಚಿವ ಆರ್.ಅಶೋಕ್ ಮಾಡಿರುವ 15 ಪರ್ಸೆಂಟ್ ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದು. ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40 ರಿಂದ 15 ಪರ್ಸೆಂಟ್‍ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರಕಾರಕ್ಕಿಂತ ಕಾಂಗ್ರೆಸ್ ಸರಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿ ಮಧ್ಯಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗೆ, ಮೋದಿ ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.

ಈಗಾಗಲೇ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, ಪಿಒಡಬ್ಲ್ಯು ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೆ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ನಡುವೆ ಕೆಲವೆ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News