ʼರಾಮೇಶ್ವರಂ ಕೆಫೆʼ ಸ್ಫೋಟ ಘಟನೆಯ ತನಿಖೆಯನ್ನು ಎನ್ಐಎ ಗೆ ಒಪ್ಪಿಸಿ: ಬಿ.ವೈ.ವಿಜಯೇಂದ್ರ ಆಗ್ರಹ

Update: 2024-03-01 14:50 GMT

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಎನ್.ಐ.ಎ.ಗೆ ತನಿಖೆಗೆ ಒಪ್ಪಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ತುರ್ತಾಗಿ ಕರೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದ ಘಟನೆಯ ಎಫ್.ಎಸ್.ಎಲ್ ವರದಿಯನ್ನು ತಿರುಚಿ ಹಾಕದೆ ಯಥಾವತ್ತಾಗಿ ಜನರ ಮುಂದೆ ಇಡಬೇಕು. ತಪ್ಪಿತಸ್ಥರನ್ನು ಒದ್ದು ಒಳಗೆ ಹಾಕಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

ʼಪಾಕಿಸ್ತಾನ್ ಝಿಂದಾಬಾದ್ʼ ಎಂಬ ಘೋಷಣೆ ವಿಚಾರದಲ್ಲಿ ಎಫ್‍ಎಸ್‍ಎಲ್ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ಹೇಳಿದ್ದಾರೆ. ʼಪಾಕಿಸ್ತಾನ್ ಝಿಂದಾಬಾದ್ʼ ಎಂಬ ಘೋಷಣೆ ಕೂಗಿದ್ದು ಸತ್ಯ ಎಂದು ಎಫ್‍ಎಸ್‍ಎಲ್ ವರದಿ ಇವತ್ತು ಬೆಳಿಗ್ಗೆ ಬಂದಿದೆ. ಅದನ್ನು ಮುಚ್ಚಿಡುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ಆರೋಪಿಸಿದರು. ಎಫ್‍ಎಸ್‍ಎಲ್ ವರದಿ ತಿದ್ದುಪಡಿ ಮತ್ತೊಂದು ಬೋಗಸ್ ಎಫ್‍ಎಸ್‍ಎಲ್ ವರದಿ ಸಿದ್ಧಪಡಿಸಲಾಗುತ್ತಿದೆ ಎಂಬ ಅನುಮಾನ ನಮ್ಮೆಲ್ಲರನ್ನು ಕಾಡುತ್ತಿದೆ ಎಂದು ತಿಳಿಸಿದರು.

ರಾಜ್ಯದ ಸುರಕ್ಷತೆಗೆ ಗಂಡಾಂತರ

ಮೊನ್ನೆ ʼಪಾಕಿಸ್ತಾನ್ ಝಿಂದಾಬಾದ್ʼ ಎಂಬ ದೇಶದ್ರೋಹಿ ಘಟನೆ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ರಾಮೇಶ್ವರಂ ಕೆಫೆಯ ಬ್ಲಾಸ್ಟ್ ಸಂಭವಿಸಿದೆ. ಕಾಂಗ್ರೆಸ್ ಪಕ್ಷದ ತುಷ್ಟೀಕರಣದ ರಾಜನೀತಿಗಳಿಂದ, ಅಲ್ಪಸಂಖ್ಯಾತರ ಓಲೈಕೆಯ ನೀತಿಯಿಂದ ರಾಜ್ಯದ ಸುರಕ್ಷತೆಗೆ ಗಂಡಾಂತರ ತಂದಿದೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ವಿಜಯೇಂದ್ರ ಅವರು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿಕೊಂಡ ನಂತರ ಒಂದಿಲ್ಲೊಂದು ಘಟನೆಗಳು ನಡೆಯುತ್ತಿವೆ. ಸರಣಿ ಘಟನೆಗಳು ಒಂದಾದ ಮೇಲೆ ಒಂದರಂತೆ ರಾಜ್ಯದಲ್ಲಿ ನಡೆಯುತ್ತ ಬಂದಿವೆ. ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ನಿಂದ ಶುರುವಾದ ಘಟನೆಗಳು ಶಿವಮೊಗ್ಗದಲ್ಲಿ ಟಿಪ್ಪು ಜಯಂತಿ ಮುಖೇನ ಹಿಂದೂಗಳ ಮನೆಗಳಿಗೆ ನುಗ್ಗಿ, ಮನೆಗಳ ಮೇಲೆ ಕಲ್ಲೆಸೆದು, ಹಿಂದೂಗಳನ್ನು ಬೆದರಿಸುವ ಘಟನೆಯೂ ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ನಡೆದಿದೆ ಎಂದು ವಿವರಿಸಿದರು.

ಡಿ.ಜೆ.ಹಳ್ಳಿ- ಕೆ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಅಮಾಯಕರ ವಿರುದ್ಧ ಕೇಸು ಹಾಕಿದ್ದು‌, ಅದನ್ನು ರದ್ದು ಮಾಡುವಂತೆ ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರು ಗೃಹ ಸಚಿವರಿಗೆ ಒತ್ತಾಯಿಸಿದ್ದರು. ಮೊನ್ನೆ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನಡೆದ ಘಟನೆ ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಎಲ್ಲರನ್ನೂ ಕೂಡ ಬೆಚ್ಚಿ ಬೀಳಿಸಿದೆ. ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಒಳಗಡೆ ರಾಜ್ಯಸಭಾ ಚುನಾವಣೆ ನಡೆದ ನಂತರ ಗೆದ್ದು ಬಂದ ಕಾಂಗ್ರೆಸ್ ಸಂಸದ, ಅವರ ಹಿಂಬಾಲಕರು ʻಪಾಕಿಸ್ತಾನ ಝಿದಾಬಾದ್ʻ ಎಂದು ಘೋಷಣೆ ಕೂಗಿದ್ದಾರೆ. ಎಲ್ಲವನ್ನೂ ಸಹ ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ, ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಇವರ ಮಂತ್ರಿಮಂಡಲ ಸಂಪೂರ್ಣವಾಗಿ ಸಹಿಸಿಕೊಂಡು ಬಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರವು ದೇಶದ್ರೋಹಿಗಳನ್ನು, ಸಮಾಜವಿರೋಧಿ ದುಷ್ಕೃತ್ಯ ಎಸಗುವವರನ್ನು ರಕ್ಷಿಸುವ ಧೋರಣೆಯನ್ನು ತೆಗೆದುಕೊಂಡಿದೆ. ಕಾಂಗ್ರೆಸ್ ಸರಕಾರವು ಅಲ್ಪಸಂಖ್ಯಾತರ ಓಲೈಕೆ ನೀತಿಯನ್ನು ತನ್ನದಾಗಿಸಿಕೊಂಡಿದೆ. ಇದರ ಪರಿಣಾಮವನ್ನು ರಾಜ್ಯದ ಜನರು ಎದುರಿಸಬೇಕಿದೆ ಎಂದರು.

ರಾಮೇಶ್ವರಂ ಕೆಫೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಎನ್‍ಐಎಗೆ ತನಿಖೆಯನ್ನು ಒಪ್ಪಿಸಬೇಕು. ರಾಜ್ಯದ ಜನರ ಹಿತದೃಷ್ಟಿ, ರಕ್ಷಣೆಯ ದೃಷ್ಟಿಯಿಂದ ವಿಳಂಬವಿಲ್ಲದೇ ತನಿಖೆಯನ್ನು ಎನ್.ಐ.ಎಗೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡುವುದಿಲ್ಲ ಎಂದರು.

ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ವಿಧಾನಪರಿಷತ್ ಮುಖ್ಯಸಚೇತಕ ಎನ್.ರವಿಕುಮಾರ್, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News