ಹನೂರು: ಮಲೆಮಹದೇಶ್ವರ ಬೆಟ್ಟದಿಂದ ಹಿಂದಿರುಗುತ್ತಿದ್ದವರ ಮೇಲೆ ಕಾಡಾನೆ ದಾಳಿ: ಓರ್ವ ಮೃತ್ಯು

Update: 2023-08-20 05:52 GMT

ಹನೂರು, ಆ.20: ತಾಲೂಕಿನ ಪ್ರಸಿದ್ಧ ಯಾತ್ರ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆ ಬೆಂಗಳೂರು ಮೂಲದ ವ್ಯಕ್ತಿಯೋರ್ವನ್ನು ಕಾಡಾನೆ ದಾಳಿಗೈದು ಕೊಂದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ಗೋವಿಂದರಾಜು ಎಂದು ಗುರುತಿಸಲಾಗಿದೆ.

ಗೋವಿಂದರಾಜು ಮತ್ತು ಅವರ ಗೆಳೆಯ ಲೋಕೇಶ್ ಎಂಬವರು ಶನಿವಾರ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದರು. ಅಲ್ಲಿ ಪೂಜೆ ಸಲ್ಲಿಸಿದ ಬಳಿಕ ತಡರಾತ್ರಿ 11:30ರ ಸುಮಾರಿಗೆ ಇಂಡಿಗನತ್ತ ಹತ್ತಿರವಿರುವ ಅರಣ್ಯ ಇಲಾಖೆ ಚೆಕ್ ಪೋಸ್ಟ್ ದಾಟಿ ನಾಗಮಲೆಗೆ ತೆರಳುತ್ತಿದ್ದ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿ ಮಾಡಿದೆ. ಅದರ ದಾಳಿಗೆ ಸಿಲುಕಿದ ಗೋವಿಂದರಾಜುವನ್ನು ಆನೆ ಕೆಡವಿ ತುಳಿದಿದ್ದರಿಂದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ವೇಳೆ ಜೊತೆಗಿದ್ದ ಲೋಕೇಶ್ ಓಡಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದ ಮಲೆಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News