ಮುಡಾ ಹಗರಣ ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತರಿಗೆ ಕಿರುಕುಳ : ಎಚ್‌ಡಿಕೆ ಆರೋಪ

Update: 2024-07-19 15:24 GMT

ಎಚ್.ಡಿ.ಕುಮಾರಸ್ವಾಮಿ | PC : PTI  

ಬೆಂಗಳೂರು : ಮೈಸೂರಿನ ಮುಡಾ ಹಗರಣವನ್ನು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತರಿಗೆ ಕಾಂಗ್ರೆಸ್ ಸರಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಗರಣಗಳನ್ನು ಪ್ರಶ್ನಿಸಿದ ಪ್ರತಿಪಕ್ಷಗಳನ್ನು ವಿಧಾನಮಂಡಲದಲ್ಲಿ ಹತ್ತಿಕ್ಕಲಾಯಿತು. ಸತ್ಯಶೋಧನೆಯಲ್ಲಿ ನಿರತರಾದ ಆರ್‌ ಟಿಐ ಕಾರ್ಯಕರ್ತರನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ದಮನ ಮಾಡಲಾಗುತ್ತಿದೆ ಎಂದು ಕಿಡಿಗಾರಿದ್ದಾರೆ.

ಮುಖ್ಯಮಂತ್ರಿಗಳ ಕುಟುಂಬ ಮೈಸೂರಿನ ಮೂಡಾದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರನ್ನು ಕಾಂಗ್ರೆಸ್ ಗುರಿ ಮಾಡಿಕೊಂಡಿದೆ. ಆರೋಪಿತ ಸ್ಥಾನದಲ್ಲಿರುವ ಸಿಎಂ ಪರಿವಾರವನ್ನು ರಕ್ಷಿಸುವ ಏಕೈಕ ದುರುದ್ದೇಶದಿಂದ ಕಾಂಗ್ರೆಸ್ಸಿಗರು ಆರ್‌ಟಿಐ ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಂಬಳಕಾಯಿ ಕಳ್ಳ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ಈ ನಾಟಕ ಎಂದು ಟೀಕಿಸಿದ್ದಾರೆ.

ಪೊಲೀಸ್ ಬಲ ಬಳಸಿ ಸತ್ಯದ ಕತ್ತು ಹಿಚುಕಲು ಸಾಧ್ಯವೇ ಇಲ್ಲ. ಹಾದಿಬೀದಿಯಲ್ಲಿ ಜನರ ಕೈಗೆ ಸಿಕ್ಕಿರುವ ದಾಖಲೆಗಳೇ ಮೂಡಾ ಹಗರಣದ ‘ಅಸಲಿ ಕೈ' ಯಾವುದು ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತಿವೆ. ಹಾಗಿದ್ದ ಮೇಲೆ ಸತ್ಯವನ್ನು ಹೆಕ್ಕಿ ತೆಗೆದ ಆರ್‌ಟಿಐ ಕಾರ್ಯಕರ್ತರ ಮೇಲೆ ಸೇಡಿನ ರಾಜಕಾರಣ ಮಾಡುತ್ತಿದೆ ಕಾಂಗ್ರೆಸ್ ಎಂದು ಅವರು ದೂರಿದ್ದಾರೆ.

ದೂರು ನೀಡಿರುವ ಪ್ರಸಂಗ ಹೇಗಿದೆ ಎಂದರೆ, ಬದಲಿ ನಿವೇಶನ ಫಲಾನುಭವಿಗಳು ಪರೋಕ್ಷವಾಗಿ ಸತ್ಯ ಒಪ್ಪಿಕೊಂಡಂತೆ ಆಗಿದೆ. ಅಷ್ಟೇ ಅಲ್ಲ, ಆರ್‌ಟಿಐ ಕಾರ್ಯಕರ್ತರ ಟಾರ್ಗೆಟ್ ಮಾಡಿದಷ್ಟು ಮೂಡಾದ ಮೂಲೆಮೂಲೆಗಳಲ್ಲಿ ಮುಗ್ಗುತ್ತಿರುವ ಸತ್ಯಗಳು ಮತ್ತಷ್ಟು ವ್ಯಘ್ರವಾಗಿ ಹೂಂಕರಿಸುತ್ತವೆ. ಇಂಥ ವ್ಯರ್ಥ ಕೆಲಸ ಬಿಟ್ಟು ಮರ್ಯಾದೆಯಿಂದ ಸತ್ಯವನ್ನು ಎದುರಿಸುವುದು ಸಿಎಂ ಆದವರಿಗೆ ಶೋಭೆ ತರುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News