ಸಾಲ ವಸೂಲಾತಿಗೆ ಕಾನೂನು ಬಾಹಿರ ಕ್ರಮ ನಿಷೇಧಿಸಲು ಸುಗ್ರಿವಾಜ್ಞೆ : ಕಾನೂನು ಸಚಿವ ಎಚ್.ಕೆ.ಪಾಟೀಲ್ ಸ್ಪಷ್ಟನೆ

Update: 2025-02-07 19:45 IST
ಸಾಲ ವಸೂಲಾತಿಗೆ ಕಾನೂನು ಬಾಹಿರ ಕ್ರಮ ನಿಷೇಧಿಸಲು ಸುಗ್ರಿವಾಜ್ಞೆ : ಕಾನೂನು ಸಚಿವ ಎಚ್.ಕೆ.ಪಾಟೀಲ್ ಸ್ಪಷ್ಟನೆ

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌/ಸಚಿವ ಎಚ್‌.ಕೆ.ಪಾಟೀಲ್

  • whatsapp icon

ಬೆಂಗಳೂರು : ಸಾಲ ವಸೂಲಾತಿಗೆ ಕಾನೂನು ಬಾಹಿರ ಕ್ರಮಗಳನ್ನು ಕೈಗೊಳ್ಳುವುದು, ಹಿಂಸೆ ಮಾಡುವುದು ಮತ್ತು ಒತ್ತಡ ತಂತ್ರ ಹೇರುವುದು ಹಾಗೂ ಕಿರುಕುಳಕ್ಕೆ ಕಾರಣವಾಗುವುದನ್ನು ತಡೆಯಲು, ನಿಷೇಧಿಸಲು ಈ ಸುಗ್ರಿವಾಜ್ಞೆ ಪ್ರಸ್ತಾಪಿಸುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿಗೆ ತಡೆಯೊಡ್ಡಲು ಉದ್ದೇಶಿಸಿ ರಾಜ್ಯ ಸರಕಾರ ಕಳುಹಿಸಿಕೊಟ್ಟಿದ್ದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ವಾಪಸ್ ಕಳುಹಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕ್ರಮಕ್ಕೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

ನೊಂದಾಯಿತವಲ್ಲದ ಮತ್ತು ಸಾಲ ನೀಡಲು ಲೈಸೆನ್ಸ್ ಹೊಂದಿರದ ಯಾವುದೇ ವ್ಯಕ್ತಿಯು ಸಾಲ ಕೊಡಲು ಮತ್ತು ಹೆಚ್ಚಿನ ಬಡ್ಡಿ, ಚಕ್ರಬಡ್ಡಿ ಅಥವಾ ದಂಡದ ಬಡ್ಡಿ ವಿಧಿಸಲು ಕಾನೂನಾತ್ಮಕವಾಗಿ ಅಧಿಕಾರ ಹೊಂದಿಲ್ಲ. ಸಾಲವನ್ನು ಖಾಸಗಿಯಾಗಿ, ಲೈಸೆನ್ಸ್ ಇಲ್ಲದೇ ನೀಡಿದರೆ, ಅದಕ್ಕೆ ಹೆಚ್ಚಿನ ಬಡ್ಡಿ ವಸೂಲಿ ಮಾಡಿದರೆ ಅದು ಕಾನೂನು ವಿರೋಧಿ ಕ್ರಮವಾಗಿದೆ. ಅಂತಹ ಸಾಲವು ವಸೂಲಿಗೆ ಅರ್ಹವು ಅಲ್ಲ ಯೋಗ್ಯವು ಅಲ್ಲ ಎಂದು ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಕಾನೂನಾತ್ಮಕ ಪ್ರಕ್ರಿಯೆಯನ್ನು ಕೈಗೊಂಡು ಕಾನೂನಿನ ಪ್ರಕಾರ ವಿಧಿಸಿದ ಬಡ್ಡಿ ಮೇರೆಗೆ ನೀಡಿದ ಸಾಲ ಮಾತ್ರ ವಸೂಲಿಗೆ ಅರ್ಹವೆ ಹೊರತು ಬೇರೆ ಯಾವುದೇ ಅಕ್ರಮ ಸಾಲದ ಮತ್ತು ಬಡ್ಡಿ ವಿಧಿಸಿದ ಸಾಲ ವಸೂಲಾತಿ ಅರ್ಜಿಗಳನ್ನು ವಿಚಾರಣೆಗೆ ತೆಗೆದುಕೊಳ್ಳಲು ಕಾನೂನಾತ್ಮಕವಾಗಿ ನ್ಯಾಯಾಲಯಗಳಿಗೆ ಸಾಧ್ಯವೇ ಇಲ್ಲ ಎಂದು ಅವರು ಹೇಳಿದ್ದಾರೆ.

ಕಾನೂನಾತ್ಮಕವಾಗಿ ನೊಂದಾಯಿತ ಸಂಸ್ಥೆ ಅಥವಾ ವ್ಯಕ್ತಿಗಳು ನಿಯಮಾನುಸಾರ ನೈಜ ಸಾಲ ನೀಡಿದವರು ವಸೂಲಿ ಮಾಡಬಾರದೆಂದು ಅಥವಾ ಅಂತಹ ಸಾಲಗಳು ವಸೂಲಿಗೆ ಅರ್ಹವಲ್ಲವೆಂದು ಸರಕಾರ ರಾಜ್ಯಪಾಲರಿಗೆ ಸಲ್ಲಿಸಿರುವ ಸುಗ್ರಿವಾಜ್ಞೆಯಲ್ಲಿ ಎಲ್ಲಿಯೂ ಹೇಳಿಲ್ಲ. ಕೇವಲ ಸಾಲ ವಸೂಲಾತಿಗೆ ಕಾನೂನು ಬಾಹಿರ ಕ್ರಮಗಳನ್ನು ಕೈಗೊಳ್ಳುವುದು, ಹಿಂಸೆ ಮಾಡುವುದು ಮತ್ತು ಒತ್ತಡ ತಂತ್ರ ಹೇರುವುದು ಹಾಗೂ ಕಿರುಕುಳಕ್ಕೆ ಕಾರಣವಾಗುವುದನ್ನು ತಡೆಯಲು, ನಿಷೇಧಿಸಲು ಈ ಸುಗ್ರಿವಾಜ್ಞೆ ಪ್ರಸ್ತಾಪಿಸುತ್ತದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ನೈಸರ್ಗಿಕ ನ್ಯಾಯ ಮತ್ತು ಯಾವುದೇ ವ್ಯಕ್ತಿಯ ಹಕ್ಕುಗಳಿಗೆ ಮತ್ತು ಕಾನೂನಾತ್ಮಕ ಹೋರಾಟಕ್ಕೆ ಮೂಲಭೂತ ಹಕ್ಕುಗಳಿಗೆ ಧಕ್ಕೆತರುವಂತಹ ಯಾವುದೇ ಕ್ರಮ ಸುಗ್ರಿವಾಜ್ಞೆಯಲ್ಲಿ ಪ್ರಸ್ತಾಪಿಸಿಯೇ ಇಲ್ಲ. ಸಾಲ ಕೊಟ್ಟಿರುವ ಮೊತ್ತ ಪರಿಗಣಿಸಿ ದಂಡ ಅಥವಾ ದಂಡನೆ ವಿಧಿಸಿಲ್ಲ. ಸಾಲ ವಸೂಲಾತಿ ಪ್ರಕ್ರಿಯೆ ಸಂದರ್ಭದಲ್ಲಿ ಒತ್ತಡ ತಂತ್ರ, ಹಿಂಸೆ, ಕಿರುಕುಳ ನೀಡುವ ಮೂಲಕ ವಸೂಲಾತಿಯ ಕ್ರಮಗಳಿಗೆ ದಂಡ ಮತ್ತು ದಂಡನೆಯನ್ನು ಪ್ರಸ್ತಾಪಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಾಲ ವಸೂಲಾತಿಯ ಸಂದರ್ಭದಲ್ಲಿ ಕೈಗೊಳ್ಳಬಹುದಾದ ನಿರ್ಧಿಷ್ಟ ಅಪರಾಧಗಳನ್ನು ಮಾತ್ರ ಈ ಕಾನೂನಿನ ವ್ಯಾಪ್ತಿಗೆ ತರಲಾಗಿದೆ. ಬೇರೆ ಕಾನೂನುಗಳಲ್ಲಿ ಏನೇ ಅವಕಾಶಗಳಿದ್ದರೂ ಅಕ್ರಮ ಸಾಲ ವಸೂಲಾತಿಯ ಸಂದರ್ಭದಲ್ಲಿ ಮಾಡಲಾದ ಅಪರಾಧಗಳನ್ನು ನಿರ್ಧಿಷ್ಟಪಡಿಸುವುದು ಮತ್ತು ಅವುಗಳಿಗೆ ದಂಡನೆ ವಿಧಿಸುವುದು ಸರಕಾರದ ಉದ್ದೇಶವಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಕಿರು ಸಾಲ ನೀಡುವ ಸಂಸ್ಥೆಗಳು ಯಾವುದೇ ಭದ್ರತೆಯನ್ನು ಪಡೆಯದೇ ಸಾಲ ನೀಡಬೇಕೆಂಬುದು ರಿಸರ್ವ್ ಬ್ಯಾಂಕಿನ ನಿಯಮಗಳಲ್ಲಿ ಸ್ಪಷ್ಟವಾಗಿ ವಿಧಿಸಲಾಗಿದೆ. ಆದುದರಿಂದ ಭದ್ರತೆಯನ್ನು ಪಡೆಯದೇ ಕಿರು ಸಾಲ ನೀಡಬೇಕು ಹಾಗೂ ಒಂದು ವೇಳೆ ಅಕ್ರಮವಾಗಿ ಭದ್ರತೆ ಪಡೆದಿದ್ದರೆ ಅಂತಹ ಭದ್ರತೆಗಳನ್ನು ವಾಪಸ್ಸು ನೀಡುವುದು ಕಿರು ಸಾಲ ನೀಡುವ ಸಂಸ್ಥೆಯ ಕರ್ತವ್ಯವಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಕಿರು ಸಾಲ ನೀಡುವ ವ್ಯವಸ್ಥೆಯು ಬ್ಯಾಂಕಿಂಗ್ ತಲುಪದ ದೂರದ ಪ್ರದೇಶಗಳಿಗಾಗಿ ರೂಪಿಸಲಾಗಿದೆ. ಕಿರು ಸಾಲ ನೀಡುವ ಮತ್ತು ಸಾಲ ನೀಡುವುದರ ಮೇಲೆ ಪರಿಣಾಮ ಬೀರುವ ಯಾವುದೇ ಅಡೆತಡೆಯನ್ನು ಈ ಸುಗ್ರಿವಾಜ್ಞೆ ಉಂಟು ಮಾಡುವುದಿಲ್ಲ. ಸದ್ಭಾವನೆಯನ್ನು ಉಂಟು ಮಾಡುವ ವಾತಾವರಣ ಸೃಷ್ಟಿಸಬೇಕಾದ ಜವಾಬ್ದಾರಿ ಕಿರು ಸಾಲ ನೀಡುವ ಸಂಸ್ಥೆಯ ಮೇಲು ಇದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಸ್ವಸಹಾಯ ಸಂಘಗಳ ವ್ಯಾಪಾರದ ಭವಿಷ್ಯದ ಮೇಲೆ ಸುಗ್ರಿವಾಜ್ಞೆಯ ಪರಿಣಾಮ ಇರುವುದಿಲ್ಲ ಅಥವಾ ಅದು ಶೂನ್ಯವಾಗುತ್ತದೆ. ಕೇವಲ ಸಾಲ ನೀಡಿದ ಸಂಸ್ಥೆಯ ವಸೂಲಾತಿಯ ಕಾನೂನು ಬಾಹಿರ ಕ್ರಮಗಳನ್ನು ಮಾತ್ರ ದಂಡನಿಯ ಅಪರಾಧವೆಂದು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನೊಂದಾಯಿತ ಸಂಸ್ಥೆಗಳ, ಬ್ಯಾಂಕುಗಳ ಮತ್ತು ಬ್ಯಾಂಕಿಗೇತರ ಹಣಕಾಸು ಸಂಸ್ಥೆಗಳ ಸಾಲ ನೀಡುವಿಕೆ ಮತ್ತು ವಸೂಲಾತಿ ಪ್ರಕ್ರಿಯೆಯ ಬಗ್ಗೆ ಸುಗ್ರಿವಾಜ್ಞೆಯಲ್ಲಿ ಉಲ್ಲೇಖಿಸಿಲ್ಲ. ರಿಸರ್ವ್ ಬ್ಯಾಂಕಿನ ನಿಬಂಧನೆಗಳು ಲಭ್ಯವಿರುವಾಗ ನೊಂದಾಯಿತ ಸಂಸ್ಥೆಗಳಿಗೆ ಈ ಸುಗ್ರಿವಾಜ್ಞೆ ವ್ಯಾಪ್ತಿಯಿಂದ ಹೊರಗಿಟ್ಟಿರುವುದು ಕಾನೂನಾತ್ಮಕ ಕ್ರಮವಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಸಾಲ ನೀಡಿದ ವ್ಯಕ್ತಿ ವಸೂಲಾತಿಗೆ ಕಾನೂನಿಗೆ ಗೊತ್ತಿರುವ ಮಾರ್ಗವನ್ನು ಮಾತ್ರ ಅನುಸರಿಸಬೇಕೆಂದು ನಿಬಂಧನೆ ವಿಧಿಸಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯಪಾಲರು ಉಲ್ಲೇಖಿಸಿರುವ ಕಾಯ್ದೆಗಳಲ್ಲಿ ಯಾವುದೇ ಗಂಭೀರ ಮತ್ತು ನಿಯಂತ್ರಣ ಮಾಡುವ ಪರಿಣಾಮಕಾರಿಯಾದ ಅಸ್ತ್ರ ಇಲ್ಲದೇ ಇದ್ದಿದರಿಂದ ಸಮಾಜದ ಕೆಳಸ್ತರದ ವ್ಯಕ್ತಿಗಳಿಗೆ ಮತ್ತು ಅಬಲರಿಗೆ ಸಬಲವಾದ ಅಸ್ತ್ರವನ್ನು ಕಾನೂನಾತ್ಮಕವಾಗಿ ಒದಗಿಸಬೇಕೆಂಬ ಉದ್ದೇಶ ಸರಕಾರಕ್ಕಿದೆ ಎಂದು ಅವರು ಹೇಳಿದ್ದಾರೆ.

ಈಗಿರುವ ಪರಿಹಾರಗಳು ಕಠಿಣಾತಿ ಕಠಿಣ ಕ್ರಮಗಳ ಬಗ್ಗೆ ಮತ್ತು ಬಾಧಿತ ಜನರ ಹಿತಾಸಕ್ತಿ ಕಾಪಾಡಲು ಪ್ರಸ್ತುತ ಕಾಯ್ದೆಗಳಲ್ಲಿ ವಿಫುಲವಾದ ಅವಕಾಶವಿಲ್ಲ. ರಿಸರ್ವ್ ಬ್ಯಾಂಕಿನ ಮಾರ್ಗದರ್ಶಿಗಳು, ನೊಂದಾವಣಾ ನಿಬಂಧನೆಗಳು ಕೇವಲ ನೊಂದಾಯಿತ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗುತ್ತವೆ. ತುರ್ತು ಸಂದರ್ಭದಲ್ಲಿ ಸರಕಾರವು ಈ ಸುಗ್ರಿವಾಜ್ಞೆಯ ಕರಡನ್ನು ಸಿದ್ಧಪಡಿಸಿದೆ. ಸಾಲ ನೀಡುವವರ ಹಿತಗಳನ್ನು ನಿಯಮಗಳ ಅಡಿಯಲ್ಲಿ ರಕ್ಷಿಸಲಾಗಿದೆ. ಸಾಲ ವಸೂಲಾತಿಯನ್ನು ನಿಷಷೇಧಿಸಿಲ್ಲ. ನಿಷೇಧಿತ ಚಟುವಟಿಕೆಗಳ ಮೂಲಕ ಸಾಲ ವಸೂಲಾತಿಯನ್ನು ತಡೆಯಲು ತುರ್ತಾಗಿ ಸುಗ್ರಿವಾಜ್ಞೆ ಅಂತಿಮಗೊಳಿಸಿದೆ ಎಂದು ಎಚ್.ಕೆ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

ಈ ಸುಗ್ರಿವಾಜ್ಞೆಯು ಮಸೂದೆಯಾಗಿ ವಿಧಾನಮಂಡಲದಲ್ಲಿ ಚರ್ಚೆಗೆ ಸಹಜವಾಗಿ ಮಂಡಿಸಲಾಗುತ್ತದೆ. ಆ ಸಂದರ್ಭದಲ್ಲಿ ವಿಧಾನಮಂಡಲದ ಅಭಿಪ್ರಾಯಗಳನ್ನು ಕ್ರೋಢಿಕರಿಸಿ ವ್ಯಾಪಕ ಪರಿಣಾಮ ಬೀರುವ ಕಾಯ್ದೆಯನ್ನು ಅಂತಿಮಗೊಳಿಸಲಾಗುತ್ತದೆ. ತುರ್ತು ಸಂದರ್ಭಗಳಲ್ಲಿ ಸುಗ್ರಿವಾಜ್ಞೆಯ ಮೂಲಕ ಜನರ ನೆರವಿಗೆ ಬರಬೇಕಾದ ಸಂವಿಧಾನದತ್ತ ಅವಕಾಶವನ್ನು ಬಳಕೆ ಮಾಡಿಕೊಂಡು ಈ ಸುಗ್ರಿವಾಜ್ಞೆ ಜಾರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News