ನಾನು ಬಸವಾದಿ ಶರಣರ ಅಪ್ಪಟ ಅನುಯಾಯಿ: ಸಿಎಂ ಸಿದ್ದರಾಮಯ್ಯ

Update: 2024-02-02 11:36 GMT

Photo: X/@CMofKarnataka

ವಿಜಯಪುರ: ನಾನು ಬಸವಾದಿ ಶರಣರ ಅನುಯಾಯಿ. ಮೌಡ್ಯ, ಕಂದಾಚಾರ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಆರಂಭಿಸಿದ್ದರಿಂದ ನಾನು ಅವರ ಅನುಯಾಯಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಮುದ್ದೇಬಿಹಾಳ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸರಕಾರದ ಐದು ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು.

ದುಡಿಯುವವರು ಯಾರೋ, ದುಡಿದು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗಲಾಡಿಸಲು ಬಸವಣ್ಣರ ನೇತೃತ್ವದಲ್ಲಿ ವಚನ ಕ್ರಾಂತಿ ಶುರುವಾಯಿತು. ಈ ಕಾರಣಕ್ಕೆ ನಾನು ಬಸವಾದಿ ಶರಣರ ಅನುಯಾಯಿ ಎಂದು ಹೇಳಿದರು.

ಆದರೆ, ಕ್ರಾಂತಿಯ ಪ್ರಭಾವದಲ್ಲಿ ಸಮಾಜ ಪೂರ್ಣ ಬದಲಾಗುವ ಮೊದಲೇ ವಚನ ಕ್ರಾಂತಿಗೆ ಅಡ್ಡಗಾಲು ಹಾಕಿದರು. ಆದ್ದರಿಂದ ಇನ್ನೂ ಬಸವಣ್ಣನವರ ಆಶಯದ "ಇವ ನಮ್ಮವ ಇವ ನಮ್ಮವ" ಎನ್ನುವ ಆಶಯ ಈಡೇರದೆ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು , ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಒಂದೇ ದಿನ 227 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಿದ್ದೇವೆ. ಅಪ್ಪಾಜಿ ನಾಡಗೌಡರು ಅತ್ಯಂತ ಹಿರಿಯ ಸಭ್ಯ ರಾಜಕಾರಣಿ. ಅವರಿಗೆ ಸಚಿವರಾಗುವ ಅರ್ಹತೆ, ಅನುಭವ ಎರಡೂ ಇದೆ. ನಾಡಗೌಡರ ಕಾರಣದಿಂದ ಮುದ್ದೇಬಿಹಾಳ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾರ್ಚ್ 20 ರಂದು ನಾನು ಮುದ್ದೆಬಿಹಾಳ ಚುನಾವಣಾ ಪ್ರಚಾರಕ್ಕೆ ಬಂದಿದ್ದೆ. ಅವತ್ತು ನಾನು ಮುದ್ದೇ ಬಿಹಾಳದಲ್ಲಿ ಕೊಟ್ಟ ಮಾತಿನಂತೆ ಎಲ್ಲಾ ಗ್ಯಾರಂಟಿಗಳನ್ನೂ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ನಾನು ಕೊಟ್ಟಿದ್ದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಈಗಲೂ ಅಷ್ಟೆ. ಬಸವಾದಿ ಶರಣರು ನುಡಿದಂತೆ ನಡೆದರು. ನಾವೂ ಬಸವಾದಿ ಶರಣರ ಮಾರ್ಗದಲ್ಲಿ ನಡೆಯುತ್ತಿದ್ದೇವೆ ಎಂದು ವಿವರಿಸಿದರು.

ಶರಣ ಶ್ರೇಷ್ಠ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 12 ಮಂದಿ ಶರಣ ಸ್ವಾಮೀಜಿಗಳು ವೇದಿಕೆಯಲ್ಲೇ ಅಭಿನಂದಿಸಿ, ಸನ್ಮಾನಿಸಿ ಆಶೀರ್ವದಿಸಿದರು

ಕ್ಷೇತ್ರದ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ಕೃಷಿ ಸಚಿವರಾದ ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಶಾಸಕರುಗಳಾದ ಯಶವಂತರಾಯಗೌಡ ವ್ಹಿ ಪಾಟೀಲ್, ಹಣಮಂತ ನಿರಾಣಿ, ಬಸವನಗೌಡ ಆರ್ ಪಾಟೀಲ್, ಸುನಿಲಗೌಡ ಬಿ ಪಾಟೀಲ, ಪೊ.ಹೆಚ್.ಪೂಜಾರ, ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ಮಲ್ಲಪ್ಪ ಮನಗೂಳಿ, ಭೀಮನಗೌಡ ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿದ್ಯಾರಾಣಿ ತುಂಗಲ್ ಸೇರಿ ಹಲವು ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News