ರಾಜ್ಯಗಳ ಶಕ್ತಿ ಕುಂದಿದರೆ ರಾಷ್ಟ್ರದ ಶಕ್ತಿ ಕುಂದುತ್ತದೆ : ಕೇಂದ್ರದ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ

Update: 2024-02-05 11:38 GMT

ಮಡಿಕೇರಿ : ದಕ್ಷಿಣ ಭಾರತದ ರಾಜ್ಯಗಳಿಗೆ ಬಜೆಟ್ ನಲ್ಲಿ ಅಗತ್ಯ ಅನುದಾನ ಮೀಸಲಿಡದೆ ಕೇಂದ್ರ ಸರಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ರಾಜ್ಯಗಳ ಶಕ್ತಿ ಕುಂದಿದರೆ ರಾಷ್ಟ್ರದ ಶಕ್ತಿ ಕುಂದುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರದ ಶಕ್ತಿ ವೃದ್ಧಿಗೆ ಕೇಂದ್ರ ಸರಕಾರ ರಾಜ್ಯಗಳಿಗೆ  ನೆರವು ನೀಡುವ ಅಗತ್ಯವಿದೆ ಎಂದರು.

ಕರ್ನಾಟಕ  ಆದಾಯ ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿದೆ, ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೂ ಕೇಂದ್ರ ಸರಕಾರ ನಮ್ಮ ರಾಜ್ಯಕ್ಕೆ ಸೇರಬೇಕಾದ ಆರ್ಥಿಕ ಪಾಲನ್ನು ನೀಡುತ್ತಿಲ್ಲವೆಂದು ಆರೋಪಿಸಿದರು.

2017 ರ ಬಜೆಟ್ ನಲ್ಲಿ 52 ಸಾವಿರ ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿದ್ದ ಕೇಂದ್ರ ಸರಕಾರ ಈ ಬಾರಿಯೂ ಅಷ್ಟೇ ಮೊತ್ತವನ್ನು ನೀಡಿದೆ. ಆದರೆ ಬಜೆಟ್ ನ ಗಾತ್ರ ಎರಡು ಪಟ್ಟು ಹೆಚ್ಚಾಗಿದೆ, ಗಾತ್ರ ಹೆಚ್ಚಾದಂತೆ ನಮ್ಮ ಪಾಲಿನ ಹಣವನ್ನೂ ಹೆಚ್ಚಿಗೆ ನೀಡಬೇಕಾಗಿತ್ತು. ಆದರೆ ಕೇಂದ್ರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ಬರ ಪರಿಸ್ಥಿತಿಯ ಹಿನ್ನೆಲೆ ಪರಿಹಾರ ಕೋರಿ ಮನವಿ ಸಲ್ಲಿಸಲಾಗಿತ್ತು. ರೈತರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರಕಾರ ಇಲ್ಲಿಯವರೆಗೆ ಹಣ ನೀಡಿಲ್ಲ. ಮೇಕೆದಾಟು, ಮಹಾದಾಯಿ ಸೇರಿದಂತೆ ಬೃಹತ್ ನೀರಾವರಿ ಯೋಜನೆಗಳಿಗೆ ಕೇಂದ್ರ ಅಗತ್ಯ ಸಹಕಾರವನ್ನು ನೀಡುತ್ತಿಲ್ಲ, ನಮ್ಮ ನದಿ ನೀರನ್ನು ನಾವು ಬಳಸಿಕೊಳ್ಳಲು ಅವಕಾಶ ನೀಡುತ್ತಿಲ್ಲ ಎಂದು ಟೀಕಿಸಿದರು.

ಕೇಂದ್ರ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ, ಅನುದಾನದ ವಿಚಾರದಲ್ಲಿ ಕಟ್ಟುಕಥೆ ಹೇಳುತ್ತಿದೆ. ಕೇಂದ್ರದ ಮಲತಾಯಿ ಧೋರಣೆ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧರಿದ್ದೇವೆ, ಅಧಿವೇಶನದಲ್ಲಿ ಎಳೆ ಎಳೆಯಾಗಿ ವಿವರಿಸುತ್ತೇವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಕೇಂದ್ರ ಸರಕಾರದ ಧೋರಣೆಯನ್ನು ಖಂಡಿಸಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳು ಪ್ರತಿಭಟನೆ ನಡೆಸುತ್ತಿವೆ. ಕರ್ನಾಟಕದಿಂದಲೂ ಫೆ.7 ರಂದು ದೆಹಲಿ ಚಲೋ ಹೋರಾಟ ನಡೆಸಲಾಗುತ್ತಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News