ವಾಲ್ಮೀಕಿ ನಿಗಮದಲ್ಲಿ ಅಕ್ರಮ | ಕಾಂಗ್ರೆಸ್ ಹೈಕಮಾಂಡ್‌ನ ಮೂಗಿನ ನೇರಕ್ಕೆ ಹಣ ವರ್ಗಾವಣೆ ಆಗಿದೆ : ಎಚ್‌ಡಿಕೆ

Update: 2024-06-03 12:18 GMT

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, "ಎಲ್ಲವನ್ನೂ ಸಚಿವ ನಾಗೇಂದ್ರ ಅವರ ತಲೆಗೆ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಅಕ್ರಮದಲ್ಲಿ ಸರ್ಕಾರದ ಇಡೀ ಸಂಪುಟವೇ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಎಲ್ಲಾ ನಿಗಮ ಮಂಡಳಿಗಳಲ್ಲಿ ಇರುವ ಹಣದ ಬಗ್ಗೆ ಜನರ ಮುಂದೆ ಲೆಕ್ಕ ಇಡಬೇಕು" ಎಂದು ಒತ್ತಾಯ ಮಾಡಿದರು.

ʼನಿಗಮದ ಹಣ ಹಲವಾರು ನಕಲಿ ಖಾತೆಗಳಿಗೆ ವರ್ಗಾವಣೆ ಆಗಿದೆ. ಈ ಬಗ್ಗೆ ದಾಖಲೆಗಳೇ ಬಹಿರಂಗ ಆಗಿವೆ. ಕೇವಲ ತೆಲಂಗಾಣಕ್ಕೆ ಮಾತ್ರ ಈ ಹಣ ಯಾಕೆ ಹೋಯಿತು?. ಯಾರು ವರ್ಗಾವಣೆ ಮಾಡಿಸಿದರು?. ಇಲ್ಲಿ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಅದ ಕೆಲ ಹೊತ್ತಿನಲ್ಲಿ ನಕಲಿ ಬ್ಯಾಂಕ್ ಖಾತೆಗಳಿಂದ ರಾಕೆಟ್ ವೇಗದಲ್ಲಿ ಅಷ್ಟೂ ದೊಡ್ಡ ಮೊತ್ತ ಹಣವನ್ನು ಡ್ರಾ ಮಾಡಲಾಗಿದೆ. ಇದು ಬಹುದೊಡ್ಡ ಅಕ್ರಮ. ಸಿಎಂ ಸೇರಿದಂತೆ ಇಡೀ ಸಂಪುಟವೇ ಶಾಮೀಲಾಗಿದೆʼ ಎಂದು ಅವರು ನೇರ ಆರೋಪ ಮಾಡಿದರು.

ʼಕೇವಲ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಮಾತ್ರ ಹಣ ವರ್ಗಾವಣೆ ಆಗಿರಲು ಸಾಧ್ಯವಿಲ್ಲ. ಬೇರೆ ಬೇರೆ ಇಲಾಖೆಗಳ ನಿಗಮ ಮಂಡಳಿಗಳ ಖಾತೆಗಳಿಂದ ಹಣ ವರ್ಗಾವಣೆ ಆಗಿರುವ ಸಾಧ್ಯತೆ ಇದೆ. ತೆಲಂಗಾಣ ಚುನಾವಣೆಗೆ ರಾಜ್ಯದಿಂದ ಯಾರೆಲ್ಲ ಉಸ್ತುವಾರಿಗಳು ಇದ್ದರು?. ಅದನ್ನೆಲ್ಲ ಗಮನಿಸಬೇಕುʼ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕಾಂಗ್ರೆಸ್ ಹೈಕಮಾಂಡ್ ಮಾಡಿಸಿದೆ :

ದಿಲ್ಲಿ ಕಾಂಗ್ರೆಸ್ ಹೈಕಮಾಂಡ್ ಮೂಗಿನ ನೇರದಲ್ಲೇ ಈ ಅಕ್ರಮ ಹಣದ ವರ್ಗಾವಣೆ ನಡೆದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಹಣ ವರ್ಗಾವಣೆ ಆಗಿದೆ. 200 ಪರ್ಸೆಂಟ್ ಕಾಂಗ್ರೆಸ್‌ನ ಹೈಕಮಾಂಡ್ ಗಮನಕ್ಕೆ ಬಂದೇ ಇದೆಲ್ಲಾ ನಡೆದಿದೆ. ವಿವಿಧ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷ ರಾಜ್ಯದಿಂದಲೇ ಹಣ ಪೂರೈಕೆ ಮಾಡಿದೆ ಎನ್ನುವುದಕ್ಕೆ ಇದೇ ಸಾಕ್ಷ್ಯ ಎಂದು ಅವರು ಕಾಂಗ್ರೆಸ್ ಹೈ ಕಮಾಂಡ್ ಮೇಲೆಯೇ ನೇರ ಆರೋಪ ಮಾಡಿದರು.

ಎಲ್ಲಾ ನಿಗಮ ಮಂಡಳಿ ಹಣ ವ್ಯವಹಾರದ ಬಗ್ಗೆ ತನಿಖೆಯಾಗಲಿ:

ಈ ಹಗರಣಕ್ಕೆ ಸಂಬಂಧಿಸಿ 14 ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ. ಆ ಖಾತೆಗಳನ್ನು ತೆರೆದವರು ಯಾರು?. ಯಾವೆಲ್ಲ ಕಾಣದ ಕೈಗಳು ಇವುಗಳ ಹಿಂದೆ ಇವೆ?. ಎಲ್ಲಾ ಹೊರಗೆ ಬರಬೇಕು. ಈ ಸರ್ಕಾರಕ್ಕೆ ನಾಚಿಕೆ ಮಾನ ಮರ್ಯಾದೆ ಎನ್ನುವುದು ಇದೆಯಾ?. ಎಲ್ಲಾ ನಿಗಮ ಮಂಡಳಿಗಳ ಹಣದ ವ್ಯವಹಾರದ ಬಗ್ಗೆ ತನಿಖೆ ನಡೆದರೆ ಇನ್ನೆಷ್ಟು ಅಕ್ರಮಗಳು ಹೊರಗೆ ಬರುತ್ತವೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕಳವಳ ವ್ಯಕ್ತಪಡಿಸಿದರು.

ಎಸ್ ಐಟಿಯಿಂದ ಸಾಕ್ಷ್ಯ ನಾಶ :

ಹಗರಣದಲ್ಲಿ ಯೂನಿಯನ್ ಬ್ಯಾಂಕ್ ಇರುವುದರಿಂದ ಸಿಬಿಐ ತನಿಖೆ ಆಗಿಯೇ ಆಗುತ್ತದೆ. ಆದರೆ, ರಾಜ್ಯ ಸರ್ಕಾರ ತರಾತುರಿಯಲ್ಲಿ ಎಸ್ ಐಟಿ ರಚನೆ ಮಾಡಿದೆ. ಎಸ್ ಐಟಿ ಆದರೆ ದಾಖಲೆ ನಾಶ ಮಾಡಬಹುದು, ಕಡತಗಳನ್ನು ಸುಟ್ಟು ಹಾಕಬಹುದು. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್ ಅವರ ಮನೆಯಿಂದ ಪೆನ್‌ ಡ್ರೈವ್ ತೆಗೆದುಕೊಂಡು  ಬಂದರಲ್ಲ, ಆ ಪೆನ್ ಡ್ರೈವ್ ಎಲ್ಲಿದೆ ಈಗ? ಎಂದು ಎಚ್‌ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News