‘ಕನ್ನಡಿಗರ ಉದ್ಯೋಗ ಮೀಸಲಾತಿ’ ಕಾಯ್ದೆ ಜಾರಿಗೊಳಿಸಿ : ಕರವೇ ಅಧ್ಯಕ್ಷ ನಾರಾಯಣಗೌಡ

Update: 2024-07-01 14:35 GMT

ಬೆಂಗಳೂರು : ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋವಕಾಶ ನೀಡಲಾಗುತ್ತಿದ್ದು, ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಅದಕ್ಕಾಗಿ ಕನ್ನಡಿಗರಿಗೆ ಎಲ್ಲ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವ ಕಾಯ್ದೆ ಹಾಗೂ ಡಾ.ಸರೋಜಿ ಮಹಿಷಿ ವರದಿಯನ್ನು ಅನುಷ್ಟಾನಕ್ಕೆ ಕ್ರಮ ವಹಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.

ಸೋಮವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಕರವೇ ವತಿಯಿಂದ ನಡೆದ ಬೃಹತ್ ಧರಣಿಯಲ್ಲಿ ಮಾತನಾಡಿದ ಅವರು, ‘ಬೇರೆ ರಾಜ್ಯಗಳಿಂದ ಉದ್ಯೋಗಕ್ಕಾಗಿ ಬೆಂಗಳೂರಿಗೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಅದಕ್ಕಾಗಿ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಶೇ.100ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಮೇಲ್ದರ್ಜೆ ಹುದ್ದೆಗಳಲ್ಲಿ ಶೇ.80ರಷ್ಟು ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.

ಎಲ್ಲ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎನ್ನುವ ಸರೊಜಿನಿ ಮಹಿಷಿ ವರದಿ 40 ವರ್ಷಗಳ ಹಿಂದೆ ಜಾರಿಯಾಗಬೇಕಿತ್ತು. ಆದರೆ ಅದು ಜಾರಿಯಾಗಿಲ್ಲ. ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ಯಾವುದಕ್ಕೆ ಮಣಿದರೋ ಗೊತ್ತಿಲ್ಲ. ಅದಕ್ಕಾಗಿ ನಿರಂತರ ಹೋರಾಟ ಮಾಡುತ್ತಿದ್ದೇವೆ. ಎಲ್ಲ ಸರಕಾರದ ಮುಂದೆ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವ ಬೇಡಿಕೆ ಇಟ್ಟಿದ್ದೆವು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೊಳಿಸುತ್ತಾರೆ ಎನ್ನುವ ನಂಬಿಕ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದೇ ವೇಳೆ ಕಲಾವಿದರಾದ ಉಮಾ ವೈ.ಜಿ, ಮೋಹನ್ ಕುಮಾರ್, ಗುರುರಾಜ್ ಹೊಸಕೋಟೆ ಅವರು ಹೋರಾಟ ಹಾಡು ಹಾಡಿದರು. ಧರಣಿಯಲ್ಲಿ ವಿವಿಧ ಕನ್ನಡಪರ ಸಂಘಟನೆ ಮುಖಂಡರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಭಾಗವಹಿಸಿದ್ದರು.

‘ಮಹಿಷಿ ವರದಿ ಜಾರಿಗೊಳಿಸಿ ಎನ್ನುವುದು ಒಂದು ಭಾಗವಾಗಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ವಿಶೇಷ ಮೀಸಲಾತಿ ನೀಡುವ ಕಾಯ್ದೆ ಜಾರಿಗೊಳಿಸುವಂತೆ ಕರವೇ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ. ಅದು ಸಂವಿಧಾನಾತ್ಮಕವಾಗಿ ಸರಿಯೇ ಎಂಬುದನ್ನು ರಾಜ್ಯದ ಅಡ್ವೋಕೇಟ್ ಜನರಲ್ ಜತೆ ಚರ್ಚಿಸುತ್ತೇನೆ’

-ಸಿದ್ದರಾಮಯ್ಯ, ಮುಖ್ಯಮಂತ್ರಿ

ಕಾಯ್ದೆ ಜಾರಿಯಾಗುವ ವಿಶ್ವಾಸ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡದ ಬಗ್ಗೆ ಕಾಳಜಿ ಇದ್ದು, ಅವರು ಮನವಿ ಸ್ವೀಕರಿಸಿ, ಕನ್ನಡದ ವಿಚಾರದಲ್ಲಿ ರಾಜಿಯಾಗುವುದಿಲ್ಲ. ಕಾನೂನು ತಜ್ಞರ ಜತೆ ಚರ್ಚಿಸಿ ಶೀಘ್ರವಾಗಿ ತೀರ್ಮಾನ ಮಾಡುತ್ತೇವೆ ಎಂಬ ಭರವಸೆ ನೀಡಿದ್ದಾರೆ. ಕಾಯ್ದೆ ಜಾರಿಯಾಗುವ ವಿಶ್ವಾಸವೂ ಇದೆ ಎಂದು ಸಿಎಂಗೆ ಮನವಿ ಸಲ್ಲಿಸಿದ ನಂತರ ಟಿ.ಎ.ನಾರಾಯಣಗೌಡ ಪ್ರತಿಕ್ರಿಯಿಸಿದರು.

 ಹಕ್ಕೊತ್ತಾಯಗಳು: ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆಯ ಅನ್ವಯ ರಾಜ್ಯ ಸರಕಾರ ಬಲಿಷ್ಟವಾದ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು.

► ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಹಾಗೂ ಇತರ ಹುದ್ದೆಯಲ್ಲಿ ಶೇ.80ರಷ್ಟು ಉದ್ಯೋಗ ಮೀಸಲಿಡಬೇಕು.

► ರಾಜ್ಯ ಸರಕಾರಿ ಸಂಸ್ಥೆ ಹಾಗೂ ಸಾರ್ವಜನಿಕ ವಲಯದಲ್ಲಿ ಶೇ.100ರಷ್ಟು ಉದ್ಯೋಗ ಮೀಸಲಾತಿ ನೀಡಬೇಕು.

► ಕೇಂದ್ರ ಸರಕಾರದ ಇಲಾಖೆಗಳಲ್ಲಿ ಸಿ ಮತ್ತು ಡಿ ಉದ್ಯೋಗದಲ್ಲಿ ಶೇ.90ರಷ್ಟು ಉದ್ಯೋಗ ಕನ್ನಡಿಗರಿಗೆ ನೀಡಬೇಕು.

► ರಾಜ್ಯ ಸರಕಾರ ರೂಪಿಸುವ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು. ಕಾನೂನು ಸಮಸ್ಯೆ ಎದುರಿಸಲು ವಕೀಲರ ತಂಡ ಸಿದ್ಧಪಡಿಸಬೇಕು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News