ಎಸ್‍ಸಿ-ಎಸ್‍ಟಿ ಮೀಸಲು ಹಣ ಬಳಕೆಗೆ ಪಂಚತಂತ್ರ-2 ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

Update: 2023-07-14 14:00 GMT

ಬೆಂಗಳೂರು, ಜು.14: ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಲು ಅನುಕೂಲವಾಗುವಂತೆ ಪಂಚತಂತ್ರ-2 ತಂತ್ರಜ್ಞಾನವನ್ನು ಮುಂದಿನ ತಿಂಗಳಿನಿಂದ ಜಾರಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಸದಸ್ಯ ಡಾ.ತಿಮ್ಮಯ್ಯ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಂಚತಂತ್ರ-2 ತಂತ್ರಜ್ಞಾನ ಅಳವಡಿಕೆ ಮಾಡುವುದರಿಂದ ಯಾವ ಪಂಚಾಯಿತಿಯಲ್ಲಿ ಎಷ್ಟು ಹಣವಿದೆ. ಎಷ್ಟು ಹಣ ಖರ್ಚು ಮಾಡಿದ್ದಾರೆ. ಬಾಕಿ ಉಳಿದಿರುವ ಹಣ ಯಾಕೆ ಖರ್ಚು ಮಾಡಿಲ್ಲ ಎನ್ನುವ ಮಾಹಿತಿ ಆನ್‍ಲೈನ್‍ನಲ್ಲಿ ಲಭ್ಯವಾಗಲಿದ್ದು, ಇದರಿಂದ ಲೋಪ ಎದುರಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು.

2022-23ನೆ ಸಾಲಿನಲ್ಲಿ ರಾಜ್ಯಾದ್ಯಂತ 716.55 ಕೋಟಿ ರೂ.ಹಣವನ್ನು ಪರಿಶಿಷ್ಟ ಜಾತಿ ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಡಲಾಗಿತ್ತು. ಆದರೆ, 501ಕೋಟಿ ರೂ. ಮಾತ್ರ ಖರ್ಚು ಮಾಡಿದ್ದಾರೆ. ಇನ್ನೂ 217 ಕೋಟಿ ರೂ.ಗೂ ಹೆಚ್ಚು ಹಣ ಬಾಕಿ ಇದೆ. ಹಿಂದಿನ ಸರಕಾರ ಈ ಹಣದ ಬಗ್ಗೆ ಸಮರ್ಪಕವಾಗಿ ಮೇಲ್ವಿಚಾರಣೆ ಮಾಡದ ಹಿನ್ನೆಲೆಯಲ್ಲಿ ಹಣ ಉಳಿದುಕೊಂಡಿದೆ. ಮುಂದಿನ ದಿನಗಳಲ್ಲಿ ಆ ರೀತಿ ಲೋಪವಾಗದಂತೆ ಪಂಚತಂತ್ರ-2 ತಂತ್ರಜ್ಞಾನದ ಮೂಲಕ ಎಚ್ಚರಿಕೆ ವಹಿಸಲಾಗುವುದು ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News