10 ಸಾವಿರ ಕೋಟಿ ರೂ. ಮೌಲ್ಯದ 599 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಈಶ್ವರ್ ಖಂಡ್ರೆ ಸೂಚನೆ

Update: 2024-08-11 13:08 GMT

ಬೆಂಗಳೂರು : ಇಲ್ಲಿನ ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿ 10 ಸಾವಿರ ಕೋಟಿ ರೂ.ಗೂ ಹೆಚ್ಚು ಬೆಲೆ ಬಾಳುವ 599 ಎಕರೆ ಅಧಿಸೂಚಿತ ಅರಣ್ಯ ಪ್ರದೇಶವನ್ನು ಇಲಾಖೆಗೆ ಮರಳಿ ಪಡೆಯಲು ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ರವಿವಾರ ಈ ಕುರಿತು ಪ್ರತಿಕ್ರಿಯಿಸಿದ ಅವರು, ಅರಣ್ಯ ನಿಯಮಾವಳಿ 1878ರ ಸೆಕ್ಷನ್ 9ರಡಿಯಲ್ಲಿ ಅರಣ್ಯ ಎಂದು ಘೋಷಣೆಯಾಗಿ, ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಅಂದರೆ 1896ರಲ್ಲೇ ಗೆಜೆಟ್ ಅಧಿಸೂಚನೆ ಆಗಿರುವ ಸಾವಿರಾರು ಕೋಟಿ ರೂ. ಬೆಲೆ ಬಾಳುವ ಭೂಮಿಯನ್ನು ಕೇಂದ್ರ ಸರಕಾರಿ ಸ್ವಾಮ್ಯದ ಎಚ್‍ಎಂಟಿ ಸಂಸ್ಥೆ ಅಕ್ರಮವಾಗಿ ಸರಕಾರಿ ಇಲಾಖೆಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿತ್ತು ಎಂದರು.

ಆನಂತರ, ಕೂಡಲೇ ಒಟ್ಡು 599 ಎಕರೆ ಅರಣ್ಯ ಭೂಮಿಯ ಪೈಕಿ ಎಚ್‍ಎಂಟಿ ನೀಡಲಾಗಿದೆ ಎನ್ನಲಾದ 469ಎಕರೆ 32 ಗುಂಟೆಯಲ್ಲಿ ಖಾಲಿ ಇರುವ 281 ಎಕರೆ ಜಮೀನನ್ನು ಮೊದಲಿಗೆ ವಶಕ್ಕೆ ಪಡೆದು ನಂತರ ಉಳಿದ ಭೂಮಿಯ ವಶಕ್ಕೆ ಕಾನೂನು ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಅರಣ್ಯ ಸಂರಕ್ಷಣಾ ಕಾಯಿದೆ ಸೆಕ್ಷನ್ 64ಎ ಅಡಿಯಲ್ಲಿ ಈ ಹಿಂದೆ ಪ್ರಕ್ರಿಯೆ ನಡೆದಿದ್ದು ಭೂಮಿ ತೆರವಿಗೆ ಆದೇಶ ಆಗಿದ್ದರೂ, ಈವರೆಗೆ ಕ್ರಮ ವಹಿಸದ ಅರಣ್ಯಾಧಿಕಾರಿಗಳ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಈ ಕುರಿತು ತನಿಖೆ ನಡೆಸಲು ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.

ಅರಣ್ಯ ನಿಯಂತ್ರಣ ಕಾಯಿದೆ 1900ರ ಸೆಕ್ಷನ್ 30ರ ಸಬ್ ಸೆಕ್ಷನ್ (1)ರ ಅಡಿಯಲ್ಲಿ ಯಾವುದೇ ಅರಣ್ಯ ಭೂಮಿಯನ್ನು ದಾನವಾಗಿ ನೀಡಲು ಕಾನೂನಿನಲ್ಲಿ ಅವಕಾಶ ಇರುವುದಿಲ್ಲ. ಯಾವುದೇ ಅರಣ್ಯ ಭೂಮಿಯನ್ನು ಮಂಜೂರಾತಿ ಮಾಡುವ ಮುನ್ನ ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಮಾಡಲು ಮೊದಲಿಗೆ ಡಿ ನೋಟಿಫೈ ಮಾಡಿ, ಗೆಜೆಟ್ ಅಧಿಸೂಚನೆ ಮಾಡಬೇಕಾಗಿರುತ್ತದೆ. ಆದರೆ ಈ ಜಮೀನನ್ನು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿ ಹನುಮಾನ್ ಅವರು 1963ರಲ್ಲಿ ಎಚ್‍ಎಂಟಿಗೆ ದಾನಪತ್ರದ ಮೂಲಕ ವರ್ಗಾವಣೆ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಈ ದಾನಪತ್ರದ ಕುರಿತಂತೆ ಯಾವುದೇ ಗೆಜೆಟ್ ಅಧಿಸೂಚನೆಯೂ ಆಗಿರುವುದಿಲ್ಲ. ಈ ಭೂಮಿ ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಕೂಡ ಆಗಿರುವುದಿಲ್ಲ ಎಂದು ತಿಳಿಸಿದರು.

ಶರಾವತಿ ಸಂತ್ರಸ್ತರಿಗೆ ಅರಣ್ಯ ಭೂಮಿ ನೀಡಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಹಾಗೂ ಗೋದಾವರ್ಮನ್ ಮತ್ತು ಕೇಂದ್ರ ಸರಕಾರದ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶಗಳು ಇದನ್ನು ಸ್ಪಷ್ಟಪಡಿಸುತ್ತವೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಎಚ್‍ಎಂಟಿ ವಶದಲ್ಲಿರುವ ಮತ್ತು ಎಚ್‍ಎಂಟಿ ವಿವಿಧ ಸಂಸ್ಥೆ, ಇಲಾಖೆ, ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿರುವ ಭೂಮಿ ಅರಣ್ಯವೇ ಆಗಿದೆ. ಈ ಹಿನ್ನೆಲೆಯಲ್ಲಿ ಐಎಯನ್ನು ಹಿಂಪಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ತನಿಖೆ ನಡೆಸುವಂತೆ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಲಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News