ʼಜನತಾ ದರ್ಶನʼದಲ್ಲಿ ಸಮಸ್ಯೆ ಆಲಿಸಿದ ಸಚಿವ ಮಧು ಬಂಗಾರಪ್ಪ

Update: 2023-09-25 15:21 GMT

ಶಿವಮೊಗ್ಗ(ಸೆ.25): ಶರಾವತಿ ಮುಳುಗಡೆ ಸಂತ್ರಸ್ಥರ ಭೂ ಹಕ್ಕಿನ ಸಮಸ್ಯೆ,ಬಗರ್ ಹುಕುಂ ಹಕ್ಕುಪತ್ರ ವಿತರಣೆ, ಖಾತೆ-ಪೋಡಿ ಹಾಗೂ ಗೃಹ ಲಕ್ಷ್ಮೀ ಯೋಜನೆ ಸೇರಿದಂತೆ ಹಲವಾರು ಸಮಸ್ಯೆಗಳು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ನೇತೃತ್ವದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಅನಾವರಣಗೊಂಡವು.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಸಾರ್ವಜನಿಕರ ಕುಂದು-ಕೊರತೆ ಆಲಿಸುವ ಪ್ರಥಮ ಜನತಾ ದರ್ಶನ ಕಾರ್ಯಕ್ರಮ ನಡೆಯಿತು.

ಸ್ಥಳದಲ್ಲಿಯೇ ಜಿಲ್ಲೆಯ ಜನರ ಸಮಸ್ಯೆ ಆಲಿಸಿ, ಅವರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಕೆಲವು ಅರ್ಜಿಗಳಿಗೆ ಸ್ಥಳೀಯವಾಗಿ ಹಾಗೂ ಇನ್ನೂ ಕೆಲವು ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ವಿವಿಧ ತಾಲೂಕುಗಳಿಂದ ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದ ಸಹಸ್ರಾರು ಸಂಖ್ಯೆಯ ಜನರು ಸಚಿವರಿಗೆ ಮನವಿ ಸಲ್ಲಿಸಿದರು.

 

ಹಾಯ್‌ಹೊಳೆ ಹಾಗೂ ಕೋಟೆಗಂಗೂರು ಭಾಗದ ಕಾಲೇಜು ವಿದ್ಯಾರ್ಥಿಗಳು ಬಸ್ಸಿನ ಸೌಲಭ್ಯ ಕಲ್ಪಿಸುವಂತೆ ಸಚಿವರಿಗೆ ಮನವಿ ಮಾಡಿದರು.ತಕ್ಷಣ ಬಸ್ ಸಂಪರ್ಕ ಕಲ್ಪಿಸುವಂತೆ ಕೆ.ಎಸ್.ಆರ್‌ಟಿಸಿ ವಿಭಾಗೀಯ ಅಧಿಕಾರಿಗೆ ಸೂಚನೆ ನೀಡಿದರು.ಬಸ್ ಸಂಪರ್ಕ ಕಲ್ಪಿಸಿದ ಕುರಿತು ನನಗೆ ಎರಡು ದಿನದಲ್ಲಿ ವರದಿ ನೀಡುವಂತೆ ಸೂಚನೆ ನೀಡಿದರು.

ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗೆಹರಿಸಿಕೊಡುವಂತೆ ಮಲೆಶಂಕರ,ಪುರದಾಳು ಹಾಗೂ ಕೂಡಿ ಭಾಗದ ರೈತರು ಮನವಿ ಸಲ್ಲಿಸಿದರು.ಸಮಸ್ಯೆ ಸ್ಪಂದಿಸಿದ ಸಚಿವರು,ಈಗಾಗಲೇ ಹಲವು ಭಾರಿ ಸಭೆ ನಡೆಸಲಾಗಿದೆ.ಶೀಘ್ರದಲ್ಲೇ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ,ಕೆ ಶಿವಕುಮಾರ್ ಸೇರಿದಂತೆ ಸಂಬಂಧಪಟ್ಟ ಇಲಾಖಾ ಸಚಿವರು,ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡಲಾಗುವುದು.ಸಂತ್ರಸ್ಥರ ಪರವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಬೀದಿಬದಿಯ ವ್ಯಾಪಾರಕ್ಕೆ ಸಾಲ ಸೌಲಭ್ಯ ಪಡೆದು ಸಾಲ ತೀರಿಸಿದ್ದೇನೆ.ಆದರೆ ಪುನಃ ಸಾಲ ಕೇಳಿದರೆ ಸಾಲ ನೀಡುತ್ತಿಲ್ಲ ಎಂದು ವಯೋವೃದ್ದೆಯೊಬ್ಬರು ಸಚಿವರ ಮುಂದೆ ಅವಲತ್ತು ತೋಡಿಕೊಂಡರು.ಇದಕ್ಕೆ ಅಧಿಕಾರಿಗಳ ವಿರುದ್ದ ಗರಂ ಆದ ಸಚಿವರು,ಇದನ್ನು ಸಹಿಸಲು ಸಾಧ್ಯವಿಲ್ಲ,ಸಾಲಪಡೆದುಕೊಂಡು ಕಟ್ಟಿದ್ದಾರೆಂದರೆ ಪುನಃ ನೀಡಲು ಯಾಕೆ ಸಾಧ್ಯವಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಬ್ಯಾಂಕಿನ ಅಧಿಕಾರಿಗಳನ್ನು ಕರೆಯಿಸಿ ಸಾಲ ಕೊಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಪಡಿತರ ಚೀಟಿ ತಿದ್ದುಪಡಿ, ಆಧಾರ್, ಕೆ.ವೈ.ಸಿ., ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಸಾರಿಗೆ, ಹಾಸ್ಟೆಲ್,ಉದ್ಯೋಗ ನೀಡುವುದು ಸೇರಿದಂತೆ ಇನ್ನಿತರ ಯೋಜನೆಗಳ ಸಮಸ್ಯೆಗಳ ಕುರಿತು ಅರ್ಜಿಗಳು ಸಲ್ಲಿಕೆಯಾದವು.

ಸೂಕ್ತ ವ್ಯವಸ್ಥೆ:

ಮನವಿ ನೀಡಲು ಬಂದವರಿಗಾಗಿ ಸೂಕ್ತ ಆಸನ, ಕುಡಿಯುವ ನೀರು, ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ನೆರಳಿಗಾಗಿ ಟೆಂಟ್, ವಾಹನಗಳ ವ್ಯವಸ್ಥಿತ ನಿರ್ವಹಣೆಗಾಗಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಸಾರ್ವಜನಿಕರಿಗೆ ಸರ್ಕಾರದ ವಿವಿಧ ಜನಪರ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಆಹಾರ, ಕೃಷಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ತೋಟಗಾರಿಕೆ, ಕಾರ್ಮಿಕ, ಕಂದಾಯ ಹೀಗೆ ಪ್ರಮುಖ 15ಕ್ಕೂ ಹೆಚ್ಚು ಇಲಾಖೆಯ ಮಳಿಗೆಗಳನ್ನು ಹಾಕಲಾಗಿತ್ತು.

ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿಗಳು ಸ್ಥಳದಲ್ಲಿ ಇದ್ದು, ಕುಂದುಕೊರತೆ ಅರ್ಜಿ ಸ್ವೀಕರಿಸಿದರು. ಅದಕ್ಕಾಗಿ ಸಭಾಂಗಣದ ಆವರಣದಲ್ಲಿ 10-15 ಕೌಂಟರ್ ತೆರೆಯಲಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್, ಅರಣ್ಯಾಧಿಕಾರಿ ಶಿವಶಂಕರ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News