ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯಗೊಳಿಸುವ ʼಕನ್ನಡ ಭಾಷಾ ಸಮಗ್ರ ಅಭಿವೃದ್ಧಿʼ ತಿದ್ದುಪಡಿ ವಿಧೇಯಕ ಮಂಡನೆ

Update: 2024-02-13 14:32 GMT

ಬೆಂಗಳೂರು: ರಾಜ್ಯದ ಎಲ್ಲ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ಮಹತ್ವದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಮಂಗಳವಾರ ವಿಧಾನಸಭೆ ಕಲಾಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕವನ್ನು ಮಂಡಿಸಿದರು. ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳು ಮತ್ತು ಮುಂತಾದೆಡೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ.

ಇದಕ್ಕಾಗಿ ಅಧಿನಿಯಮದ ಸೆಕ್ಷನ್ 13ಕ್ಕೆ ತಿದ್ದುಪಡಿ ತರಲಾಗಿದ್ದು, ಭಾಷಾ ಅನುಷ್ಠಾನ ರಾಜ್ಯ ಸಮಿತಿಗೆ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ನಿರ್ದೇಶಕರನ್ನು ಸದಸ್ಯರನ್ನಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಚಾಲಕರನ್ನಾಗಿಯೂ ನೇಮಿಸಲು ನಿರ್ಧರಿಸಲಾಗಿದೆ.

ಈ ವಿಧೇಯಕ ಜಾರಿಯಿಂದ ಅಸಡ್ಡೆಯಿಂದ ನಾಮಫಲಕದ ಒಂದು ಮೂಲೆಯಲ್ಲಿ ಕನ್ನಡ ಭಾಷೆ ಬಳಸುವುದಕ್ಕೆ ಕಡಿವಾಣ ಬೀಳಲಿದೆ. ಇನ್ನೂ, ಇತ್ತೀಚಿಗೆ ಕನ್ನಡ ನಾಮಫಲಕಗಳ ಕುರಿತು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿದಂತೆ ಇನ್ನಿತರೆ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಸಿತ್ತು. ಪರಿಸ್ಥಿತಿಯ ಗಂಭೀರತೆ ಅರಿತ ಸರಕಾರ ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ಸಿಗುವಂತೆ ಮಾಡಲು ಮುಂದಾಗಿತ್ತು.

ಆದರೆ, ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿ ವಿಧಾನಮಂಡಲದಲ್ಲಿ ವಿಧೇಯಕ ಮಂಡಿಸಿ ಅಂಗೀಕಾರ ಪಡೆದುಕೊಳ್ಳುವಂತೆ ಸೂಚಿಸಿದ್ದರು. ಅದರಂತೆ ಮಸೂದೆ ರೂಪಿಸಲಾಗಿದೆ.

ವಿಧೇಯಕದ ಮುಖ್ಯ ಅಂಶಗಳು:

► 100ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ರಾಜ್ಯ, ಕೇಂದ್ರ ಸರಕಾರಿ ಸಂಸ್ಥೆಗಳಲ್ಲಿ ಕನ್ನಡ ಕೋಶ ಸ್ಥಾಪನೆಗೆ ಸೂಚನೆ.

► ದಿನ ನಿತ್ಯದ ವ್ಯವಹಾರಗಳ ನಿರ್ವಹಣೆಯಲ್ಲಿ ಕನ್ನಡ ಭಾಷೆ ಬಳಕೆಗೆ ಹಿರಿಯ ಉದ್ಯೋಗಿಗಳ ನೇತೃತ್ವದಲ್ಲಿ ಕನ್ನಡ ಕೋಶ ಸ್ಥಾಪಿಸಲು ಸೂಚನೆ.

► ಕನ್ನಡ ಭಾಷೆ ಮಾತನಾಡಲು ಬರದ ಉದ್ಯೋಗಿಗಳಿಗೆ ಕನ್ನಡ ಪರಿಚಯಿಸಲು ಕನ್ನಡ ಕಲಿಕಾ ಘಟಕ ಸ್ಥಾಪಿಸಲು ಸೂಚನೆ.

► ರಾಜ್ಯದ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿ ಸಾರ್ವಜನಿಕರ ಜೊತೆಗಿನ ಸಂಪರ್ಕ, ಪತ್ರ ವ್ಯವಹಾರಗಳಲ್ಲಿ ಕನ್ನಡ ಕಡ್ಡಾಯ.

► ರಸ್ತೆಗಳು, ಬಡಾವಣೆ ಪ್ರದೇಶದ ನಾಮಫಲಕದಲ್ಲೂ ಕನ್ನಡ ಕಡ್ಡಾಯ.

► ರಾಜ್ಯದೊಳಗೆ ತಯಾರಿಸಿದ ಉತ್ಪನ್ನಗಳ ಹೆಸರು, ಮಾಹಿತಿಯಲ್ಲೂ ಇತರ ಭಾಷೆಯ ಜೊತೆಗೆ ಕನ್ನಡ ಕಡ್ಡಾಯ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News