ತೆರಿಗೆ ಅನ್ಯಾಯದ ವಿರುದ್ಧ ಕನ್ನಡಿಗರೆಲ್ಲರೂ ದನಿ ಎತ್ತಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2024-10-12 11:59 GMT

ಬೆಂಗಳೂರು: ‘ಕರ್ನಾಟಕವು ಒಕ್ಕೂಟ ವ್ಯವಸ್ಥೆಯೆಡೆಗೆ ತನಗಿರುವ ಎಲ್ಲ ಗೌರವವನ್ನು ಉಳಿಸಿಕೊಂಡೇ, ತನ್ನ ನ್ಯಾಯಯುತ ಪಾಲನ್ನು ಪಡೆಯಲು ಹೇಗೆ ಮುಂದುವರೆಯಬೇಕೆನ್ನುವ ಚರ್ಚೆ ಸಾರ್ವಜನಿಕವಾಗಿ ನಡೆಯಬೇಕಿದೆ. ಇಂತಹ ರಚನಾತ್ಮಕ ಚರ್ಚೆ ವಿಜಯದಶಮಿಯ ಶುಭದಿನದಿಂದಲೇ ಶುರುವಾಗಲಿ. ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಕನ್ನಡಿಗರೆಲ್ಲರೂ ದನಿ ಎತ್ತಬೇಕಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಕರೆ ನೀಡಿದ್ದಾರೆ.

ಶನಿವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕೇಂದ್ರದ ಎನ್‍ಡಿಎ ಸರಕಾರ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡುತ್ತಾ ಬಂದಿರುವ ಅನ್ಯಾಯಕ್ಕೆ ಇತ್ತೀಚಿನ ತೆರಿಗೆ ಪಾಲಿನ ಹಂಚಿಕೆಯ ವಿವರಗಳೇ ಸಾಕ್ಷಿ. 28ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂ.ಬಿಡುಗಡೆಗೊಳಿಸಿರುವ ಕೇಂದ್ರ ಸರಕಾರ ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ. ಈ ಅನ್ಯಾಯದ ವಿರುದ್ದ ಜಾತಿ-ಧರ್ಮ, ಪಕ್ಷ-ಪಂಥದ ಭೇದವಿಲ್ಲದೆ ದನಿ ಎತ್ತುವ ಶಪಥವನ್ನು ಪ್ರತಿಯೊಬ್ಬ ಕನ್ನಡಿಗನು ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

‘ಇಂತಹದ್ದೊಂದು ಪ್ರಮಾಣ ವಚನ ಸ್ವೀಕಾರಕ್ಕೆ ಅನ್ಯಾಯದ ವಿರುದ್ಧ ನ್ಯಾಯದ ಗೆಲುವಿನ ಸಂಕೇತವಾದ ವಿಜಯದಶಮಿಯ ಶುಭ ದಿನ ಸಾಕ್ಷಿಯಾಗಲಿ. ಕರ್ನಾಟಕವನ್ನು ಕಡೆಗಣಿಸುವಂತಹ ಅನ್ಯಾಯವನ್ನು ನಾವೇನು ಮಾಡಿದ್ದೇವೆ? ಎಂದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನು ಕೇಂದ್ರವನ್ನು ಕೇಳಬೇಕಾಗಿದೆ. ಬಿಮಾರು ರಾಜ್ಯಗಳೆಂದೇ ಕುಖ್ಯಾತಿ ಪಡೆದಿರುವ ರಾಜ್ಯಗಳಾದ ಉತ್ತರಪ್ರದೇಶಕ್ಕೆ ರೂ.31,962ಕೋಟಿ, ಬಿಹಾರಕ್ಕೆ ರೂ.17,921ಕೋಟಿ, ಮಧ್ಯಪ್ರದೇಶಕ್ಕೆ ರೂ.13,987 ಕೋಟಿ ಮತ್ತು ರಾಜಸ್ತಾನಕ್ಕೆ ರೂ.10,737 ಕೋಟಿಯಷ್ಟು ತೆರಿಗೆ ಪಾಲನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ದುರಾಡಳಿತ ಮತ್ತು ಭ್ರಷ್ಟಾಚಾರದಿಂದಾಗಿ ಅಭಿವೃದ್ದಿ ಪಥದಲ್ಲಿ ಹಿಮ್ಮುಖವಾಗಿ ಸಾಗುತ್ತಿರುವ ಈ ರಾಜ್ಯಗಳಿಗಾಗಿ ಕನ್ನಡಿಗನ ಬೆವರ ಗಳಿಕೆ ಯಾಕೆ ಪೋಲಾಗಬೇಕು ಎನ್ನುವುದು ನಮ್ಮ ಪ್ರಶ್ನೆಯಾಗಿದೆ? ರಾಜ್ಯಗಳಿಂದ ಸಂಗ್ರಹಿಸುವ ತೆರಿಗೆ ಹಣದಲ್ಲಿ ಉತ್ತರಪ್ರದೇಶಕ್ಕೆ ಶೇ.17.93, ಬಿಹಾರಕ್ಕೆ 10.05, ರಾಜಸ್ತಾನಕ್ಕೆ 6.02 ಮತ್ತು ಮಧ್ಯಪ್ರದೇಶಕ್ಕೆ 7.85ರಷ್ಟು ಪಾಲು ನೀಡಿದರೆ, ಕರ್ನಾಟಕಕ್ಕೆ ನೀಡುತ್ತಿರುವ ತೆರಿಗೆ ಪಾಲು ಕೇವಲ ಶೇ.3.64 ಮಾತ್ರ. ತೆರಿಗೆ ಹಂಚಿಕೆಗಾಗಿ ನಿಗದಿ ಪಡಿಸಲಾಗಿರುವ ಮಾನದಂಡದಲ್ಲಿಯೇ ಕೇಂದ್ರ ಸರ್ಕಾರದ ಪ್ರಗತಿ ವಿರೋಧಿ ಧೋರಣೆ ಸ್ಪಷ್ಟವಾಗಿದೆ. ಅಭಿವೃದ್ಧಿಶೀಲ ರಾಜ್ಯವನ್ನು ಶಿಕ್ಷಿಸಿ, ದುರಾಡಳಿತ ನಡೆಸುತ್ತಿರುವ ರಾಜ್ಯಗಳನ್ನು ಪುರಸ್ಕರಿಸುವ ತೆರಿಗೆ ಹಂಚಿಕೆ ಮಾನದಂಡವನ್ನೇ ಬದಲಾಯಿಸಬೇಕೆಂದು ನಾವು ಒತ್ತಾಯಿಸುತ್ತಲೇ ಬಂದಿದ್ದರೂ ಕೇಂದ್ರ ಸರಕಾರ ಕಿವುಡಾಗಿದೆ ಎಂದು ಟೀಕಿಸಿದ್ದಾರೆ.

ಹದಿನಾಲ್ಕನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲು ಶೇ4.713 ಎಂದು ನಿಗದಿಪಡಿಸಿತ್ತು, ಈಗಿನ 15ನೆ ಹಣಕಾಸು ಆಯೋಗ ಈ ಪಾಲನ್ನು ಕಡಿಮೆಗೊಳಿಸಿ ಶೇ.3.647ಕ್ಕೆ ಇಳಿಸಿತು. ಇದರಿಂದ 2021-26ರ ವರೆಗಿನ 5 ವರ್ಷಗಳಲ್ಲಿ ತೆರಿಗೆ ಪಾಲಿನಲ್ಲಿ ಅಂದಾಜು 62,275 ಕೋಟಿ ರೂ.ಯನ್ನು ಕರ್ನಾಟಕ ಕಳೆದುಕೊಂಡಿದೆ. ಈ ಅನ್ಯಾಯವನ್ನು ಪರಿಗಣಿಸಿದ್ದ ಹಣಕಾಸು ಆಯೋಗ ವಿಶೇಷ ಅನುದಾನದ ರೂಪದಲ್ಲಿ ರೂ.5,495 ಕೋಟಿ ನೀಡುವಂತೆ ಶಿಫಾರಸು ಮಾಡಿತ್ತು. ಇದನ್ನು ಕೇಂದ್ರ ನೀಡದೆ ಅನ್ಯಾಯ ಎಸಗಿದೆ. ಈ ಎಲ್ಲ ನಷ್ಟಗಳನ್ನು ಸೇರಿಸಿದರೆ 15ನೆ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕ ರಾಜ್ಯಕ್ಕೆ 79,770 ಕೋಟಿ ರೂ.ಳಷ್ಟು ನಷ್ಟವಾಗಿದೆ ಎಂದು ಅವರು ಗಮನ ಸೆಳೆದಿದ್ದಾರೆ.

ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಪಾಲು ಕೇವಲ ಶೇ.5ರಷ್ಟಿದ್ದರೂ ದೇಶದ ಜಿಡಿಪಿಗೆ ಕರ್ನಾಟಕದ ಶೇ.8.4ರಷ್ಟು ಕೊಡುಗೆ ನೀಡುತ್ತಿದೆ. ಜಿಎಸ್‍ಟಿ ಸಂಗ್ರಹದಲ್ಲಿ ಸತತವಾಗಿ ಕರ್ನಾಟಕ ಎರಡನೆ ಸ್ಥಾನದಲ್ಲಿದೆ. ಇನ್ನು ಜಿಎಸ್‍ಟಿ ಸಂಗ್ರಹದ ಬೆಳೆವಣಿಗೆ ದರವನ್ನು ಗಮನಿಸಿದರೆ ಶೇ.17ರ ಸಾಧನೆಯ ಮೂಲಕ ದೇಶದಲ್ಲೇ ಮೊದಲ ಸ್ಥಾನದಲ್ಲಿ ಕರ್ನಾಟಕವಿದೆ. ವಿಪರ್ಯಾಸವೆಂದರೆ ಈ ಪ್ರಮಾಣದಲ್ಲಿ ಜಿಎಸ್‍ಟಿ ಹಣವನ್ನು ಕೇಂದ್ರಕ್ಕೆ ಸಂಗ್ರಹಿಸಿ ನೀಡಿದರೂ ಇದರಿಂದ ರಾಜ್ಯಕ್ಕೆ ಮರಳಿ ದೊರೆಯುತ್ತಿರುವುದು ಶೇ.52 ಪಾಲು ಮಾತ್ರ. ಜಿಎಸ್‍ಟಿಯ ಅವೈಜ್ಞಾನಿಕ ಅನುಷ್ಠಾನದಿಂದಾಗಿ ಕರ್ನಾಟಕವು 2017-18ರಿಂದ 2023-24ರ ವರೆಗೆ ಸುಮಾರು 59,274 ಕೋಟಿ ರೂ.ಹಣವನ್ನು ಕಳೆದುಕೊಂಡಿದೆ ಎಂದು ಸಿದ್ದರಾಮಯ್ಯ ವಿವರ ನೀಡಿದ್ದಾರೆ.

ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ಕರ್ನಾಟಕ 4ಲಕ್ಷ ಕೋಟಿ ರೂ.ಗಳನ್ನು ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು 45 ಸಾವಿರ ಕೋಟಿ ರೂ.ಮಾತ್ರ. ಇದರ ಜೊತೆಗೆ ಅನುದಾನದ ರೂಪದಲ್ಲಿ ಅಂದಾಜು 15ಸಾವಿರ ಕೋಟಿ ರೂ.ಸೇರಿರುತ್ತದೆ. ಇವೆಲ್ಲ ಕೂಡಿದರೆ ಕರ್ನಾಟಕ ಕೇಂದ್ರ ಸರಕಾರಕ್ಕೆ ನೀಡುತ್ತಿರುವ ಪ್ರತಿಯೊಂದು ರೂಪಾಯಿಗೆ ಹಿಂದಿರುಗಿ ಬರುತ್ತಿರುವುದು ಕೇವಲ 15ಪೈಸೆ ಮಾತ್ರ. ಈ ಅನ್ಯಾಯವನ್ನು ಎಷ್ಟು ದಿನ ಸಹಿಸಿಕೊಂಡಿರಲು ಸಾಧ್ಯ?’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂಟು ವರ್ಷಗಳ ಅವಧಿಯಲ್ಲಿ ಕೇಂದ್ರ ಸರಕಾರದ ಬಜೆಟ್ ದುಪ್ಪಟ್ಟಿಗಿಂತಲೂ ಹೆಚ್ಚಾಗಿದೆ. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ ರೂ.24,42,213 ಕೋಟಿ ಇತ್ತು. ಆಗ ಕೇಂದ್ರದಿಂದ ರಾಜ್ಯಕ್ಕೆ ದೊರೆಯುತ್ತಿದ್ದ ತೆರಿಗೆ ಪಾಲು ರೂ.35,895 ಕೋಟಿ ಹಾಗೂ ರೂ.16,082 ಕೋಟಿ ಸೇರಿ ಒಟ್ಟು ರೂ.46,288 ಕೋಟಿ ಲಭ್ಯವಾಗಿತ್ತು. 2024-25ರಲ್ಲಿ ಕೇಂದ್ರದ ಬಜೆಟ್ ಗಾತ್ರ ರೂ.48,20,514 ಕೋಟಿಗೆ ಏರಿಕೆಯಾಗಿದೆ. ಆದರೆ, 2024-25ರ ಸಾಲಿನಲ್ಲಿ ಕರ್ನಾಟಕಕ್ಕೆ ನಿಗದಿ ಪಡಿಸಿರುವ ತೆರಿಗೆ ಪಾಲು ರೂ.44,485 ಕೋಟಿ. ಅಂದಾಜು ಅನುದಾನ ರೂ.15,299 ಕೋಟಿ. ಈ ರೀತಿ ತೆರಿಗೆ ಪಾಲು ಮತ್ತು ಅನುದಾನಗಳೆರಡೂ ಸೇರಿ ಕೇಂದ್ರದಿಂದ ರಾಜ್ಯಕ್ಕೆ ಸಿಗಲಿರುವ ಒಟ್ಟು ಹಣ ರೂ,59,784 ಕೋಟಿ ಮಾತ್ರ ಎಂದು ಅವರು ಅಂಕಿಸಂಖ್ಯೆಗಳನ್ನು ನೀಡಿದ್ದಾರೆ.

ಅಂದರೆ ಕಳೆದ 8 ವರ್ಷಗಳ ಅವಧಿಯಲ್ಲಿ ಬಜೆಟ್ ಗಾತ್ರ ದುಪ್ಪಟ್ಟಿಗಿಂತ ಹೆಚ್ಚಾದರೂ ಕರ್ನಾಟಕಕ್ಕೆ ಸಿಗುವ ಕೇಂದ್ರದ ತೆರಿಗೆ ಪಾಲಿನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಸಕ್ತ ಬಜೆಟ್ ಗಾತ್ರದ ಹೋಲಿಕೆಯಲ್ಲಿ ಕರ್ನಾಟಕಕ್ಕೆ ವಾರ್ಷಿಕ ಕನಿಷ್ಠ ರೂ.1 ಲಕ್ಷ ಕೋಟಿಯಷ್ಟು ಹಣ ತೆರಿಗೆಯ ಪಾಲು ಹಾಗೂ ಅನುದಾನದ ಮುಖೇನ ದೊರೆಯಬೇಕಿತ್ತು, ಆದರೆ ದೊರೆತಿಲ್ಲ ಎಂದು ಅವರು ತಿಳಿಸಿದ್ದಾರೆ.

15ನೇ ಹಣಕಾಸು ಆಯೋಗವು ಬೆಂಗಳೂರಿನ ಫೆರಿಫೆರಲ್ ರಿಂಗ್ ರಸ್ತೆಗೆ ರೂ.3 ಸಾವಿರ ಕೋಟಿ ಮತ್ತು ಕೆರೆಗಳು ಸೇರಿದಂತೆ ಬೆಂಗಳೂರು ಜಲಮೂಲ ಅಭಿವೃದ್ಧಿಗೆ ರೂ. 3ಸಾವಿರ ನೀಡಲು ಶಿಫಾರಸ್ಸು ಮಾಡಿತ್ತು. ಆದರೆ, ಈ ಶಿಫಾರಸ್ಸುಗಳನ್ನು ತಿರಸ್ಕರಿಸಿದ ವಿತ್ತ ಸಚಿವರು ರಾಜ್ಯಕ್ಕೆ ಸುಮಾರು ರೂ.11,495 ಕೋಟಿ ದ್ರೋಹ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

‘ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳೆರಡೂ ಎರಡು ಚಕ್ರಗಳಂತೆ. ಈ ಎರಡೂ ಚಕ್ರಗಳೂ ಸಮಾನವಾಗಿ, ಸುಗಮವಾಗಿ ತಿರುಗಿದಾದ ಮಾತ್ರವೇ ದೇಶವು ನಾಗಾಲೋಟದಿಂದ ಪ್ರಗತಿಯ ಪಥದಲ್ಲಿ ಮುನ್ನಡೆಯಲು ಸಾಧ್ಯ. ವಿಪರ್ಯಾಸವೆಂದರೆ, ಇತ್ತೀಚಿನ ವರ್ಷಗಳಲ್ಲಿ ಸಂಪನ್ಮೂಲ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರಕಾರದ ತಾರತಮ್ಯ ಧೋರಣೆಯು ಕರ್ನಾಟಕವೂ ಸೇರಿದಂತೆ ಭಾರತದ ದಕ್ಷಿಣದ ರಾಜ್ಯಗಳನ್ನು ನಿರಂತರವಾಗಿ ಅನ್ಯಾಯದ ಶೂಲಕ್ಕೆ ಕೊರಳೊಡ್ಡುವಂತೆ ಮಾಡಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ದೇಶವು ಇಂದು ಐದು ಟ್ರಿಲಿಯನ್ ಅರ್ಥ ವ್ಯವಸ್ಥೆಯಾಗುವ ಕನಸನ್ನು ಕಾಣುತ್ತಿದೆ ಎಂದರೆ ಅದರ ಹಿಂದೆ ದೇಶದ ಪ್ರಗತಿಗೆ ಅನನ್ಯವಾದ ಕೊಡುಗೆಯನ್ನು ನೀಡುತ್ತಿರುವ, ದೇಶದ ಸಂಪತ್ತಿಗೆ ಅಗಾಧವಾದ ಸಂಪನ್ಮೂಲವನ್ನು ಒದಗಿಸುತ್ತಿರುವ ಕರ್ನಾಟಕದ ಸಹಿತ ದಕ್ಷಿಣ ಭಾರತದ ರಾಜ್ಯಗಳ ವಿಶೇಷ ಕೊಡುಗೆಯಿದೆ ಎನ್ನುವುದನ್ನು ಮರೆಯಬಾರದಲ್ಲವೇ?’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

‘ಪ್ರಧಾನಿ ಮೋದಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಮೊದಲು ಯೋಜನಾ ಆಯೋಗವನ್ನು ರದ್ದುಗೊಳಿಸಿ ರಾಜ್ಯ ಸರಕಾರಗಳಿಗೆ ದನಿಯೇ ಇಲ್ಲದ ರೀತಿಯಲ್ಲಿ ನೀತಿ ಆಯೋಗವನ್ನು ರಚಿಸಲಾಯಿತು. ಅದರ ಬೆನ್ನಲ್ಲಿಯೇ 15ನೆ ಹಣಕಾಸು ಆಯೋಗವನ್ನು ರಚಿಸಿ ಅದರ ಕಾರ್ಯೋದ್ದೇಶಗಳನ್ನು ನಿಗದಿಗೊಳಿಸುವ ಮಾರ್ಗಸೂಚಿ ಅಂಶಗಳಲ್ಲಿ ಬದಲಾವಣೆ ಮಾಡಲಾಯಿತು. ಈ ಬದಲಾವಣೆಗಳು ಸಹಜವಾಗಿ ಕರ್ನಾಟಕವೂ ಸೇರಿದಂತೆ ಅಭಿವೃದ್ಧಿಯ ಪಥದಲ್ಲಿರುವ ದಕ್ಷಿಣದ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಿದೆ

-ಸಿದ್ದರಾಮಯ್ಯ, ಮುಖ್ಯಮಂತ್ರಿ

‘ಕರ್ನಾಟಕದಿಂದ ಕ್ರೋಢೀಕರಿಸಲ್ಪಟ್ಟ ತೆರಿಗೆ ಕನ್ನಡಿಗರ ಕಷ್ಟನಷ್ಟಗಳಿಗೆ ಒದಗದೆ ಹೋದರೆ, ಕನ್ನಡಿಗರ ಕಣ್ಣೀರು ಒರೆಸಲು ಬಳಕೆಯಾಗದೆ ಹೋದರೆ ಅಂತಹ ತೆರಿಗೆಯನ್ನು ಸಂಗ್ರಹಿಸಿ ಏನು ಪ್ರಯೋಜನ? ದೇಶದ ಅಭಿವೃದ್ದಿಗೆ ಪ್ರತಿವರ್ಷ ಲಕ್ಷೋಪಲಕ್ಷ ಕೋಟಿ ರೂ.ಹಣವನ್ನು ತೆರಿಗೆಯಾಗಿ ನೀಡಿದ ನಂತರವೂ ಅಪರೂಪಕ್ಕೊಮ್ಮೆ ಬರುವಂತಹ ಅತಿವೃಷ್ಟಿ, ಅನಾವೃಷ್ಟಿಗಳ ಸಂದರ್ಭದಲ್ಲಿ ಕೆಲ ಸಾವಿರ ಕೋಟಿ ರೂ.ಹಣವನ್ನು ಕೇಂದ್ರ ನಮ್ಮವರ ಕಣ್ಣೀರು ಒರೆಸಲು ನೀಡದೆ ಹೋದರೆ ಒಕ್ಕೂಟ ವ್ಯವಸ್ಥೆಗೆ ಅರ್ಥವಿದೆಯೇ? ಈ ಪ್ರಶ್ನೆಗಳು ಇಂದು ನಮ್ಮ ಮುಂದಿವೆ’

-ಸಿದ್ದರಾಮಯ್ಯ, ಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News