‘ಕಾಂತರಾಜು ವರದಿ’ಜಾತಿ ಸಮೀಕ್ಷೆಯಲ್ಲ: ಸಚಿವ ತಂಗಡಗಿ ಸ್ಪಷ್ಟನೆ

Update: 2023-11-09 13:45 GMT

ಬೆಂಗಳೂರು: ‘ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಹಿಂದಿನ ಅಧ್ಯಕ್ಷ ಎಚ್. ಕಾಂತರಾಜು ನೇತೃತ್ವದ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವುದಿಲ್ಲ’ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ‘ಕಾಂತರಾಜು ವರದಿಯನ್ನು ಜಾತಿ ಗಣತಿ ಎಂದು ಕರೆಯಲಾಗುತ್ತಿದೆ. ಆದರೆ, ಇದು ‘ಜಾತಿ ಗಣತಿ ಸಮೀಕ್ಷೆ’ ಅಲ್ಲವೆ, ಅಲ್ಲ. ಇದು ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಸರಿಪಡಿಸುವ ಹಿನ್ನೆಲೆಯಲ್ಲಿ ವರದಿ ಸಿದ್ಧಪಡಿಸಲಾಗಿದೆ. ಅದನ್ನು ಹೊರತುಪಡಿಸಿ ಜಾತಿ ವರದಿ ಎಂದು ಕರೆಯುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಕಾಂತರಾಜು ವರದಿಯಿಂದ ಪ್ರತಿಯೊಂದು ಸಮಾಜದ ಜನಸಂಖ್ಯೆ, ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದ ಅಂಕಿ-ಅಂಶ ಸ್ಪಷ್ಟವಾಗಿ ತಿಳಿಯಲಿದೆ. ವರದಿ ವಿರೋಧಿಸಿ ಕೆಲ ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ ಸರಕಾರಕ್ಕೆ ಸಲ್ಲಿಕೆಯೇ ಆಗಿಲ್ಲ. ವರದಿ ಸ್ವೀಕಾರ ಮಾಡಿದರೆ ಅದನ್ನು ಪಡೆದು ಅಧ್ಯಯನ ಮಾಡುತ್ತೇನೆ. ವರದಿ ವಿರೋಧ ಮಾಡುತ್ತಿದ್ದವರೂ ವರದಿ ನೋಡಿದ್ದರೆ ನಮಗೆ ತಿಳಿಸಲಿ. ನಿರ್ಮಲಾನಂದನಾಥ ಸ್ವಾಮಿ ಅವರಿಗೂ ಮನವಿ ಮಾಡುತ್ತಿದ್ದೇನೆ ಎಂದು ಅವರು ವಿವರಣೆ ನೀಡಿದರು.

ವರದಿಯೇ ನೋಡದೆ ಅದನ್ನು ವಿರೋಧ ಮಾಡುವುದು ಸರಿಯಲ್ಲ. ಜಾತಿ ಜನಗಣತಿ ಅಲ್ಲ. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಿರುವುದು. ಪ್ರತಿಯೊಂದು ಸಮುದಾಯದ ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ ತಿಳಿಯುವ ಸಲುವಾಗಿ ಸಮೀಕ್ಷೆ ನಡೆಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲೇ ವರದಿ ಸಿದ್ಧವಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ವರದಿ ಸ್ವೀಕಾರವಾಗಿಲ್ಲ. ವರದಿ ಸಲ್ಲಿಕೆಯಾಗದೇ ವರದಿ ಬಗ್ಗೆ ಅಪಸ್ವರ ತೆಗೆದುಯುವುದು ಸರಿಯಲ್ಲ. ಯಾರ ರಾಜಕೀಯ ಹಿತಾಸಕ್ತಿ ಕೂಡ ಇದರಲ್ಲಿ ಇಲ್ಲ ಎಂದು ಸ್ಪಷ್ಟಣೆ ನೀಡಿದರು.

ಬಿಜೆಪಿಯವರು ಮೊದಲು ಜಾಮೂನು ಕೊಟ್ಟು ಬಳಿಕ ವಿಷ ಕೊಡುತ್ತಾರೆಂಬ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಇದು ನಮಗೆ ಮೊದಲೇ ಗೊತ್ತು. ಸೋಮಶೇಖರ್ಗೆ ಇದೀಗ ಸತ್ಯದ ಅರಿವು ಆಗಿದೆ. ಈ ಹಿಂದೆ ಪಕ್ಷೇತರರಾಗಿ ಗೆದ್ದು ಬಿಜೆಪಿ ಸರಕಾರ ರಚನೆ ಮಾಡಲು ಬೆಂಬಲ ಕೊಟ್ಟ ನಮಗೆ ಏನು ಮಾಡಿದರೂ ಎಂಬುದು ರಾಜ್ಯದ ಜನತೆಗೆ ತಿಳಿದಿದೆ” ಎಂದು ಮಾರ್ಮಿಕವಾಗಿ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News