ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿ ಅನುಷ್ಠಾನ ಕುರಿತು ಚರ್ಚೆಗೆ ಎ.17ರಂದು ವಿಶೇಷ ಸಚಿವ ಸಂಪುಟ ಸಭೆ: ಶಿವರಾಜ್ ತಂಗಡಗಿ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ಕೈಗೊಂಡ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿ ಅನುಷ್ಠಾನ ಕುರಿತು ಚರ್ಚಿಸಲು ಎ.17ರಂದು ಸಂಜೆ 4 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರೊಂದಿಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಜಯಪ್ರಕಾಶ್ ಹೆಗ್ಡೆ ನೇತೃತ್ವದ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸರಕಾರಕ್ಕೆ ಸಲ್ಲಿಸಿರುವ ಸಮೀಕ್ಷೆಯ ವರದಿಯನ್ನು ಇಂದು ಸಚಿವ ಸಂಪುಟ ಸಭೆಯಲ್ಲಿ ತೆರೆಯಲಾಯಿತು. ಕೆಲವು ಮಹತ್ವದ ಅಂಶಗಳ ಕುರಿತು ಚರ್ಚೆ ನಡೆಸಲಾಗಿದೆ. ಎಲ್ಲಾ ಸಚಿವರಿಗೆ ಮುಖ್ಯ ಕಾರ್ಯದರ್ಶಿ ಮೂಲಕ ಈ ವರದಿಯಲ್ಲಿನ ಪ್ರಮುಖ ಅಂಶಗಳನ್ನು ತಲುಪಿಸಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದರು.
ಅದರಂತೆ, ಎ.17ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಕುರಿತು ಚರ್ಚೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿವರಾಜ್ ತಂಗಡಗಿ ತಿಳಿಸಿದರು.
ಎಚ್.ಕಾಂತರಾಜ ಅಧ್ಯಕ್ಷತೆಯ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 2015ರ ಎ.11ರಿಂದ ಪ್ರಾರಂಭಿಸಿ ಮೇ 30ರಂದು ಪೂರ್ಣಗೊಳಿಸಿದೆ. ಈ ಸಮೀಕ್ಷೆಯಡಿ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ಪ್ರಾತಿನಿಧ್ಯ ಮತ್ತು ಔದ್ಯೋಗಿಕ ಸ್ಥಿತಿಗತಿಗಳ ಬಗ್ಗೆ 54 ಮಾನದಂಡಗಳನ್ನೊಳಗೊಂಡ ಕುಟುಂಬದ ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದರು.
2011ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆ 6.11 ಕೋಟಿ. ಜನನ ಪ್ರಮಾಣದ ಅನುಪಾತದಂತೆ 2015ರಲ್ಲಿ 6.35 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆಗೊಳಪಡಿಸಲು ಅಂದಾಜು ಮಾಡಲಾಯಿತು. ಈ ಸಮೀಕ್ಷಾ ಕಾರ್ಯಕ್ಕೆ ಒಟ್ಟು 1.60 ಲಕ್ಷ ಅಧಿಕಾರಿಗಳೂ, ಸಿಬ್ಬಂದಿಗಳ ಸೇವೆಯನ್ನು ಪಡೆಯಲಾಗಿತ್ತು. ರಾಜ್ಯಾದ್ಯಂತ ಒಟ್ಟು 5.98 ಕೋಟಿ ಜನರನ್ನೊಳಗೊಂಡಂತೆ ಒಟ್ಟಾರೆ 1.35 ಕೋಟಿ ಕುಟುಂಬಗಳನ್ನು ಸಮೀಕ್ಷೆಗೊಳಪಡಿಸಲಾಗಿದೆ ಎಂದು ಶಿವರಾಜ್ ತಂಗಡಗಿ ತಿಳಿಸಿದರು.
ಸಮೀಕ್ಷೆಯ ಉದ್ದೇಶಕ್ಕಾಗಿ 6 ವಿಷಯ ತಜ್ಞರನ್ನು ನೇಮಕ ಮಾಡಿಕೊಂಡು ಒಟ್ಟು 16 ವಿಷಯ ತಜ್ಞರ ಸಭೆಗಳನ್ನು ನಡೆಸಿ ವರದಿಗೆ ಬೇಕಾದ ಮಾನದಂಡಗಳನ್ನು ಸಿದ್ಧಪಡಿಸಲಾಗಿತ್ತು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯು ಶೇ.94.17ರಷ್ಟು ಜನಸಂಖ್ಯೆಯನ್ನು ಒಳಗೊಂಡಿದೆ. ಕೇವಲ ಶೇ.5.83ರಷ್ಟು ಜನ ಮಾತ್ರ ಹೊರಗುಳಿದಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಸಮೀಕ್ಷೆಯಲ್ಲಿ ಲಭ್ಯವಾಗಿರುವ ಅಂಕಿ ಅಂಶಗಳನ್ನು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) ಸಂಸ್ಥೆಯ ಮೂಲಕ ಗಣಕೀಕರಣಗೊಳಿಸಲಾಗಿದ್ದು, ಇದಕ್ಕಾಗಿ 43.09 ಕೋಟಿ ರೂ.ಗಳಿಗೆ ಬಿಇಎಲ್ ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿತ್ತು ಎಂದು ಅವರು ತಿಳಿಸಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಕೇಂದ್ರ ಸರಕಾರದಿಂದ 7 ಕೋಟಿ ರೂ.ಮತ್ತು ರಾಜ್ಯ ಸರಕಾರದಿಂದ 185.79 ಕೋಟಿ ರೂ. ಸೇರಿದಂತೆ ಒಟ್ಟು 192.79 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಸಮೀಕ್ಷೆಗಾಗಿ ಇದುವರೆಗೆ ಒಟ್ಟು 165.51 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದು ಶಿವರಾಜ್ ತಂಗಡಗಿ ತಿಳಿಸಿದರು.
ಬಿಇಎಲ್ ಸಂಸ್ಥೆಯು ಗಣಕೀಕರಣಗೊಳಿಸಿರುವ ಅಂಕಿ ಅಂಶಗಳನ್ನು ಐಐಎಂ ಬೆಂಗಳೂರು ಸಂಸ್ಥೆಯವರು ದೃಢೀಕರಿಸಿ ವರದಿ ನೀಡಿದ್ದಾರೆ. ಅಲ್ಲದೇ, ಆಯೋಗದಿಂದ ಸಮೀಕ್ಷೆಯ ಅಂಕಿ ಸಂಖ್ಯೆಗಳನ್ನು ಅನುಮೋದಿಸಿ ಸರಕಾರಿ ಮುದ್ರಣಾಲಯದಲ್ಲಿ ಮುದ್ರಿಸಲಾಗಿದೆ. 2019ರಲ್ಲಿ ಕಾಂತರಾಜ ಮತ್ತು ಸದಸ್ಯರ ಅಧಿಕಾರಾವಧಿಯು ಮುಕ್ತಾಯಗೊಂಡಿದ್ದರಿಂದ, ಸರಕಾರಕ್ಕೆ ಸಮೀಕ್ಷೆಯ ವರದಿಯನ್ನು ಸಲ್ಲಿಸಿರಲಿಲ್ಲ. 2020ರಲ್ಲಿ ನೇಮಕವಾದ ಕೆ.ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗವು 2024ರ ಫೆ.29ರಂದು ಸರಕಾರಕ್ಕೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ದತ್ತಾಂಶಗಳ ಅಧ್ಯಯನ ವರದಿಯನ್ನು ಸಲ್ಲಿಸಿತು ಎಂದು ಅವರು ಮಾಹಿತಿ ನೀಡಿದರು.
ಒಟ್ಟು 50 ಸಂಪುಟಗಳ ವರದಿಯನ್ನು ಜಯಪ್ರಕಾಶ್ ಹೆಗ್ಡೆ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಜಾತಿವಾರು ಸಂಖ್ಯೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು, ವಿಧಾನಸಭಾ ಕ್ಷೇತ್ರವಾರು, ಜಾತಿವಾರು ಮತ್ತು ಅಂಕಿ ಅಂಶಗಳನ್ನು ಎರಡು ಸಿಡಿಯಲ್ಲಿ ರೆಕಾರ್ಡ್ ಮಾಡಿ ಸಲ್ಲಿಸಿದ್ದಾರೆ. ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶಗಳನ್ನು ಅಧ್ಯಯನ ಮಾಡಿ ವರದಿ ನೀಡಿದ್ದಾರೆ ಎಂದು ಶಿವರಾಜ್ ತಂಗಡಗಿ ಹೇಳಿದರು.