ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣ; ದೂರು ಕೋಶ ಪ್ರಾರಂಭಿಸಲು ಹೈಕೋರ್ಟ್ ಸೂಚನೆ

Update: 2023-07-11 16:49 GMT

ಬೆಂಗಳೂರು, ಜು.11: ರಾಜ್ಯದಲ್ಲಿ ವನ್ಯಜೀವಿ-ಮಾನವ ಸಂಘರ್ಷ ತಡೆಯುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ 24/7 ರಂತೆ ಕಾರ್ಯಾಚರಣೆ ಮಾಡುವಂತಹ ದೂರು ಕೋಶ(ಗ್ರೀವೆನ್ಸ್ ಸೆಲ್) ಸ್ಥಾಪನೆ ಮಾಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

ವನ್ಯಜೀವಿ-ಮಾನವ ಸಂಘರ್ಷಕ್ಕೆ ತಡೆಯುವ ನಿಟ್ಟಿನಲ್ಲಿ ಹೈಕೋರ್ಟ್ ನೀಡಿರುವ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವಂತೆ ಕೋರಿ ಕರ್ನಾಟಕ ಬೆಳೆಗಾರರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ಅಲ್ಲದೇ, ಜನರಿಂದ ಸಂಘರ್ಷದ ಕುರಿತು ಮಾಹಿತಿ ಪಡೆಯಲು ತಾಲೂಕು ಮಟ್ಟದಲ್ಲಿ ದೂರು ಕೋಶ(ಗ್ರೀವೆನ್ಸ್ ಸೆಲ್) ಪ್ರಾರಂಭಿಸಿ, ಅದಕ್ಕೆ ಅಗತ್ಯ ಇರುವ ಮಾನವ ಸಂಪನ್ಮೂಲ ಹಾಗೂ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ಈ ಕಂಟ್ರೋಲ್ ರೂಂಗಳನ್ನು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಜಿಲಾಸ್ಪತ್ರೆಗಳಿಗೆ ತಕ್ಷಣ ಲಭ್ಯವಾಗುವಂತೆ ವ್ಯವಸ್ಥೆ ಮಾಡಿ ಸಂಘರ್ಷದಲ್ಲಿ ತೊಂದರೆಗೆ ಒಳಗಾಗುವವರಿಗೆ ತಕ್ಷಣ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ನ್ಯಾಯಪೀಠ ಸರಕಾರಕ್ಕೆ ನಿರ್ದೇಶನ ನೀಡಿದೆ.

ಜತೆಗೆ, ಈ ದೂರು ಕೋಶದಲ್ಲಿನ ದೂರುಗಳನ್ನು ಮೇಲ್ವಿಚಾರಣೆ ಮಾಡುವುದಕ್ಕಾಗಿ ವಲಯ ಅರಣ್ಯ ಅಧಿಕಾರಿ ಮತ್ತು ತಹಶೀಲ್ದಾರ್ ಅವರು ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಿ ಮಾಹಿತಿ ಸಂಗ್ರಹಿಸಬೇಕು. ಈ ಸಂಬಂಧದ ವರದಿಯನ್ನು ಮೇಲಾಧಿಕಾರಿಗಳಿಗೆ ತಕ್ಷಣ ರವಾನಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೀಠ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News