ಮೇ 20ರೊಳಗೆ ಎಸಿ ನ್ಯಾಯಾಲಯಗಳಲ್ಲಿರುವ ಬಾಕಿ ತಕರಾರು ಅರ್ಜಿಗಳನ್ನು ಇತ್ಯರ್ಥಗೊಳಿಸಲು ಸಚಿವ ಕೃಷ್ಣಬೈರೇಗೌಡ ಸೂಚನೆ

Update: 2025-03-27 21:44 IST
Photo of Krishna Byre Gowda

ಕೃಷ್ಣಬೈರೇಗೌಡ

  • whatsapp icon

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಎರಡು ವರ್ಷವಾಗಲಿದೆ. ಅಷ್ಟರೊಳಗೆ ಉಪ ವಿಭಾಗಾಧಿಕಾರಿಗಳ(ಎಸಿ) ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಗಡುವು ನೀಡಿದರು.

ಗುರುವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮುನ್ನ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ 32,787 ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ 26,961 ಪ್ರಕರಣಗಳಿಗೆ ಮುಕ್ತಿ ನೀಡಲಾಗಿದೆ. ಇದೇ ಸಮಯದಲ್ಲಿ ಒಂದು ವರ್ಷಕ್ಕೆ ಮೇಲ್ಪಟ್ಟ 59,339 ಪ್ರಕರಣಗಳ ಪೈಕಿ 40,394 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಮೆಚ್ಚುಗೆ ಸೂಚಿಸಿದರು.

ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದೀರಿ. ಎಸಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ವಿಲೇವಾರಿ ವೇಗ ಪಡೆಯುತ್ತಿದೆ. ಆದರೂ, ಎರಡು ವರ್ಷದಲ್ಲಿ ಎಲ್ಲಾ ಬಾಕಿ ಪ್ರಕರಣಗಳನ್ನೂ ಇತ್ಯರ್ಥಗೊಳಿಸಬೇಕು ಎಂಬ ಇಲಾಖೆಯ ಗುರಿಯನ್ನು ಮುಟ್ಟಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದರು.

ಪರಿಣಾಮ ಇನ್ನೂ 22,967 ಪ್ರಕರಣಗಳು ಬಾಕಿ ಇವೆ. ಮುಂದಿನ ಮೇ 20ಕ್ಕೆ ಸರಕಾರಕ್ಕೂ ಎರಡು ವರ್ಷ ತುಂಬುತ್ತಿದ್ದು, ಅಷ್ಟರೊಳಗೆ ಈ ಪೈಕಿ ಕನಿಷ್ಟ 10 ರಿಂದ 12 ಸಾವಿರ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಎಂದು ಕೃಷ್ಣ ಬೈರೇಗೌಡ ಸೂಚನೆ ನೀಡಿದರು.

ಅಲ್ಲದೆ, ಸರಕಾರದ ಕಾನೂನಿನಂತೆ ಎಸಿ ನ್ಯಾಯಾಲಯದ ಪ್ರಕಣಗಳನ್ನು ಆರು ತಿಂಗಳ ಒಳಗೆ ಮುಗಿಸಬೇಕು ಎಂಬ ನಿಯಮ ಇದೆ. ಆದರೂ, ನಿಮಯ ಮೀರಿ ಐದು ವರ್ಷಕ್ಕೂ ಮೇಲ್ಪಟ್ಟ 5826 ಪ್ರಕರಣಗಳು ಬಾಕಿ ಇದ್ದು, ಈ ಪ್ರಕರಣಗಳನ್ನು ಆದ್ಯತೆ ಮೇರೆ ಶೀಘ್ರ ವಿಲೇವಾರಿಗೊಳಿಸಬೇಕು. ಜೊತೆಗೆ ಉಪ ವಿಭಾಗಾಧಿಕಾರಿಗಳು ತಿಂಗಳಿಗೆ 300 ಹಾಗೂ ವಿಶೇಷ ಉಪ ವಿಭಾಗಾಧಿಕಾರಿಗಳು ತಿಂಗಳಿಗೆ ಕನಿಷ್ಟ 150 ಪ್ರಕರಣಗಳನ್ನು ವಿಲೇವಾರಿ ಮಾಡಬೇಕು ಎಂದು ಅವರು ಸೂಚಿಸಿದರು.

ಗುಣಮಟ್ಟದ ವಿಲೇವಾರಿಗೆ ಸಚಿವರ ಮೆಚ್ಚುಗೆ: ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಅಭಿಯಾನ ಮಾದರಿಯಲ್ಲಿ ಇತ್ಯರ್ಥಗೊಳಿಸಲಾಗುತ್ತಿದೆ. ಬಾಕಿ ಪ್ರಕರಣಗಳ ಇತ್ಯರ್ಥ ಹಿಂದೆದಿಗಿಂತಲೂ ಭಾರೀ ಮಟ್ಟದಲ್ಲಿ ಸುಧಾರಣೆಯಾಗಿದೆ. ಈ ನಡುವೆ ಪ್ರಕರಣಗಳ ಗುಣಮಟ್ಟದ ವಿಲೇವಾರಿಗೂ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಿರುವುದು ಉತ್ತಮ ಬೆಳವಣಿಗೆ ಎಂದು ಕೃಷ್ಣ ಬೈರೇಗೌಡ ಮೆಚ್ಚುಗೆ ಸೂಚಿಸಿದರು.

ಎಸಿ ನ್ಯಾಯಾಲಯಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ ಪ್ರಕರಣಗಳ ಪೈಕಿ ಶೇ.80 ರಷ್ಟು ಹಾಗೂ ಒಂದು ವರ್ಷಕ್ಕೆ ಮೇಲ್ಪಟ್ಟ ಶೇ.70 ರಷ್ಟು ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಆದರೆ, ಡಿಸಿ ನ್ಯಾಯಾಲಯಕ್ಕೆ ಬಂದಿರುವ ಮೇಲ್ಮನವಿಗಳ ಸಂಖ್ಯೆ ಕೇವಲ ಶೇ.6 ರಷ್ಟು ಮಾತ್ರ. ಈ ಸಂಖ್ಯೆ ಎಸಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಗುಣಮಟ್ಟದ ಇತ್ಯರ್ಥಕ್ಕೆ ಸಾಕ್ಷಿಯಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಗುಣಮಟ್ಟದ ಬಗ್ಗೆ ಪ್ರಶ್ನೆ ಏಳಬಹುದು. ಹೀಗಾಗಿ ಅಧಿಕಾರಿಗಳು ಎಂದಿನಂತೆ ಎಚ್ಚರ ವಹಿಸಬೇಕಿದೆ ಎಂದು ಅವರು ತಿಳಿಸಿದರು.

ದಾಖಲೆಗಳ ಡಿಜಿಟಲೀಕರಣ: ‘ಭೂ ಸುರಕ್ಷಾ’ ಯೋಜನೆಯ ಅಡಿಯಲ್ಲಿ ಈಗಾಗಲೇ ಭೂ ಮಾಪನಾ ಇಲಾಖೆ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಉಪ ವಿಭಾಗಾಧಿಕಾರಿಗಳ ಕಚೇರಿಗಳಲ್ಲೂ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಬೇಕು. ಅಲ್ಲದೆ, ಇಂಟರ್ ಲಿಂಕ್ ಮಾಡಿ ಸಾರ್ವಜನಿಕ ವಲಯದಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ತಿಳಿಸಿದರು.

ಕಂದಾಯ ಇಲಾಖೆಯಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಿದರೆ ಜನ ಗುರುತಿಸುತ್ತಾರೆ. ಇದನ್ನೇ ಪ್ರೇರಕ ಶಕ್ತಿಯನ್ನಾಗಿಸಿಕೊಂಡು ಜನರಿಗಾಗಿ ಮತ್ತಷ್ಟು ಕೆಲಸ ಮಾಡಲು ಶಕ್ತಿಮೀರಿ ಶ್ರಮಿಸಬೇಕು. ಇದರಿಂದ ಇಲಾಖೆ ಹಾಗೂ ಸರಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ, ಜನರಿಗೂ ಒಳ್ಳೆಯದಾಗುತ್ತದೆ ಎಂದು ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಇಲಾಖೆ ಆಯುಕ್ತ ಸುನೀಲ್ ಕುಮಾರ್ ಉಪಸ್ಥಿತರಿದ್ದರು.


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News