ಲೋಕಸಭಾ ಚುನಾವಣೆ; ಜ.10ಕ್ಕೆ ಸುರ್ಜೇವಾಲ ನೇತೃತ್ವದಲ್ಲಿ ಸಭೆ: ಸಚಿವ ದಿನೇಶ್ ಗುಂಡೂರಾವ್

Update: 2024-01-05 13:48 GMT

ಬೆಂಗಳೂರು: ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜ.10ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಲೋಕಸಭೆ ಚುನಾವಣಾ ತಯಾರಿ ಬಗ್ಗೆ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ವಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸಂಸದರನ್ನ ಆಯ್ಕೆ ಮಾಡಿ ಕಳುಹಿಸಬೇಕಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಚರ್ಚೆಗಳು ಪಕ್ಷದೊಳಗೆ ನಡೆಯುತ್ತಿದೆ ಎಂದರು.

ಸಮುದಾಯವಾರು ಡಿಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸದ್ಯಕ್ಕೆ ಪಕ್ಷ ಸಂಘಟನೆ, ಲೋಕಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಪಕ್ಷದ ನಾಯಕರ ಗಮನವಿದೆ ಎಂದು ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೋಜನಕೂಟಕ್ಕೆ ಕರೆದಿದ್ದು ನಿಜ. ನಾವೆಲ್ಲ ಭಾಗವಹಿದ್ದೆವು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಇದೊಂದು ಸೌಹಾರ್ದಯುತ ಔತಣವಾಗಿತ್ತು. ಯಾವುದೆ ಕಾರ್ಯಸೂಚಿ ಇರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News