ಸಿದ್ದರಾಮಯ್ಯ ನಾಯಕತ್ವದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ: ಡಿಸಿಎಂ ಡಿ.ಕೆ ಶಿವಕುಮಾರ್

Update: 2024-01-17 12:36 GMT

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷನಾಗಿ ನಾನಿದ್ದೇನೆ. ನಾವಿಬ್ಬರೂ ಸೇರಿ ಲೋಕಸಭಾ ಚುನಾವಣೆಯನ್ನು ನಡೆಸುತ್ತೇವೆ. ಅವರ ನಾಯಕತ್ವದಲ್ಲೆ ಚುನಾವಣೆ ನಡೆಯುತ್ತದೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬುಧವಾರ ಕುಮಾರಕೃಪಾ ಅತಿಥಿ ಗೃಹ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಅವರ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕುರಿತು ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಯತೀಂದ್ರ ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಹೇಳಿಕೆ ತಿರುಚುವ ಅಗತ್ಯವಿಲ್ಲ. ನಮ್ಮ ಸರಕಾರ ಐದು ವರ್ಷ ಬಲಿಷ್ಠವಾಗಿರುತ್ತದೆ. ಆಸೆ ಪಡುವುದು, ಜನರಿಗೆ ಶಕ್ತಿ ನೀಡುವಂತೆ ಕೇಳುವುದು ತಪ್ಪಲ್ಲ. ನಮ್ಮ ಭಾಗದಲ್ಲಿ ನಾನು ಕೂಡ ಶಕ್ತಿ ನೀಡುವಂತೆ ಜನರ ಬಳಿ ಕೇಳುತ್ತೇನೆ. ಅದನ್ನು ತಿರುಚುವ ಅಗತ್ಯವಿಲ್ಲ. ಯತೀಂದ್ರ ಬಹಳ ಜವಾಬ್ದಾರಿಯುತ ನಾಯಕ. ನಾವು ಅವರಿಗೆ ಪ್ರೋತ್ಸಾಹ ನೀಡುತ್ತೇವೆ ಎಂದು ಶಿವಕುಮಾರ್ ಹೇಳಿದರು.

ಶಿವಕುಮಾರ್ ಅವರಿಗೆ ಅಧಿಕಾರ ಸಿಗಬಾರದು ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್ ನಲ್ಲಿ ಆಗಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರು ಅವರ ಪಕ್ಷದ ವಿಚಾರ ಸರಿ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

ಮೈಸೂರು ಸ್ಯಾಂಡಲ್ ನಕಲಿ ಸೋಪು ತಯಾರಕರ ಜತೆ ಬಿಜೆಪಿ ನಾಯಕರ ಒಡನಾಟದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಕಲಿ ಮೈಸೂರು ಸ್ಯಾಂಡಲ್ ಸೋಪ್ ಗಳನ್ನು ನಾನೂ ನೋಡಿದ್ದೇನೆ. ನೈಜ ಹಾಗೂ ನಕಲಿ ಎರಡೂ ಮಾದರಿಯ ಸಾಬೂನು ನೋಡಿದ್ದೇವೆ. ನಕಲಿ ಸೋಪುಗಳು ಒಂದು ದಿನದ ನಂತರ ಬಣ್ಣ ಕಳೆದುಕೊಳ್ಳುತ್ತವೆ. ಈ ಬಗ್ಗೆ ತನಿಖೆಯಾಗಬೇಕು ಎಂದು ನಾನು ಈಗಾಗಲೇ ಹೇಳಿದ್ದೆ ಎಂದರು.

ಈ ಹಿಂದೆ ಮೈಸೂರು ಲ್ಯಾಂಪ್ಸ್ ಗಳನ್ನು ನಕಲು ಮಾಡಲಾಗುತ್ತಿತ್ತು. ಈಗ ಮೈಸೂರ್ ಸ್ಯಾಂಡಲ್ ನಕಲಿ ಸೋಪು ಬಗ್ಗೆ ತನಿಖೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಇದರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಕುಮಾರ್ ತಿಳಿಸಿದರು.

ನಿಗಮ ಮಂಡಳಿ ಪಟ್ಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿಗಮ ಮಂಡಳಿ ನೇಮಕ ಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿ ಯಾವಾಗ ಹೇಳುತ್ತಾರೋ ಆಗ ನಿಮ್ಮ ಗಮನಕ್ಕೆ ತರುತ್ತೇನೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News