ನವೆಂಬರ್ ಅಂತ್ಯದೊಳಗೆ ಬಗರ್ ಹುಕುಂ ಅರ್ಜಿ ವಿಲೇವಾರಿ : ತಹಶೀಲ್ದಾರರಿಗೆ ಗಡುವು ವಿಧಿಸಿದ ಸಚಿವ ಕೃಷ್ಣ ಬೈರೇಗೌಡ

Update: 2024-10-05 14:18 GMT

ಬೆಂಗಳೂರು : ಬಗರ್ ಹುಕುಂ ಅರ್ಜಿಗಳನ್ನು ಎಲ್ಲ ತಹಶೀಲ್ದಾರರು ಅಕ್ಟೋಬರ್ ಹಾಗೂ ನವೆಂಬರ್ ಅಂತ್ಯದವರೆಗೆ ವಿಲೇವಾರಿ ಮಾಡಿ, ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ತಹಶೀಲ್ದಾರರಿಗೆ ನೋಟೀಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದರು.

ಶನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಅವರು, ಅರ್ಹ ಭೂ ಹೀನರಿಗೆ ಜಮೀನು ಮಂಜೂರು ಮಾಡಬೇಕು ಎಂಬುದು ಸರಕಾರದ ಮಹತ್ವಾಕಾಂಕ್ಷಿ ಯೋಜನೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅಕ್ರಮ ಸಕ್ರಮ ಯೋಜನೆಯ ಅಡಿ ‘ಬಗರ್ ಹುಕುಂ’ ಅರ್ಜಿ ಆಹ್ವಾನಿಸಲಾಯಿತು ಎಂದು ತಿಳಿಸಿದರು.

ಅಲ್ಲದೆ, ಕಳೆದ ಒಂದು ವರ್ಷದಿಂದ ಸ್ವತಃ ನಾನು ಎಲ್ಲ ಜಿಲ್ಲೆಗಳಿಗೂ ಪ್ರವಾಸ ಮಾಡುತ್ತಾ, ಬಗರ್ ಹುಕುಂ ಸಂಬಂಧಿತ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೂ, ಕೆಲವು ಅಧಿಕಾರಿಗಳ ಕೆಲಸ ತೃಪ್ತಿಕರವಾಗಿಲ್ಲ. ಬಡವರ, ರೈತರ ಪರ ಕೆಲಸ ಮಾಡಲು ಅಸಡ್ಡೆ ತೋರುತ್ತಿದ್ದಾರೆ ಎಂದು ಅವರು ಅಸಮಾಧಾನ ಹೊರಹಾಕಿದರು.

ಮುಂದುವರೆದು, ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡಲು ಅಧಿಕಾರಿಗಳಿಗಿರುವ ಸಮಸ್ಯೆ ಏನು? ಒಂದು ವರ್ಷದ ನಂತರವೂ ಅಧಿಕಾರಿಗಳು ಈ ಬಗ್ಗೆ ತಡ ಮಾಡುವುದರಲ್ಲಿ ಅರ್ಥವಿಲ್ಲ. ನಮೂನೆ 50, 53 ಮತ್ತು 57ರ ಅಡಿಯಲ್ಲಿ 14ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅನರ್ಹ ಅರ್ಜಿಗಳೇ ಬಹುಪಾಲಿವೆ ಎಂದು ಅವರು ಹೇಳಿದರು.

ಹೀಗಾಗಿ ಅಧಿಕಾರಿಗಳು ತಮ್ಮ ವಿವೇಚನೆಯ ಮೇಲೆ ಅನರ್ಹ ಅರ್ಜಿಗಳನ್ನು ಅನೂರ್ಜಿತಗೊಳಿಸಿ ಅರ್ಹರಿಗೆ ಶೀಘ್ರ ಜಮೀನು ಮಂಜೂರು ಮಾಡಬೇಕು. ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಈ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದೇ ತಿಂಗಳ ಅಂತ್ಯದಲ್ಲಿ ಮತ್ತೊಂದು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಅರ್ಹ ಫಲಾನುಭವಿಗಳಿಗೆ ಭೂ ಮಂಜೂರು ಮಾಡಲು ವಿಳಂಬ ಧೋರಣೆ ಸರಿಯಲ್ಲ. ಈವರೆಗೆ ಎಷ್ಟು ಜನರ ಅರ್ಜಿಗಳು ಅರ್ಹ ಎಂದು ಅಧಿಕಾರಿಗಳು ಗುರುತಿಸಿದ್ದೀರೋ ಆ ಎಲ್ಲರಿಗೂ ಮುಂದಿನ ಒಂದೆರಡು ವಾರದಲ್ಲಿ ಸಾಗುವಳಿ ಚೀಟಿ ನೀಡಿ. ಬಗರ್ ಹುಕುಂ ಕಮಿಟಿ ಸಭೆ ನಡೆಸಲು ಶಾಸಕರು ಸಮಯ ನೀಡದಿದ್ದರೆ ದಯವಿಟ್ಟು ನನಗೆ ತಿಳಿಸಿ, ನಾನು ಅವರ ಜೊತೆ ಮಾತನಾಡಿ ಸಮಯ ನಿಗದಿಗೊಳಿಸುತ್ತೇನೆ ಎಂದು ಅವರು ಆಶ್ವಾಸನೆ ನೀಡಿದರು.

ಇದೇ ಸಂದರ್ಭದಲ್ಲಿ, ಗುಂಡ್ಲುಪೇಟೆ ತಾಲೂಕಿನಲ್ಲಿ ಈಗಾಗಲೇ 15 ಅರ್ಹ ಫಲಾನುಭವಿಗಳನ್ನು ಗುರುತಿಸಿ ಭೂ ಮಂಜೂರು ಮಾಡಲಾಗಿದ್ದು, ತಹಶೀಲ್ದಾರರ ಕೆಲಸಕ್ಕೆ ಸಚಿವರು ಮೆಚ್ಚುಗೆ ಸೂಚಿಸಿದರು. ಅಲ್ಲದೆ, ಉಳಿದ ಅರ್ಜಿಗಳನ್ನೂ ಶೀಘ್ರ ವಿಲೇವಾರಿಗೊಳಿಸುವಂತೆ ಸೂಚಿಸಿದರು.

ಈಗಾಗಲೇ ಸಲ್ಲಿಕೆಯಾಗಿರುವ ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ ಅರ್ಜಿಗಳು ಯಾವುವು? ಅನರ್ಹ ಅರ್ಜಿಗಳು ಯಾವುವು ಎಂದು ತಹಶೀಲ್ದಾರ್ ಗಳಿಗೆ ಪ್ರಾಥಮಿಕ ಪರಿಶೀಲನೆಯಲ್ಲೆ ತಿಳಿಯುತ್ತದೆ. ಹೀಗಾಗಿ ಈ ಕೆಲಸವನ್ನು ಅಧಿಕಾರಿಗಳು ಕಚೇರಿಯಲ್ಲೇ ಮುಗಿಸಿ. ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕೆಳಗೆ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಅವರಿಗೆ ಅನಗತ್ಯವಾಗಿ ಕೆಲಸ ನೀಡಬೇಡಿ. ಅನರ್ಹ ಅರ್ಜಿಗಳ ಪರಿಶೀಲನೆಗಾಗಿ ಅವರನ್ನು ಹೊರಗೆ ಕಳುಹಿಸಬೇಡಿ ಎಂದು ಕೃಷ್ಣ ಬೈರೇಗೌಡ ತಾಕೀತು ಮಾಡಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ ಹಾಗೂ ಕಂದಾಯ ಆಯುಕ್ತ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News