ಗೆಜೆಟ್‍ನಲ್ಲಿನ ತಪ್ಪಿನಿಂದಾಗಿ ಗೊಂದಲ | ವಕ್ಫ್ ಆಸ್ತಿ ಬರೀ 11 ಎಕರೆ, ಮಿಕ್ಕಿದ್ದು ಹೊನವಾಡ ಗ್ರಾಮದ ರೈತರದ್ದು : ಎಂ.ಬಿ.ಪಾಟೀಲ್

Update: 2024-10-26 14:51 GMT

ಬೆಂಗಳೂರು : ಗೆಜೆಟ್‍ನಲ್ಲಿ ತಪ್ಪಾಗಿ ನಮೂದಿಸಿದ್ದರಿಂದಾಗಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ 1,200 ಎಕರೆ ವಕ್ಫ್ ಆಸ್ತಿ ಎನ್ನುವ ಗೊಂದಲ ಸೃಷ್ಟಿಯಾಗಿದೆಯಷ್ಟೇ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

ಶನಿವಾ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಲ್ಲಿ 11 ಎಕರೆ ಮಾತ್ರ ವಕ್ಫ್ ಗೆ ಸೇರಿದ್ದು, ಇದರಲ್ಲಿ 10 ಎಕರೆ 14 ಗುಂಟೆಯಲ್ಲಿ ಖಬರಸ್ತಾನವಿದೆ. ಉಳಿದ 24 ಗುಂಟೆಯಲ್ಲಿ ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ. ಉಳಿದ ಜಮೀನೆಲ್ಲ ರೈತರಿಗೆ ಸೇರಿದೆ. ಇದನ್ನು ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಯೂ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ವಿಜಯಪುರ ಜಿಲ್ಲೆಯಲ್ಲಿ 1974, 1978 ಮತ್ತು 2016ರಲ್ಲಿ ವಕ್ಫ್ ಆಸ್ತಿಗಳ ಅಧಿಸೂಚನೆ ಹೊರಬಿದ್ದಿದೆ. ವಕ್ಫ್ ಆಸ್ತಿ ಇರುವುದು ವಿಜಯಪುರ ನಗರದ ವ್ಯಾಪ್ತಿಯಲ್ಲಿರುವ ಮಹಲ್ ಬಾಗಾಯತ ಗ್ರಾಮದಲ್ಲಿ. ಆದರೆ ಗೆಜೆಟ್ ನ ಬ್ರ್ಯಾಕೆಟ್ ಒಳಗೆ ಹೊನವಾಡ ಎಂದು ಬರೆದು ಬಿಟ್ಟಿದ್ದಾರೆ. ಈ ವಿಷಯವನ್ನು ರೈತರು ನಮ್ಮ ಗಮನಕ್ಕೆ ತಂದ ಕೂಡಲೇ ಅ.19ರಂದು ಜಿಲ್ಲಾಧಿಕಾರಿ, ತಹಶೀಲ್ದಾರ್ ಎಲ್ಲರನ್ನೂ ಕರೆದು, ಸಭೆ ನಡೆಸಿ, ಸೂಕ್ತ ನಿರ್ದೇಶನ ಕೊಟ್ಟಿದ್ದೇನೆ ಎಂದು ಅವರು ತಿಳಿಸಿದರು.

ಈ ವಿಚಾರದಲ್ಲಿ ಬಿಜೆಪಿ ನಾಯಕರಾದ ತೇಜಸ್ವಿ ಸೂರ್ಯ, ಯತ್ನಾಳ್ ರಾಜಕೀಯ ಮಾಡಬೇಕಾಗಿಲ್ಲ. ರೈತರ ಒಂದಿಂಚು ಕೂಡ ವಕ್ಫ್ ಆಸ್ತಿ ಆಗಲು ಬಿಡಲ್ಲ. ಹೊನವಾಡ ಗ್ರಾಮವು ನಾನು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದಲ್ಲೇ ಇದೆ. ಇಲ್ಲಿನ ಹತ್ತು ಸರ್ವೇ ನಂಬರುಗಳಲ್ಲಿರುವ 11 ಎಕರೆ ಮಾತ್ರ ವಕ್ಫ್ ಆಸ್ತಿಯಷ್ಟೇ. 1974ರ ಗೆಜೆಟ್ ನಲ್ಲಿನ ತಪ್ಪುಗಳನ್ನು ವಕ್ಫ್ ಮಂಡಳಿಯೆ 1977ರಲ್ಲಿ ತಿದ್ದುಪಡಿ ಮಾಡಿ, ಬ್ರ್ಯಾಕೆಟ್‍ನಲ್ಲಿದ್ದ ಹೊನವಾಡ ಹೆಸರನ್ನು ತೆಗೆದಿದೆ ಎಂದು ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು.

ಯಾವುದು ನಿಯಮಾನುಸಾರ ವಕ್ಫ್ ಆಸ್ತಿಯೋ ಅದಷ್ಟೇ ಅವರಿಗೆ ಸೇರುತ್ತದೆ. ರೈತರಾಗಲಿ, ಖಾಸಗಿ ಮಾಲಕರಾಗಲಿ ಈ ಬಗ್ಗೆ ಗೊಂದಲಕ್ಕೆ ಒಳಗಾಗಬೇಕಾಗಿಲ್ಲ. ಈ ಸಂಬಂಧ ನಾನು ಅಧಿಕಾರಿಗಳೊಂದಿಗೆ ಸದ್ಯದಲ್ಲೇ ಮತ್ತೊಂದು ಸಭೆ ನಡೆಸುತ್ತೇನೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News