ಕೋರ್ಟ್ ಪ್ರಕರಣಗಳನ್ನು ನಿರ್ವಹಣೆ ಮಾಡದಿದ್ದರೆ ಅಧಿಕಾರಿಗಳೇ ಹೊಣೆ : ಸಚಿವ ಭೋಸರಾಜು

Update: 2024-10-18 15:29 GMT

ಬೆಂಗಳೂರು: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಿಸುವುದು ಹಾಗೂ ನ್ಯಾಯಾಲಯಕ್ಕೆ ಅಗತ್ಯ ದಾಖಲೆಗಳನ್ನು ಸರಿಯಾದ ಸಮಯದಲ್ಲಿ ಸಲ್ಲಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಇದನ್ನು ಸಮರ್ಪಕವಾಗಿ ನಿಭಾಯಿಸದೆ, ಇದ್ದಲ್ಲಿ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿಸುವ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸುವಂತೆ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಸೂಚನೆ ನೀಡಿದರು.

ಶುಕ್ರವಾರ ವಿಕಾಸಸೌಧದಲ್ಲಿ ಸಭೆ ನಡೆಸಿದ ಅವರು, ಹಲವಾರು ವರ್ಷಗಳಿಂದ ವಿವಿಧ ನ್ಯಾಯಾಲಯಗಳಲ್ಲಿ ಇತ್ಯರ್ಥವಾಗದೇ ಇರುವಂತಹ ಅನೇಕ ಪ್ರಕರಣಗಳ ಬಗ್ಗೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರೊಂದಿಗೆ ಚರ್ಚಿಸಿದರು. ರೈತರಿಗೆ ಅನ್ಯಾಯವಾಗದಂತೆ ಹಾಗೂ ಸರಕಾರಕ್ಕೆ ಹೊರೆ ಆಗದಂತೆ ಈ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಅಡ್ವೋಕೇಟ್ ಜನರಲ್ ಅವರಿಂದ ಸಲಹೆಯನ್ನು ಪಡೆದುಕೊಳ್ಳಲಾಯಿತು.

ಭೂಸ್ವಾಧೀನ ಪ್ರಕರಣಗಳೇ ಹೆಚ್ಚು: ಸಣ್ಣ ನೀರಾವರಿ ಇಲಾಖೆಯಲ್ಲಿ ಭೂಸ್ವಾಧೀನ ಪ್ರಕರಣಗಳು ಹೆಚ್ಚಾಗಿ ಬಾಕಿಯಿವೆ. ಕೆಲವು ಪ್ರಕರಣಗಳಲ್ಲಿ ಸರಿಯಾದ ದಾಖಲೆ ಸಲ್ಲಿಸದೇ ಇರುವ ಕಾರಣ ಹೆಚ್ಚುವರಿ ಹಣ ನೀಡುವ ಪರಿಸ್ಥಿತಿ ಎದುರಾಗಿದೆ. ಈ ಪ್ರಕರಣಗಳಲ್ಲಿ ಸರಿಯಾದ ಸಮಯದಲ್ಲಿ ದಾಖಲೆ ಸಲ್ಲಿಸದೇ ಅಧಿಕಾರಿಗಳು ನಿರ್ಲಕ್ಷವಹಿಸಿರುವುದು ಕಂಡುಬಂದಿದೆ. ಇಂತಹ ಉದಾಸೀನ ಧೋರಣೆಯಿಂದಾಗಿ ಸರಕಾರದ ಬೊಕ್ಕಸಕ್ಕೆ ಹೆಚ್ಚಿನ ಹೊರೆಯಾಗುತ್ತಿದೆ ಎಂದು ಅವರು ಹೇಳಿದರು.

ಮುಂದಿನ ದಿನಗಳಲ್ಲಿ ನ್ಯಾಯಾಲಯದಲ್ಲಿನ ಪ್ರಕರಣಗಳ ಬಗ್ಗೆ ಉದಾಸೀನ ತೋರಿಸುವ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸುವ ನಿಟ್ಟಿನಲ್ಲಿ ಸರಕಾರದಿಂದ ಸುತ್ತೋಲೆಯನ್ನು ಹೊರಡಿಸುವಂತೆ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗೆ ಭೋಸರಾಜು ಸೂಚನೆ ನೀಡಿದರು.

ಇನ್ನು ಮುಂದೆ ಹೊಸ ಯೋಜನೆಗಳನ್ನು ಪ್ರಾರಂಭಿಸುವ ಸಮಯದಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಮುಗಿಸಲು ಆದ್ಯತೆ ನೀಡಬೇಕು. ಒಂದಾವರ್ತಿ ಪರಿಹಾರ(ಒನ್ ಟೈಮ್ ಸೆಟ್ಲಮೆಂಟ್)ಕ್ಕೆ ಆದ್ಯತೆ ನೀಡಬೇಕು ಹಾಗೂ ಪ್ರಕರಣಗಳು ನ್ಯಾಯಾಲಯಕ್ಕೆ ಹೋಗದಂತೆ ರೈತರಿಗೆ ಶೀಘ್ರದಲ್ಲಿ ಹಣ ಪಾವತಿಸಬೇಕು ಎಂದು ಅವರು ಸೂಚನೆ ನೀಡಿದರು.

ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ರಾಘವನ್, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ನಿರ್ದೇಶಕ ಬಿ.ಕೆ.ಪವಿತ್ರಾ ಹಾಗೂ ಇಲಾಖೆಯ ಮುಖ್ಯ ಇಂಜಿನಿಯರ್‌ಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News