‘ಕಾಯಕ ಪಂಚಾಯಿತಿ’ ಪರಿಕಲ್ಪನೆ ಅನುಷ್ಠಾನಕ್ಕೆ ಚಿಂತನೆ : ಸಚಿವ ಪ್ರಿಯಾಂಕ್ ಖರ್ಗೆ

Update: 2024-10-23 15:21 GMT

ಬೆಂಗಳೂರು: ಗಾಂಧೀ ಮತ್ತು ಬಸವಣ್ಣನವರ ವಿಚಾರಗಳಿಗೆ ಸಂಬಂಧಿಸಿದಂತೆ ಕಾಯಕ ಪಂಚಾಯಿತಿ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ನಡೆದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ಆಗಿ 30 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಾದೇಶಿಕವಾರು ರಾಷ್ಟ್ರೀಯ ಸ್ವರಾಜ್ ಸಮ್ಮೇಳನಗಳನ್ನು ಆಯೋಜಿಸಲಾಗುವುದು ಎಂದರು.

ಹೊಸ ತಂತ್ರಜ್ಞಾನದ ಮೂಲಕ ಬೆರಳ ತುದಿಯಲ್ಲಿ ಗಾಂಧೀಜಿಯವರ ಮಹತ್ವ ಕುರಿತ ಮಾಹಿತಿಗಳನ್ನು ಯುವಜನರು ಮತ್ತು ಹೊಸ ಪೀಳಿಗೆಗೆ ಮರುಪರಿಚಯಿಸುವ ಹಾಗೂ ಜಾಗತಿಕವಾಗಿ ಸುಮಾರು 100ಕ್ಕೂ ಹೆಚ್ಚು ದೇಶಗಳಲ್ಲಿರುವ ಗಾಂಧೀಜಿಯವರ ಪ್ರತಿಮೆ ಮತ್ತು ಸಂಬಂಧಿತ ಸ್ಥಳಗಳ ಕುರಿತ ಮಾಹಿತಿಯನ್ನು ಯುವಜನರು ಮತ್ತು ಹೊಸಪೀಳಿಗೆಗೆ ಪರಿಚಯಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ಮೂಲಕ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ರಾಜ್ಯದಲ್ಲಿ 57 ಸಾವಿರಕ್ಕೂ ಹೆಚ್ಚು ಶಾಲೆಗಳಿವೆ. ಶೈಕ್ಷಣಿಕ ಕ್ಯಾಲೆಂಡರ್‌ ಗೆ ವ್ಯತ್ಯಯವಾಗದಂತೆ ಗಾಂಧೀಜಿಯವರ ಕುರಿತು ಪ್ರಬಂಧ, ಭಾಷಣ, ಚಿತ್ರಕಲೆ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಗಾಂಧೀಜಿಯವರ ಉಕ್ತಿಗಳು ಹಾಗೂ ಅವರು ಹೇಳಿದ ಏಳು ಸಾಮಾಜಿಕ ಪಾತಕಗಳ ಕುರಿತು ಡಿಜಿಟಲ್ ಮುದ್ರಣಗಳನ್ನು ಎಲ್ಲ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಅನಾವರಣಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ಇಲಾಖೆಯ ವಿವಿಧ ಅಕಾಡೆಮಿಗಳ ಮೂಲಕ ಹಿಂದಿ, ಉರ್ದು, ತುಳು, ಕೊಡವ, ಕೊಂಕಣಿ, ಲಂಬಾಣಿ ಮತ್ತಿತರ ಭಾಷೆಗಳಲ್ಲಿ ಮಹಾತ್ಮಾ ಗಾಂಧೀಜಿಯವರ ಕುರಿತು ಕಿರುಪುಸ್ತಕಗಳನ್ನು ಪ್ರಕಟಿಸಿ ವಿತರಿಸಲಾಗುವುದು ಎಂದರು.

ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಗಾಂಧಿ ಭಾರತ ಕಾರ್ಯಕ್ರಮದ ಸ್ಮರಣಾರ್ಥ ರಾಜ್ಯದ ಪ್ರಮುಖ ಸ್ಥಳಗಳಲ್ಲಿ 100 ಲಕ್ಷ ಸಸಿಗಳನ್ನು ಹೆಚ್ಚುವರಿಯಾಗಿ ನೆಡಲು ಕ್ರಮವಹಿಸಲಾಗುವುದು ಎಂದರು.

ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಶತಮಾನೋತ್ಸವ ಸಂದರ್ಭದಲ್ಲಿ ಬೆಳಗಾವಿ ನಗರದಲ್ಲಿ ಆಕರ್ಷಕವಾಗಿ ವಿದ್ಯುತ್ ದೀಪಾಲಂಕಾರ ಮಾಡಲಾಗುವುದು. ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ ಪ್ರಮುಖ ಸ್ಥಳಗಳಲ್ಲಿ ಸ್ಥಳೀಯ ಆಡಳಿತ ಹಾಗೂ ಸಂಸ್ಥೆಗಳ ಸಹಯೋಗದಲ್ಲಿ ದೀಪಾಲಂಕಾರ ಮಾಡಲು ಕ್ರಮ ವಹಿಸುವುದಾಗಿ ತಿಳಿಸಿದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಗಾಂಧೀ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ ಕೆಲವು ವಿಶ್ವವಿದ್ಯಾಲಯಗಳಲ್ಲಿರುವ ಗಾಂಧೀ ಅಧ್ಯಯನ ವಿಭಾಗಗಳ ಚಟುವಟಿಕೆಗಳನ್ನು ಪುನಶ್ಚೇತನಗೊಳಿಸಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News