ಮುಂಗಾರು ಅಧಿವೇಶನ | ನನ್ನ ಸಾರ್ವಜನಿಕ ಜೀವನದಲ್ಲಿ ಒಂದೂ ಕಪ್ಪುಚುಕ್ಕೆ ಇಲ್ಲ : ಸಿಎಂ ಸಿದ್ದರಾಮಯ್ಯ

Update: 2024-07-25 12:56 GMT

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದಲ್ಲಿ ನನ್ನ ಪಾತ್ರವಿಲ್ಲ. 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ನನ್ನ ಮೇಲೆ ಒಂದೂ ಕಪ್ಪುಚುಕ್ಕೆ ಇಲ್ಲ. ಈಗ ನನ್ನ ಮುಖಕ್ಕೆ ಮಸಿ ಬಳಿಯಲು ಹೊರಟಿರುವ ವಿಪಕ್ಷದವರ ಪ್ರಯತ್ನ ಈಡೇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ವಿಧಾನ ಪರಿಷತ್‍ನಲ್ಲಿ ‘ಮುಡಾ ಅಕ್ರಮ’ದ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಪ್ರತಿಪಕ್ಷದ ಸದಸ್ಯರು ಎತ್ತಿರುವ ವಿಷಯದಲ್ಲಿ ನನ್ನ ಪಾತ್ರವೇ ಇಲ್ಲ. ಬಿಜೆಪಿ-ಜೆಡಿಎಸ್ ಸದಸ್ಯರ ಉದ್ದೇಶ ಏನೆಂಬುದು ಸ್ಪಷ್ಟವಾಗಿ ಗೊತ್ತಿದೆ. ನಾನು ಮುಖ್ಯಮಂತ್ರಿ ಸ್ಥಾನದಲ್ಲಿದ್ದೇನೆಂಬ ಕಾರಣಕ್ಕಾಗಿ ಅವರಿಗೆ ಹೊಟ್ಟೆ ಉರಿ ಎಂದು ವಾಗ್ದಾಳಿ ನಡೆಸಿದರು.

ನಾವು ಕಾನೂನುಬದ್ಧವಾಗಿ ನಿವೇಶನ ಹಂಚಿಕೆ ಮಾಡುವಂತೆ ಮುಡಾದವರಿಗೆ ಅರ್ಜಿ ಕೊಟ್ಟಿದ್ದೆವು. ಶೇ.50ಃ50ರ ಅನುಪಾತದಲ್ಲಿ ಕಾನೂನಿನಡಿಯೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು. ನಿಯಮಾನುಸುರವಾಗಿ ನಿವೇಶನ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ತಪ್ಪಿನ ಪ್ರಶ್ನೆ ಎಲ್ಲಿದೆ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಮುಡಾದವರು ನಿಯಮಾನುಸಾರ ನಿವೇಶನ ಹಂಚಿಕೆ ಮಾಡುತ್ತಾರೆ. 38 ಚದರ ಅಡಿಯಲ್ಲಿ ಸ್ವತಃ ನಮ್ಮದೇ ಭೂಮಿ ಹೋಗಿದೆ. ನಾನು 2014ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಈ ಅಕ್ರಮ ನಡೆದಿಲ್ಲ ಎಂದು ಹೇಳಿದ್ದೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಾವು ಇಂತಹ ಕಡೆಯೇ ನಿರ್ದಿಷ್ಟ ಸ್ಥಳದಲ್ಲಿ ನಿವೇಶನ ಕೊಡಿ ಎಂದು ಕೇಳಿದ್ದರೆ ಅದು ನಿಯಮ ಬಾಹಿರವಾಗುತ್ತಿತ್ತು. ಮುಡಾದವರೇ ನಿವೇಶನ ಹಂಚಿಕೆ ಮಾಡಿರುವಾಗ ನಾವೇನು ಮಧ್ಯಪ್ರವೇಶ ಮಾಡಿದ್ದೇವಾ? ಎಂದು ಪ್ರತಿಪಕ್ಷದ ಸದಸ್ಯರದ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ನಿಷ್ಪಕ್ಷಪಾತವಾಗಿ ತನಿಖೆ ವರದಿ ಬರಲಿದೆ. ಮುಡಾ ಅಧ್ಯಕ್ಷರಾಗಿದ್ದ ರಾಜೀವ್ ಅವರೇ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ. ಬಿಜೆಪಿ ಕಾಲದಲ್ಲೇ ಇದು ನಡೆದಿರುವುದು. ಈಗ ನನ್ನ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಲ್ಲಿ ನೀವು ಯಶಸ್ವಿಯಾಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಅಧಿವೇಶನದ ಕಲಾಪ ನಡೆಯಬಾರದೆಂದು ಉದ್ದೇಶಪೂರ್ವಕವಾಗಿ ಪದೇ ಪದೇ ಒಂದೇ ವಿಷಯವನ್ನು ಪ್ರಸ್ತಾಪಿಸುತ್ತಿದ್ದಾರೆ. ಈಗಾಗಲೇ ಸಭಾಪತಿಯವರು ನಿಲುವಳಿ ಸೂಚನೆ ಪ್ರಸ್ತಾವನೆಯನ್ನು ತಿರಸ್ಕಾರಿಸಿದ್ದೇವೆ ಎಂದು ರೂಲಿಂಗ್ ಕೊಟ್ಟಿದ್ದಾರೆ. ಆದರೂ, ಅದೇ ವಿಷಯವನ್ನು ಚರ್ಚೆಗೆ ಕೊಡಬೇಕೆಂದು ಪಟ್ಟು ಹಿಡಿಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಆಗ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ನೀವು ಈ ವಿಷಯವನ್ನು ವೈಯಕ್ತಿಕವಾಗಿ ತೆಗೆದುಕೊಂಡಿದ್ದೀರಿ. ನಿಮ್ಮ ಮೇಲೆ ನಮಗೆ ಯಾವುದೇ ದ್ವೇಷವಿಲ್ಲ. ಮುಡಾದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ನಾವು ಚರ್ಚೆಗೆ ಕೇಳುತ್ತಿದ್ದೇವೆ. ಇದು ತಪ್ಪೇ ಎಂದು ಪ್ರಶ್ನಿಸಿದರು.

ಇದು ಸಾವಿರಾರು ಕೋಟಿಗಳ ವಿಷಯ. ಸ್ವತಃ ಮುಖ್ಯಮಂತ್ರಿಗಳ ಕುಟುಂಬದವರೇ ಶಾಮೀಲಾಗಿದ್ದಾರೆ ಎಂಬ ಆರೋಪವಿದೆ. ಇಂತಹ ಮಹತ್ವದ ವಿಷಯವನ್ನು ಚರ್ಚೆ ಮಾಡಲೇಬಾರದೆಂದರೆ ಹೇಗೆ ಎಂದು ಮರು ಪ್ರಶ್ನೆ ಹಾಕಿದರು.

ಈ ವೇಳೆ ಪ್ರತಿಪಕ್ಷಗಳ ಸದಸ್ಯರು ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಆಗ ಆಡಳಿತ ಪಕ್ಷದವರು ಯಡಿಯೂರಪ್ಪ, ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಅವಧಿಯಲ್ಲಿ ನಡೆದಿರುವ ಅಕ್ರಮಗಳನ್ನು ಪ್ರಸ್ತಾಪಿಸಿ ತಿರುಗೇಟು ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News