ಇ-ಖಾತಾ ಮಾಡಿಸಿಕೊಳ್ಳಲು ಯಾವುದೇ ಗಡುವು ನಿಗದಿ ಮಾಡಿಲ್ಲ: ಸಚಿವ ಕೃಷ್ಣ ಬೈರೇಗೌಡ

Update: 2024-10-07 15:57 GMT

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ಆಸ್ತಿ ಇ-ಖಾತಾ ಮಾಡಿಸಿಕೊಳ್ಳಲು ಯಾವುದೇ ಗಡುವು ನಿಗದಿ ಮಾಡಿಲ್ಲ. ಹೀಗಾಗಿ ಸಾರ್ವಜನಿಕರು ಗಾಬರಿಯಾಗುವ ಅಥವಾ ಆತುರಪಡುವ ಅಗತ್ಯ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ ನೀಡಿದ್ದಾರೆ.

ಇಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬಳಿಕ ವಿಕಾಸಸೌಧದಲ್ಲಿ ತುರ್ತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಈ ಭಾಗದ ವ್ಯಾಪ್ತಿಯ ಕೆಲವು ಭಾಗದಲ್ಲಿ ಮಧ್ಯವರ್ತಿಗಳು ಇ-ಖಾತಾಗೆ ಸರ್ಕಾರ ಸಮಯ ನಿಗದಿಪಡಿಸಲಾಗಿದೆ ಎಂದು ಜನರಲ್ಲಿ ಗೊಂದಲ ಸೃಷ್ಟಿಸಿ, ಇ-ಖಾತೆ ಮಾಡಿಸಿಕೊಡುವ ಜನರನ್ನು ಸುಲಿಗೆ ಮಾಡಿರುವ ಘಟನೆ ಗಮನಕ್ಕೆ ಬಂದಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಆದರೆ, ಆಸ್ತಿ ಮಾಲಕರು ಇ-ಖಾತಾ ಮಾಡಿಸಿಕೊಳ್ಳಲು ಸರಕಾರ ಯಾವುದೇ ಸಮಯ ನಿಗದಿ ಮಾಡಿಲ್ಲ. ಹೀಗಾಗಿ ಸಾರ್ವಜನಿಕರು ಗಾಬರಿಗೊಳಗಾಗದೆ, ಆತುರಪಡದೆ ತಮ್ಮ ಸಮಯವನ್ನು ನೋಡಿಕೊಂಡು ಈ-ಖಾತಾ ಮಾಡಿಸಿಕೊಳ್ಳಬಹುದು. ಊಹಾಪೋಹಗಳಿಗೆ ಕಿವಿಕೊಟ್ಟು ಆತಂಕಕ್ಕೆ ಒಳಗಾಗಬೇಡಿ ಎಂದು ಅವರು ಮನವಿ ಮಾಡಿದರು.

ನಕಲಿ ನೋಂದಣಿ ಪ್ರಕರಣಗಳನ್ನು ತಡೆಯುವ ಸಲುವಾಗಿಯೇ ಇ-ಖಾತಾ ವ್ಯವಸ್ಥೆ ಜಾರಿಗೆ ತರಲಾಗಿದೆ. ಆದರೆ, ಇ-ಖಾತಾ ಪಡೆಯಲು ಆತುರ ಬೇಕಿಲ್ಲ. ನಿವೇಶನಗಳನ್ನು ಮಾರುವ ಅಥವಾ ಕೊಳ್ಳುವ ಪ್ರಕ್ರಿಯೆಯಲ್ಲಿ ಮಾತ್ರ ಇ-ಖಾತಾ ಕಡ್ಡಾಯ ಎಂದು ಕೃಷ್ಣ ಬೈರೇಗೌಡ ಸ್ಥಾಪಿಸಿದ್ದಾರೆ.

ಜೊತೆಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ಪಾಲಿಕೆಯ ವಿಶೇಷ ಆಯುಕ್ತರ ಜೊತೆ ಚರ್ಚಿಸಿ ಇ-ಖಾತಾ ಪ್ರಕ್ರಿಯೆಯನ್ನು ಸರಳೀಕರಿಸಲು ಜನರಿಗೆ ಅನುಕೂಲ ಮಾಡಿಕೊಡಲು ಸೂಕ್ತ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರಿಗೆ ಮಾಹಿತಿ ನೀಡಲಾಗಿದೆ.

ಮನೆಯಿಂದಲೇ ಪಡೆಯಬಹುದು ಇ-ಖಾತಾ: ಬೆಂಗಳೂರಿನಲ್ಲಿ 21 ಲಕ್ಷ ನಿವೇಶನಗಳಿವೆ. ಅವುಗಳ ಡ್ರಾಫ್ಟ್‌ಗಳನ್ನು ಬಿಂಬಿಸಲು ತನ್ನ ವೆಬ್‌ಸೈಟ್‌ನಲ್ಲಿ ಹಾಕಿದೆ. ಆಸ್ತಿ ಮಾಲಕರು ಈ ಡ್ರಾಫ್ಟ್ ಅನ್ನು ನೋಡಿ, ಅಗತ್ಯ ದಾಖಲೆಗಳನ್ನು ವೆಬ್‌ಸೈಟ್‌ನಲ್ಲೇ ಲಗತ್ತಿಸುವ ಮೂಲಕ ಯಾವುದೇ ಕಚೇರಿಗೆ ಹೋಗದೆ ಮನೆಯಿಂದಲೇ ಶಾಶ್ವತ ಇ-ಖಾತಾ ಪಡೆದುಕೊಳ್ಳಬಹುದು ಎಂದು ಕೃಷ್ಣ ಬೈರೇಗೌಡ ಅವರು ಬರೆದಿದ್ದಾರೆ.

ಇ-ಖಾತಾ ಹೆಲ್ಪ್ ಡೆಸ್ಕ್: ಆಸ್ತಿ ಮಾಲೀಕರು ಯಾವುದೇ ಗೊಂದಲವಿಲ್ಲದೆ, ಸುಲಭವಾಗಿ ಇ-ಖಾತಾ ಪಡೆಯುವ ಸಲುವಾಗಿ ತತಕ್ಷಣ ಜಾರಿಯಾಗುವಂತೆ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಸಹಾಯಕ ವಿಭಾಗದ ಅಧಿಕಾರಿ ಕಚೇರಿಗಳಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ ಎಂದು ಅವರು ಹೇಳಿದರು.

ಜೊತೆಗೆ, ಇ-ಖಾತಾ ಪಡೆಯಲು ಆಸ್ತಿ ಮಾಲಕರು ಕೆಲವು ದಾಖಲೆಗಳನ್ನು ನೀಡಬೇಕಾಗಿದೆ, 'ಬೆಂಗಳೂರು ಓನ್' ಕಚೇರಿಗಳ ಮುಖಾಂತರ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವ ಮೂಲಕ ತಮ್ಮ ಇ-ಖಾತೆಯನ್ನು ಪಡೆದುಕೊಳ್ಳಬಹುದು. ಮುಂದಿನ ಎರಡು-ಮೂರು ದಿನಗಳಲ್ಲಿ ಬೆಂಗಳೂರು-ಒನ್ ಕಚೇರಿಗಳಿಗೆ ಈ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಕೃಷ್ಣ ಬೈರೇಗೌಡ ಹೇಳಿದರು.

ಕೆಲವು ಇ-ಖಾತಾಗೆ ಗೊಂದಲಗಳಿರುವುದು ನಿಜ. ಆದರೆ, ಆಸ್ತಿ ಮಾಲಕರು ಒಂದು ಬಾರಿ ಈ-ಖಾತಾ ಮಾಡಿಸಿಕೊಂಡರೆ ಯಾವ ಮಧ್ಯವರ್ತಿಗಳ ಮುಲಾಜಿಲ್ಲದೆ ಬದುಕಬಹುದು. ಸಾರ್ವಜನಿಕರ ಅನುಕೂಲಕ್ಕಾಗಿಯೇ ಹಲವು ಸವಾಲುಗಳ ನಡುವೆಯೂ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ, ಇದು ನಕಲಿ ನೋಂದಣಿಗಳನ್ನು ತಡೆಯುವುದಕ್ಕೂ ಇದು ಸಹಕಾರಿಯಾಗಲಿದೆ ಎಂದು ಅವರು ಪ್ರಕಟಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News