ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಬಿಜೆಪಿ ನಾಯಕರ ನೆಮ್ಮದಿ ಕೆಡಿಸಿದೆ: ದಿನೇಶ್ ಗುಂಡೂರಾವ್

Update: 2023-07-05 05:07 GMT

ಬೆಂಗಳೂರು: ನಮ್ಮ ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಬಿಜೆಪಿ ನಾಯಕರ ನಿದ್ದೆ ಹಾಗೂ ನೆಮ್ಮದಿ ಕೆಡಿಸಿದೆ. ಹಾಗಾಗಿ BJP ನಾಯಕರ ಪ್ರತಿಭಟನೆ ಅತೃಪ್ತ ಆತ್ಮಗಳ ವೃಥಾ ಆಲಾಪದಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಯ ನಡೆಯ ವಿರುದ್ಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಜೆಪಿಯವರು ಅಧಿವೇಶನದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅನಗತ್ಯವಾಗಿ ಗದ್ದಲ ಎಬ್ಬಿಸುತ್ತಿದ್ದಾರೆ. ಈಗಾಗಲೇ ನಮ್ಮ ಸರ್ಕಾರ, ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ 3 ಗ್ಯಾರಂಟಿ ಅನುಷ್ಠಾನಕ್ಕೆ ತಂದಿದೆ. ಗೃಹಲಕ್ಷ್ಮಿ ಯೋಜನೆ ಆಗಸ್ಟ್ 15 ರಿಂದ ಚಾಲನೆಯಾಗಲಿದೆ. ಯುವನಿಧಿ ಯೋಜನೆಗೂ ಚಾಲನೆ ದೊರೆಯಲಿದೆ. ಹೀಗಿರುವಾಗ BJPಯವರಿಗೆ ಏನು ಸಮಸ್ಯೆ?ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ BJP ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸುತ್ತಿರುವುದು ಹತಾಶೆಯಿಂದಲೇ ಹೊರತು ಮತ್ಯಾವ ಕಾರಣದಿಂದಲೂ ಅಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅಧಿವೇಶನದಲ್ಲಿ ಅಂಗಿ ಹರಿದುಕೊಳ್ಳುವುದ ಬಿಟ್ಟು ಕೇಂದ್ರ ಅಕ್ಕಿ ಕೊಡದ ಬಗ್ಗೆ ಚಕಾರ ಎತ್ತಿದ್ದರೆ ರಾಜ್ಯದ ಜನ ಭೇಷ್ ಎನ್ನುತ್ತಿದ್ದರು. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದಾಗ ರಾಜ್ಯ ಬಿಜೆಪಿಯವರ ನಾಲಗೆಯ ಪಸೆ ಆರಿ ಹೋಗಿತ್ತು. ಈಗ ಅಕ್ಕಿ ಕೊಡಿ ಎನ್ನುತ್ತಿದ್ದಾರೆ. ಇವರಿಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News