ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿ ಶೀಟ್ ತೆರೆಯಲು ಸಿದ್ಧತೆ: ಪೊಲೀಸರಿಂದ ನೋಟಿಸ್ ಜಾರಿ

Update: 2023-06-28 17:51 GMT

ಬೆಂಗಳೂರು, ಜೂ. 28: ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಕಾರಾಗೃಹದಿಂದ ಬಿಡುಗಡೆಯಾಗಿರುವ ಸಂಘ ಪರಿವಾರದ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿ ಶೀಟ್ ತೆರೆಯಲು ಚಾಮರಾಜಪೇಟೆ ಠಾಣಾ ಪೊಲೀಸರು ಪ್ರಕ್ರಿಯೆ ಆರಂಭಿಸಿದ್ದಾರೆ.

ಇಲ್ಲಿನ ಚಾಮರಾಜಪೇಟೆ, ರಾಮನಗರ ಹಾಗೂ ವಿಜಯನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಗಲಭೆ, ದೊಂಬಿ, ಕೊಲೆ ಬೆದರಿಕೆ ಹಾಗೂ ಹಲ್ಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧ ರೌಡಿಶೀಟ್ ತೆರೆಯಲು ವರದಿ ಸಲ್ಲಿಸಲಾಗಿದೆ.

ಈ ಸಂಬಂಧ ಚಿಕ್ಕಪೇಟೆ ಉಪವಿಭಾಗ ಎಸಿಪಿ ಕೆರೆಹಳ್ಳಿಗೆ ನೊಟೀಸ್ ಜಾರಿ ಮಾಡಿದ್ದಾರೆ. ದೊಂಬಿ, ಕೊಲೆ, ಹಲ್ಲೆ, ಜೀವ ಬೆದರಿಕೆ ಹಾಗೂ ಇನ್ನಿತರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ವಿರುದ್ಧ ಏಕೆ ರೌಡಿಪಟ್ಟಿ ತೆರೆಯಬಾರದು ಎಂಬುದಕ್ಕೆ ಕೂಡಲೇ ವಿವರಣೆ ಸಲ್ಲಿಸಬಹುದು. ವಿವರಣ ನೀಡದಿದ್ದಲ್ಲಿ ಏನು ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು ಎಂದು ಪುನೀತ್‍ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಗೋ ಸಾಗಣಿಕೆ ಆರೋಪದಲ್ಲಿ ಇದ್ರೀಶ್ ಪಾಷಾ ಎಂಬವರು ಅನುಮಾನಾಸ್ಪದ ರೀತಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಹಾಗೂ ಇತರೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಮಾರ್ಚ್ 31ರಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಬಳಿ ಅಕ್ರಮ ಜಾನುವಾರು ಸಾಗಾಣಿಕೆ ನಡೆಯುತ್ತಿದ್ದ ವೇಳೆ ಕೆರೆಹಳ್ಳಿ ಮತ್ತಿತರರು ಇದ್ರೀಶ್ ಪಾಷಾನನ್ನು ಕೊಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News