ರಾಜ್ಯದಲ್ಲಿ ಶೇ.50ಕ್ಕಿಂತ ಹೆಚ್ಚು ಪ್ರದೇಶದಲ್ಲಿ ಮಳೆ ಕೊರತೆ: ಸಚಿವ ಕೃಷ್ಣಭೈರೇಗೌಡ‌

Update: 2023-08-22 15:05 GMT

ಬೆಂಗಳೂರು, ಆ.22: ರಾಜ್ಯದಲ್ಲಿ ಮುಂಗಾರು ಕೈ ಕೊಟ್ಟಿದ್ದು, ಶೇ.50ಕ್ಕಿಂತ ಹೆಚ್ಚು ಪ್ರದೇಶ ಮಳೆ ಕೊರತೆಯನ್ನು ಎದುರಿಸುತ್ತಿದೆ. ಮುಂದಿನ ದಿನಗಳಲ್ಲಿಯೂ ಮಳೆಯ ಮುನ್ಸೂಚನೆ ಕಾಣುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಮಂಗಳವಾರ ವಿಧಾನಸೌಧದಲ್ಲಿ ಬರ, ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ರಚಿಸಲಾಗಿರುವ ಸಂಪುಟ ಉಪ ಸಮಿತಿಯ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಜೂನ್‍ನಲ್ಲಿ ತೀವ್ರ ಮಳೆ ಕೊರತೆಯಾದರೆ, ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಯಿತು. ಆಗಸ್ಟ್ ನಲ್ಲಿ ಪುನಃ ತೀವ್ರ ಮಳೆ ಕೊರತೆ ಎದುರಾಗಿದೆ. ಸೆಪ್ಟಂಬರ್‍ನಲ್ಲಿ ಮಳೆಯಾಗುವ ಮುನ್ಸೂಚನೆಗಳು ಇಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ನಾವು ಎಲ್ಲದಕ್ಕೂ ಸಿದ್ಧವಾಗಿರಬೇಕಾಗುತ್ತದೆ ಎಂದು ಅವರು ಹೇಳಿದರು.

ಕುಡಿಯುವ ನೀರು: 18 ಗ್ರಾಮಗಳಿಗೆ 24 ಟ್ಯಾಂಕರ್ ಮೂಲಕ, 147 ಗ್ರಾಮಗಳಲ್ಲಿ 161 ಬಾಡಿಗೆ ಆಧಾರದ ಮೇಲೆ ಪಡೆದಿರುವ ಬೋರ್‍ವೆಲ್‍ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 5 ನಗರ ಪ್ರದೇಶಗಳ 26 ವಾರ್ಡ್‍ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು 11 ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

ಜಲಾಶಯಗಳಲ್ಲಿನ ನೀರಿನ ಮಟ್ಟ: ರಾಜ್ಯದ 14 ಪ್ರಮುಖ ಜಲಾಶಯಗಳ ಸಂಗ್ರಹಣಾ ಸಾಮಥ್ರ್ಯ 896 ಟಿಎಂಸಿಗಳಾಗಿದ್ದು, ಸದ್ಯ 618 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ಸಾಲಿನ ಇದೇ ಅವಧಿಯಲ್ಲಿ 796 ಟಿಎಂಸಿ ನೀರು ಸಂಗ್ರಹವಾಗಿತ್ತು. ಕಾವೇರಿ ಕಣಿವೆಯ ಜಲಾಶಯಗಳಲ್ಲಿ ಒಟ್ಟು ಸಂಗ್ರಹಣಾ 114 ಟಿಎಂಸಿಯಾಗಿದ್ದು, ಇಲ್ಲಿಯವರೆಗೆ 80 ಟಿಎಂಸಿ ನೀರು ಸಂಗ್ರಹವಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕೃಷ್ಣ ಜಲಾನಯನ ಪ್ರದೇಶದಲ್ಲಿ 6 ಜಲಾಶಯಗಳಿದ್ದು, ಅವುಗಳ ಒಟ್ಟು ಸಾಮರ್ಥ್ಯ  422 ಟಿಎಂಸಿಗಳಾಗಿದ್ದು, ಇಲ್ಲಿಯವರೆಗೆ 348 ಟಿಎಂಸಿ ನೀರು ಸಂಗ್ರಹವಾಗಿದೆ. ವಿದ್ಯುತ್‍ಚ್ಚಕ್ತಿ ಉತ್ಪಾದನಾ ಜಲಾಶಯಗಳಾದ ಲಿಂಗನಮಕ್ಕಿ, ಸೂಪ ಮತ್ತು ವರಾಯಿ ಜಲಾಶಯಗಳ ಒಟ್ಟು ಸಾಮಥ್ರ್ಯ 328 ಟಿಎಂಸಿಯಾಗಿದ್ದು, ಇಲ್ಲಿಯವರೆಗೆ ಕೇವಲ 165 ಟಿಎಂಸಿ ನೀರು ಶೇಖರಣೆಯಾಗಿದೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

ಜಾನುವಾರುಗಳಿಗೆ ಸದ್ಯಕ್ಕೆ 150 ಲಕ್ಷ ಟನ್ ಮೇವು ಲಭ್ಯವಿದ್ದು, 28 ವಾರಗಳ ಬಳಕೆಗೆ ಸಾಕಾಗುತ್ತದೆ. ಆದರೂ ಮುಂದಿನ ದಿನಗಳಲ್ಲಿ ಮೇವಿನ ಕೊರತೆ ಉಂಟಾಗದಂತೆ ಇಲಾಖೆಯ ಯೋಜನೆಗಳ ಮೂಲಕ ರೈತರಿಗೆ ಮೇವಿನ ಬೀಜ ವಿತರಿಸಿ, ಮೇವು ಬೆಳೆಸಲು, ಪ್ರೋತ್ಸಾಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಬೆಳೆಗಳ ಪರಿಸ್ಥಿತಿ ಬಗ್ಗೆ ನಿಖರವಾದ ಅಂಕಿ, ಅಂಶಗಳನ್ನು ತಿಳಿಯಲು ಬೆಳೆ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಳೆ ಕೊರತೆ, ಒಣ ಹವೆ, ಅಂತರ್ಜಲ ಮಟ್ಟ ಕುಸಿದಿರುವ ಸುಮಾರು 120 ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಿ, 10 ದಿನಗಳಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

ಬರ ಪರಿಸ್ಥಿತಿ ಘೋಷಿಸಲು ಅಗತ್ಯವಿರುವ ಮಾನದಂಡಗಳನ್ನು ನಾವು ಪಾಲನೆ ಮಾಡುತ್ತಿದ್ದೇವೆ. ಕೇಂದ್ರ ಸರಕಾರದ ಕೃಷಿ ಮಂತ್ರಾಲಯವು 2016 ಹಾಗೂ 2020ರಲ್ಲಿ ಮಾನದಂಡಗಳನ್ನು ಪರಿಷ್ಕರಣೆ ಮಾಡಿದೆ. ಸದ್ಯ ನಮ್ಮ ರಾಜ್ಯದಲ್ಲಿರುವ ಪರಿಸ್ಥಿತಿ ಇದಕ್ಕೆ ಹೊಂದಾಣಿಕೆಯಾಗುತ್ತಿಲ್ಲ. ಕೇಂದ್ರ ಸರಕಾರ ಬರಗಾಲ ಘೋಷಣೆಗೆ ಇರುವ ಮಾನದಂಡಗಳನ್ನು ಸರಳೀಕರಣ ಮಾಡಬೇಕು ಎಂದು ಮುಖ್ಯಮಂತ್ರಿ ಈಗಾಗಲೆ ಪತ್ರ ಬರೆದಿದ್ದಾರೆ ಎಂದು ಅವರು ಹೇಳಿದರು.

ಬರಪರಿಸ್ಥಿತಿ ಘೋಷಣೆಗೆ ಸಂಬಂಧಿಸಿದಂತೆ ಇಂದಿನ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇವೆ. ಬೆಳೆ ಸಮೀಕ್ಷೆ ವರದಿ ಬಂದ ಬಳಿಕ ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News