ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Update: 2024-04-12 14:10 GMT

ಬೆಂಗಳೂರು : ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಶಂಕಿತ ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಬಂಧಿಸಿರುವುದಾಗಿ ವರದಿಯಾಗಿದೆ.

ಬಂಧಿತ ಪ್ರಮುಖ ಆರೋಪಿಗಳಾದ ಪ್ರಕರಣದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾ ಹಾಗೂ ಐಇಡಿ ಸ್ಫೋಟಕ ಇರಿಸಿದ್ದ ಮುಸ್ಸಾವೀರ್ ಹುಸೇನ್ ಶಾಜಿಬ್ ಎಂಬುವರನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದೆ ಎಂದು ಎನ್‍ಐಎ ಅಧಿಕಾರಿಗಳು ತಿಳಿಸಿದ್ದಾರೆ.

ನಕಲಿ ಐಡೆಂಟಿಟಿಗಳೊಂದಿಗೆ ಉಳಿದುಕೊಂಡಿದ್ದ ಆರೋಪಿಗಳ ಅಡಗುತಾಣದ ಕುರಿತು ಖಚಿತ ಮಾಹಿತಿ ಪಡೆದಿದ್ದ ಎನ್‍ಐಎ ಅಧಿಕಾರಿಗಳು, ಕೇಂದ್ರೀಯ ತನಿಖಾ ಏಜೆನ್ಸಿಗಳು, ಪಶ್ಚಿಮ ಬಂಗಾಳ, ತೆಲಂಗಾಣ, ಕರ್ನಾಟಕ ಹಾಗೂ ಕೇರಳ ಪೊಲೀಸ್ ತಂಡಗಳ ಸಹಕಾರದೊಂದಿಗೆ ಶುಕ್ರವಾರ ಮುಂಜಾನೆಯೇ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿರುವುದಾಗಿ ಎನ್‍ಐಎ ಮಾಹಿತಿ ನೀಡಿದೆ.

43 ದಿನಗಳ ಕಾಲ ಹುಡುಕಾಟ: ಮಾ.1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ 9ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ತನಿಖೆಯ ಹೊಣೆಯನ್ನು ಎನ್‍ಐಎಗೆ ವಹಿಸಲಾಗಿತ್ತು. ತನಿಖೆ ಆರಂಭಿಸಿದ್ದ ಎನ್‍ಐಎ, ಪ್ರಮುಖ ಆರೋಪಿಗಳಿಗೆ ಲಾಜಿಸ್ಟಿಕ್ ಬೆಂಬಲ ನೀಡಿದ ಆರೋಪದಡಿ ಚಿಕ್ಕಮಗಳೂರಿನ ಕಳಸ ಮೂಲದ ಮುಜಾಮ್ಮಿಲ್ ಶರೀಫ್ ಎಂಬಾತನನ್ನು ಮಾ.26ರಂದು ಬಂಧಿಸಿತ್ತು.

ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಹಚ್ಚುವ ಮತ್ತು ಬಂಧಿಸುವ ಪ್ರಯತ್ನಗಳ ಭಾಗವಾಗಿ ಮಾ.29ರಂದು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್‍ಐಎ ತಂಡಗಳು ಶೋಧ ನಡೆಸಿದ್ದವು. ಇದಲ್ಲದೇ ಆರೋಪಿಗಳ ಬಂಧನಕ್ಕೆ ಸಹಾಯಕಾರಿಯಾಗಬಲ್ಲ ಮಾಹಿತಿ ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಇದೀಗ 43 ದಿನಗಳ ಬಳಿಕ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಎನ್‍ಐಎ ಯಶಸ್ವಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News