ಕಾಂಗ್ರೆಸ್‌ನಲ್ಲಿ ಯಾರು ಸಿಎಂ ಆಗಬೇಕೆಂದು ʼಮ್ಯೂಸಿಕಲ್ ಚೇರ್ʼ ಸ್ಪರ್ಧೆ : ಆರ್.ಅಶೋಕ್ ವ್ಯಂಗ್ಯ

Update: 2024-08-24 13:16 GMT

ಬೆಂಗಳೂರು: ಬಿಜೆಪಿ ಎಂದಿಗೂ ಸರಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ. ಅಂತಹ ಅವಶ್ಯಕತೆ ನಮಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿಯೇ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್‌ನಂತೆ ಸ್ಪರ್ಧೆ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್ ಹೀಗೆ ಎಲ್ಲರೂ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಶಾಸಕರಲ್ಲೆ ಈ ವಿಷಯ ಬಹಳ ಚರ್ಚೆಯಾಗುತ್ತಿದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಸೋತ ಕೂಡಲೇ, ಜನರಿಗೆ ನಿಯತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿಂದಿಸುತ್ತಿದ್ದಾರೆ. ಈ ಸರಕಾರದಲ್ಲಿ ಭ್ರಷ್ಟಾಚಾರ ಹೆಚ್ಚಿದ್ದು, ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ಬೆಂಗಳೂರಿನ ಜನರನ್ನು ಕಾಂಗ್ರೆಸ್ ನಾಯಕರು ಹೀಯಾಳಿಸಿ ಮಾತಾಡುತ್ತಾರೆ ಎಂದು ಅವರು ಟೀಕಿಸಿದರು.

ಬೆಂಗಳೂರಿನ ಜನರ ಬಗ್ಗೆ ಮಾತನಾಡುವ ನೈತಿಕತೆ ಡಿ.ಕೆ.ಶಿವಕುಮಾರ್ ಅವರಿಗಿಲ್ಲ. ಜನರಿಗೆ ಕುಡಿಯುವ ನೀರು ನೀಡುವುದು ಸರಕಾರದ ಕರ್ತವ್ಯ. ಜನರನ್ನು ನಿಂದಿಸಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕರು ಜನರ ಕ್ಷಮೆ ಯಾಚಿಸಬೇಕು ಎಂದು ಅಶೋಕ್ ಆಗ್ರಹಿಸಿದರು.

ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಅವರು ಹೇಳಿದರು.

ರಾಜ್ಯ ಸರಕಾರ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ರೂಪಿಸಿದೆ. ಇಂತಹ ವಿಧೇಯಕಗಳ ಸಾಧಕ-ಬಾಧಕಗಳ ಬಗ್ಗೆ ಸರಕಾರಕ್ಕೆ ಸಲಹೆ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಹತ್ತಾರು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದರು ಎಂದು ಅಶೋಕ್ ಹೇಳಿದರು.

ರಾಜಭವನ ಎಂದರೆ ಬಿಜೆಪಿ ಕಚೇರಿ ಎನ್ನುವುದು ಹಳಸಿದ ಮಾತು. ವಿಧೇಯಕವನ್ನು ಮರಳಿ ಕಳುಹಿಸಿದರೆ ಅದಕ್ಕೆ ಸರಕಾರ ಸ್ಪಷ್ಟೀಕರಣ ಕೊಟ್ಟು ಗೊಂದಲ ನಿವಾರಿಸಬೇಕು. ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುವುದು ಸರಕಾರದ ಕರ್ತವ್ಯ. ಈ ಕರ್ತವ್ಯ ಮಾಡದೇ ಇದ್ದಲ್ಲಿ ಅದು ಸರಕಾರದ ನಿರ್ಲಕ್ಷ್ಯವೇ ಹೊರತು ರಾಜ್ಯಪಾಲರ ತಪ್ಪಲ್ಲ ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News