ಸ್ಯಾಂಡಲ್‌ವುಡ್ | ಕಲಾವಿದೆಯರ ಮೇಲಿನ ದೌರ್ಜನ್ಯದ ಬಗ್ಗೆ ಸಮಿತಿ ರಚಿಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಸಿಎಂಗೆ ಪತ್ರ

Update: 2024-09-08 07:38 GMT

ಡಾ.ನಾಗಲಕ್ಷ್ಮೀ ಚೌಧರಿ

ಬೆಂಗಳೂರು : ಕನ್ನಡ ಚಲನಚಿತ್ರೋದ್ಯಮದ ಮಹಿಳಾ ಕಲಾವಿದೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?

ಕೇರಳ ಚಿತ್ರೋದ್ಯಮದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಸಲ್ಲಿಸಿದೆ. ಕೇರಳದ ಕಲಾವಿದೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ, ಕಿರುಕುಳ, ಬೆದರಿಕೆ, ಮಾನಸಿಕ ಹಿಂಸೆಯಂತಹ ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಇದು ಕಳವಳಕಾರಿ ವಿಚಾರವಾಗಿದೆ.

ಕನ್ನಡ ಚಿತ್ರರಂಗದ ಕಲಾವಿದೆಯರಿಗೆ ಸಂಬಂಧಪಟ್ಟಂತೆ ಚಲನಚಿತ್ರ ನಿರ್ಮಾಣ ಸಂದರ್ಭದಲ್ಲಿ ಹಾಗೂ ನಂತರದಲ್ಲಿ ಅವರು ಎದುರಿಸುತ್ತಿರುವ ಸಮಸ್ಯೆಗಳು, ಅವರಿಗೆ ಒದಗಿಸುತ್ತಿರುವ ಸೌಲಭ್ಯಗಳು ಹಾಗೂ ಭದ್ರತೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಕಲಾವಿದೆಯರೊಂದಿಗೆ ಚರ್ಚಿಸಿ ಮಾಹಿತಿ ತಿಳಿಯಲು ದಿನಾಂಕ ಸೆ.13ರಂದು ಕರ್ನಾಟಕ ಚಲನಚಿತ್ರ ಮಹಿಳಾ ಕಲಾವಿದೆಯರ ಸಭೆಯನ್ನು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕರೆಯುವಂತೆ ಈಗಾಗಲೇ ಪತ್ರದ ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈಗಾಗಲೇ ಸುಮಾರು 150ಕ್ಕೂ ಹೆಚ್ಚು ಜನರು, ಸಾಹಿತಿಗಳು, ಮಹಿಳಾ ಕಲಾವಿದೆಯರು, ಹೋರಾಟಗಾರರು ಕರ್ನಾಟಕ ಚಲನಚಿತ್ರ ಉದ್ಯಮದಲ್ಲಿಯೂ ಆಗಿರುವ ದೌರ್ಜನ್ಯಗಳ ವಿರುದ್ಧ ಸರ್ಕಾರವು ಸಮಿತಿ ರಚಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಆದಷ್ಟು ಬೇಗ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಆದೇಶಿಸಬೇಕೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News