ಇಂದಿನಿಂದ ವಿಧಾನಮಂಡಲದ ಅಧಿವೇಶನ ಆರಂಭ: ಆಡಳಿತ-ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜು

Update: 2023-07-02 19:04 GMT

ಬೆಂಗಳೂರು, ಜು. 2: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನೂತನ ಸರಕಾರ ರಚನೆಯಾದ ಬಳಿಕ ನಡೆಯಲಿರುವ ಮೊದಲ ಬಜೆಟ್ ಅಧಿವೇಶನವು ಸೋಮವಾರ(ಜು.3)ದಿಂದ ಆರಂಭಗೊಳ್ಳುತ್ತಿದ್ದು, ಆಡಳಿತ ಹಾಗೂ ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜುಗೊಂಡಂತಾಗಿದೆ.

ಸೋಮವಾರ ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಚರ್ಚೆ ನಡೆಯಲಿದೆ. ಜು.7ರಂದು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 14ನೆ ಬಜೆಟ್ ಮಂಡನೆ ಮಾಡಲಿದ್ದಾರೆ.

ಈ ಬಜೆಟ್ ಅಧಿವೇಶನದಲ್ಲಿ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ವಿವಾದಿತ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2022(ಮತಾಂತರ ನಿಷೇಧ ಕಾಯ್ದೆ), ಎಪಿಎಂಸಿ ಕಾಯ್ದೆ ತಿದ್ದುಪಡಿ ವಿಧೇಯಕಯನ್ನು, ಭೂ ಸುಧಾರಣೆ ತಿದ್ದುಪಡಿ ವಿಧೇಯಕವನ್ನು ಕಾಂಗ್ರೆಸ್ ಸರಕಾರ ಹಿಂಪಡೆಯಲಿದೆ.

ಅಲ್ಲದೆ, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ(ತಿದ್ದುಪಡಿ) ವಿಧೇಯಕ, ಕರ್ನಾಟಕ ಅಗ್ನಿಶಾಮಕ ಮತ್ತು ಸುರಕ್ಷತಾ(ತಿದ್ದುಪಡಿ) ವಿಧೇಯಕ ಹಾಗೂ ಸರಕಾರಿ ವ್ಯಾಜ್ಯಗಳ ನಿರ್ವಹಣೆ ವಿಧೇಯಕವನ್ನು ಸರಕಾರ ಮಂಡನೆ ಮಾಡಲಿದೆ ಎಂದು ತಿಳಿದು ಬಂದಿದೆ.

10 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಎಂಟು ದಿನ ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ನೀಡಲಾಗಿದೆ. ಜು.3ರಂದು ರಾಜ್ಯಪಾಲರ ಭಾಷಣ ಹಾಗೂ ಜು.7ರಂದು ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಪ್ರಶ್ನೋತ್ತರ ಕಲಾಪ ಇರುವುದಿಲ್ಲ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳ ಅನುಷ್ಠಾನದ ವಿಚಾರದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಮಾತಿನ ಸಮರ ನಡೆಯುವ ಸಾಧ್ಯತೆ ಹೆಚ್ಚಿದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ಶರತ್ತುಗಳನ್ನು ವಿಧಿಸುತ್ತಿರುವ ಸರಕಾರದ ನಿಲುವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡಲಿದೆ.

ಈಗಾಗಲೆ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಚಾಲನೆ ಸಿಕ್ಕಿದೆ. 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ’ ಯೋಜನೆಯ ಅನುಷ್ಠಾನ ಪ್ರಗತಿಯಲ್ಲಿದೆ. ಅನ್ನಭಾಗ್ಯ ಯೋಜನೆಯಡಿ 10ಕೆಜಿ ಅಕ್ಕಿ ನೀಡುವುದು ಹಾಗೂ ‘ಗೃಹಲಕ್ಷ್ಮಿ’ ಯೋಜನೆಯಡಿ ಮನೆಯ ಯಜಮಾನಿಗೆ ಮಾಸಿಕ 2 ಸಾವಿರ ರೂ.ಗಳನ್ನು ನೀಡುವ ಯೋಜನೆಗೆ ಚಾಲನೆ ಸಿಕ್ಕಿಲ್ಲ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಯಿದೆ.

ಸರಕಾರದ ವಿರುದ್ಧ ಹೋರಾಟ ಮಾಡಲು ಪ್ರತಿಪಕ್ಷಗಳು ಹುಮ್ಮಸ್ಸಿನಲ್ಲಿರುವಾಗಲೆ, ಅವರ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಮುಂದಾಗಿರುವ ಸರಕಾರವು, ಹಿಂದಿನ ಸರಕಾರದ ಅವಧಿಯಲ್ಲಿ ನಡೆದಿರುವ ಅವ್ಯವಹಾರ, ಭ್ರಷ್ಟಾಚಾರದ ಆರೋಪಗಳ ಕುರಿತು ತನಿಖೆಗೆ ವಹಿಸಲು ಮೂಲಕ ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಮುಂದಾಗಿದೆ.

ಬಿಎಸ್‍ವೈ ಧರಣಿ: ರಾಜ್ಯ ಸರಕಾರವು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಐದು ಗ್ಯಾರಂಟಿಗಳನ್ನು ಯಾವುದೆ ಶರತ್ತು ವಿಧಿಸದೆ ಎಲ್ಲರಿಗೂ ನೀಡಬೇಕು ಎಂದು ಆಗ್ರಹಿಸಿ ಜು.4ರಂದು ವಿಧಾನಸೌಧ ಹಾಗೂ ವಿಕಾಸಸೌಧದ ಮಧ್ಯದಲ್ಲಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಧರಣಿ ನಡೆಯಲಿದೆ.

ದಾಖಲೆಯ ಬಜೆಟ್: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ 13 ಬಜೆಟ್ ಮಡನೆಯ ದಾಖಲೆಯನ್ನು 2018ರಲ್ಲಿ ಸಿದ್ದರಾಮಯ್ಯ ಸರಿಗಟ್ಟಿದ್ದರು. ಇದೀಗ ಎರಡನೆ ಅವಧಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಜು.7ರಂದು ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿ ಅತೀ ಹೆಚ್ಚು ಬಾರಿ ಬಜೆಟ್ ಮಂಡನೆ ಮಾಡಿದ ದಾಖಲೆ ಬರೆಯಲಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ ಅಂದಾಜು 3.25 ಲಕ್ಷ ಕೋಟಿ ರೂ.ಗಳಾಗುವ ಸಾಧ್ಯತೆಯಿದೆ.

ಅಕ್ಕಿ ವಿತರಣೆ: ಅನ್ನಭಾಗ್ಯ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ವಿತರಿಸಲು ಅಗತ್ಯವಿರುವ ಅಕ್ಕಿಯನ್ನು ನೀಡಲು ಕೇಂದ್ರ ಸರಕಾರ ನಿರಾಕರಿಸಿರುವ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಮುಗಿಬೀಳಲು ಕಾಂಗ್ರೆಸ್ ಶಾಸಕರು ಸಜ್ಜುಗೊಂಡಿದ್ದಾರೆ. ಇದೇ ವೇಳೆ ಸರಕಾರ ಅಕ್ಕಿ ಕೊಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News