ಗಂಗಾ ಕಲ್ಯಾಣ ಯೋಜನೆಗೆ ವೇಗ ನೀಡಲು ಸಚಿವ ಶಿವರಾಜ್ ತಂಗಡಗಿ ಸೂಚನೆ

Update: 2025-02-03 20:24 IST
ಗಂಗಾ ಕಲ್ಯಾಣ ಯೋಜನೆಗೆ ವೇಗ ನೀಡಲು ಸಚಿವ ಶಿವರಾಜ್ ತಂಗಡಗಿ ಸೂಚನೆ
  • whatsapp icon

ಬೆಂಗಳೂರು : ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಯುವ ಕಾರ್ಯ ವಿಳಂಬವಾಗುತ್ತಿದ್ದು, ಆದಷ್ಟು ಬೇಗನೆ ಯೋಜನಾ ಕಾರ್ಯ ಪ್ರಗತಿಯಲ್ಲಿ ಸಾಗಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಮವಾರ ನಗರದ ದೇವರಾಜ ಅರಸು ಭವನದಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ, ವೀರಶೈವ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದ ಅವರು, ಆರ್ಥಿಕ ವರ್ಷ ಪೂರ್ಣಗೊಳ್ಳುವಷ್ಟರಲ್ಲಿ ನಿಗದಿತ ಗುರಿ ಮುಟ್ಟದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ದೇವರಾಜ ಅರಸು ಅಭಿವೃದ್ಧಿ ನಿಗಮದಲ್ಲಿ ಶೇ.85ರಷ್ಟು ಹಣ ಖರ್ಚು ಮಾಡಲಾಗಿದ್ದು, ಉಳಿದ ಕೊಳವೆಬಾವಿ ಕೊರೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ಇನ್ನು ಒಂದು ತಿಂಗಳಲ್ಲಿ ಬಾಕಿ ಕೊಳವೆ ಬಾವಿ, ಸ್ವಾವಲಂಬಿ ಸಾರಥಿ, ಅರಿವು ಶೈಕ್ಷಣಿಕ ಸಾಲ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಗಳನ್ನ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ನಿರ್ದೇಶನ ನೀಡಿದರು.

ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನಿಗಮಗಳಿಗೆ ಈಗಾಗಲೇ ಆರ್ಥಿಕ ಇಲಾಖೆ, 1600 ಕೋಟಿ ರೂ. ಅನುದಾನವನ್ನು ಒದಗಿಸಿದೆ. ಕೂಡಲೇ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಕಾರ್ಯಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಶಿವರಾಜ್ ತಂಗಡಗಿ ಸಲಹೆ ನೀಡಿದರು.

ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಸಂಜಯ್ ಶೆಟ್ಟಣ್ಣನವರ್, ಆಯುಕ್ತ ಅಕ್ರಮ್ ಪಾಷಾ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್, ಅಧಿಕಾರಿಗಳಾದ ಕಾಂತರಾಜ್, ಅರುಣ್, ಪ್ರಕಾಶ್ ಪಾಗೋಜಿ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಹಾಸ್ಟೆಲ್‍ಗಳಿಗೆ ಭೇಟಿ ನೀಡಿ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ಹಾಸ್ಟೆಲ್‍ಗಳಿಗೆ ಭೇಟಿ ನೀಡದಿರುವುದು ನನ್ನ ಗಮನಕ್ಕೆ ಬಂದಿದೆ. ಕೇವಲ ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡುವುದನ್ನು ನಾನು ಸಹಿಸುವುದಿಲ್ಲ. ಇನ್ನು ಮುಂದೆ ಕಡ್ಡಾಯವಾಗಿ ಆಯಾ ಜಿಲ್ಲೆಯ ಪ್ರತಿಯೊಂದು ಹಾಸ್ಟೆಲ್‍ಗಳಿಗೆ ಭೇಟಿ ನೀಡಿ, ಆಹಾರ ಗುಣಮಟ್ಟ ಹಾಗೂ ಶುಚಿತ್ವಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಈ ಕೆಲಸ ನಿರಂತರವಾಗಿ ನಡೆಯಬೇಕು. ಜಿಲ್ಲಾ ಕಲ್ಯಾಣಾಧಿಕಾರಿಗಳು ಹಾಸ್ಟೆಲ್‍ಗಳಿಗೆ ಭೇಟಿ ನೀಡಿದ ವೇಳೆ ಅಲ್ಲಿಯೇ ಊಟ ಸೇವಿಸಬೇಕು ಎಂದು ಶಿವರಾಜ್ ತಂಗಡಗಿ ಸೂಚಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News