ರಾಜ್ಯ ಸರಕಾರ ದೇವಸ್ಥಾನದ ಹಣಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಹುಂಡಿ ಇಡಲಿ: ಬಿ. ವೈ ವಿಜಯೇಂದ್ರ

Update: 2024-02-22 06:03 GMT

ಬೆಂಗಳೂರು: ಆರ್ಥಿಕ ಸಂಕಷ್ಟದಲ್ಲಿರುವ ಸರಕಾರ, ದೇವಾಲಯಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇವಸ್ಥಾನದ ಹಣಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಡಿ. ‘ಸರಕಾರ ನಡೆಸಲು ನಮ್ಮ ಕೈಯಲ್ಲಿ ಆಗುತ್ತಿಲ್ಲ; ಹಣಕಾಸಿನ ತೊಂದರೆ ಇದೆ’ ಎಂದು ತಿಳಿಸಿ ಬಂದ ದಾನಿಗಳಿಂದ ಹಣ ಸಂಗ್ರಹಿಸಬಹುದು ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡುವುದಾಗಿ ತಿಳಿಸಿದರು.

ಅತ್ಯಂತ ಹೆಚ್ಚು ತೆರಿಗೆ ಸಂಗ್ರಹ ಮಾಡುವ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಇಂಥ ಕರ್ನಾಟಕ ರಾಜ್ಯದ ಪರಿಸ್ಥಿತಿ ಹೀಗಾಗಿದೆ ಎಂಬುದು ನಿಜಕ್ಕೂ ದುರದೃಷ್ಟ. ಸರಕಾರ ಈ ಮಟ್ಟಕ್ಕೆ ಇಳಿದಿರುವುದು ನಿಜಕ್ಕೂ ತಲೆತಗ್ಗಿಸುವ ವಿಚಾರ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಗ್ಯಾರಂಟಿಗೆ ನಮ್ಮ ಟೀಕೆ ಇಲ್ಲ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿಗಳನ್ನು ಘೋಷಿಸಿದ್ದು, ಅದನ್ನು ಅನುಷ್ಠಾನಕ್ಕೆ ತರುವುದು ಅವರ ಕರ್ತವ್ಯವಾಗಿದೆ. ಅವರು ಕೊಟ್ಟಿರುವ ಭರವಸೆಗಳನ್ನು ಈಡೇರಿಸಬೇಕಿದೆ. ಆದರೆ, ಅದರ ಅರ್ಥ ರಾಜ್ಯದಲ್ಲಿ ಅಭಿವೃದ್ಧಿ ಮಾಡಬಾರದು ಎಂದಲ್ಲ ಎಂದು ತಿಳಿಸಿದರು.

ನಾವು ಶಾಸಕರು ಕ್ಷೇತ್ರಕ್ಕೆ ಹೋದಾಗ ರಸ್ತೆಗಳು, ಶಾಲಾ ಕೊಠಡಿ, ಆಸ್ಪತ್ರೆಗಳ ಬಗ್ಗೆ ಜನರು ನಮ್ಮನ್ನು ಕೇಳುತ್ತಾರೆ. ರಾಜ್ಯ ಸರಕಾರವು ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ. ಒಂದು ರೂಪಾಯಿ ಅನುದಾನವನ್ನೂ ಕೊಡುತ್ತಿಲ್ಲ ಎಂದು ಟೀಕಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News