ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ಅಮಾನವೀಯ: ಸಿಎಂ ಸಿದ್ದರಾಮಯ್ಯ

Update: 2023-08-31 18:09 GMT

ಬೆಂಗಳೂರು, ಆ.31: ‘ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೆ. ಮೈಮೇಲಿನ ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯವಾದುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುರುವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ‘ದೇವರನ್ನು ಮುಂದಿಟ್ಟುಕೊಂಡು ತಾರತಮ್ಯ ಆಚರಿಸುವುದು, ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು’ ಎಂದರು.

ಜಾತಿ, ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಶಕ್ತಿಗಳು ನಾರಾಯಣ ಗುರುಗಳ ಅವಧಿಯಲ್ಲೂ ಇದ್ದವು. ಈಗಲೂ ಇವೆ. ನಾರಾಯಣಗುರುಗಳು ಸಂಘರ್ಷಕ್ಕೆ ಕಾರಣ ಆಗದಂತೆ ಸಮಾಜದಲ್ಲಿ ವ್ಯಾಪಕ ಬದಲಾವಣೆ ತಂದರು. ದೇವರನ್ನೇ ಮುಂದಿಟ್ಟುಕೊಂಡು ಜಾತಿ, ಧರ್ಮ ಸಂಘರ್ಷ ಸೃಷ್ಟಿಸುವ ವಿಕೃತಿಯನ್ನು ಈಗಲೂ ಆಚರಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ದೇವರು ಮತ್ತು ಜಾತಿ, ಧರ್ಮದ ಹೆಸರಿನ ತಾರತಮ್ಯಗಳಿಗೆ ನಾರಾಯಣಗುರುಗಳು ಭಿನ್ನವಾದ ಆಚರಣೆ ಕಂಡುಕೊಂಡರು. ನಿಮಗೆ ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಹೋಗಲೇಬೇಡಿ. ನೀವೇ ನಿಮ್ಮ ದೇವರುಗಳಿಗೆ ದೇವಸ್ಥಾನ ಕಟ್ಟಿ ಪೂಜೆ ಮಾಡಿ ಎಂದರು. ಈ ಸಮಾಜ ಸುಧಾರಣೆಯ ಕ್ರಾಂತಿಕಾರಕ ಧಾರ್ಮಿಕ ಚಳವಳಿ ಪರಿಣಾಮವಾಗಿ ಕೇರಳದಲ್ಲಿ 60 ದೇವಸ್ಥಾನಗಳನ್ನು ನಿರ್ಮಿಸಿದರು. ಉಳಿದ ದೇವಸ್ಥಾನಗಳಿಗೆ ಪ್ರವೇಶ ಇಲ್ಲದ ಶೂದ್ರ ಮತ್ತು ದಲಿತ ಸಮುದಾಯವನ್ನು ತಾವೇ ಕಟ್ಟಿಸಿದ ದೇವಸ್ಥಾನಗಳಿಗೆ ಪ್ರವೇಶಿಸುವಂತೆ ಕ್ರಾಂತಿ ಮಾಡಿದರು ಎಂದು ಸಿದ್ದರಾಮಯ್ಯ ವಿವರಿಸಿದರು.

ವಿದ್ಯೆ ಕಲಿತು ಸ್ವತಂತ್ರರಾಗಿ, ಸಂಘಟಿತರಾಗಿ ಬಲಯುತರಾಗಿ ಎನ್ನುವುದು ನಾರಾಯಣಗುರುಗಳು ಶೂದ್ರ-ದಲಿತ ಸಮುದಾಯಕ್ಕೆ ನೀಡಿದ ಅತ್ಯುನ್ನತ ಧ್ಯೇಯ. ನಾರಾಯಣಗುರುಗಳು ಒಂದು ಜಾತಿ, ಧರ್ಮಕ್ಕೆ ಸೇರಿದವರಲ್ಲ. ಅವರು ಜಾತಿ-ಧರ್ಮದ ತಾರತಮ್ಯಗಳನ್ನು ಮೀರಿದ ವಿಶ್ವಮಾನವ. ಹೀಗಾಗಿ ವಿಶ್ವ ಮಾನವ ನಾರಾಯಣಗುರುಗಳ ಜಯಂತಿಯನ್ನು ಸರಕಾರವೇ ಆಚರಿಸಬೇಕು ಎಂದು ಆದೇಶ ಮಾಡಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು. ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಮತ್ತು ನಾರಾಯಣಗುರು ಭವನ ನಿರ್ಮಿಸಬೇಕು ಎನ್ನುವ ಸಮುದಾಯದ ಬೇಡಿಕೆಯನ್ನು ಪರಿಗಣಿಸಲಾಗಿದ್ದು, ಎರಡು ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ ತಂಗಡಗಿ, ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು, ಆರ್ಯ ಈಡಿಗ ಸಮಾಜದ ಅಧ್ಯಕ್ಷ ಡಾ.ಎಂ.ತಿಮ್ಮೇಗೌಡರು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News