ಕೇಂದ್ರ ಸರಕಾರ ʼಮಾತೃ ಭಾಷೆ ಕಡ್ಡಾಯ ಮಸೂದೆʼ ತಿರಸ್ಕರಿಸಿದೆ: ಸಚಿವ ಮಧು ಬಂಗಾರಪ್ಪ

Update: 2023-12-04 14:48 GMT

ಬೆಳಗಾವಿ: ರಾಜ್ಯವ್ಯಾಪಿ ಎಲ್ಲ ಮಾದರಿಯ ಶಾಲೆಗಳಲ್ಲಿ ಒಂದರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸುವ ಮಸೂದೆ ಅನ್ನು ಕೇಂದ್ರ ಸರಕಾರ ತಿರಸ್ಕಾರಗೊಳಿಸಿದೆ.

ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪ ವೇಳೆ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, 2015ರಲ್ಲಿ ರಾಜ್ಯ ವಿಧಾನ ಮಂಡಲದ ಉಭಯ ಸದನಗಳಾದ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ 1ರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸಿ ಅಂಗೀಕರಿಸಿದ ಮಸೂದೆಯನ್ನು ಕೇಂದ್ರ ಸರ್ಕಾರದ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು.ಆದರೆ, ಕೇಂದ್ರ ಸರ್ಕಾರವು ಮಾತೃಭಾಷೆನ್ನು ಕಡ್ಡಾಯಗೊಳಿಸುವುದು, ಶಿಕ್ಷಣದ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಮಸೂದೆಯನ್ನು ತಿರಸ್ಕಾರ ಮಾಡಿದೆ ಎಂದರು.

ಇನ್ನೂ, ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ರಾಜ್ಯದ ಈ ವಿಧೇಯಕವನ್ನು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಕೇಂದ್ರ ಶಿಕ್ಷಣ ಇಲಾಖೆ ತಿರಸ್ಕರಿಸಿದೆ ಎಂದೂ ಸಚಿವರು ಉಲ್ಲೇಖಿಸಿದರು.

ಇದಕ್ಕೂ ಮೊದಲು ಯು.ಬಿ.ವೆಂಕಟೇಶ್ ಅವರು, 2015ರಲ್ಲಿ ರಾಜ್ಯ ಸರಕಾರ ಎರಡು ಸದನಗಳಲ್ಲಿ ಬಹುಮತದಿಂದ ಅಂಗೀಕರಿಸಿ ಕೇಂದ್ರ ಸರಕಾರದ ಅಂಕಿತಕ್ಕೆ ಕಳುಹಿಸಿಕೊಟ್ಟಿತ್ತು. 1ರಿಂದ 5ನೇ ತರಗತಿಯ ವರೆಗೆ ವ್ಯಾಸಂಗ ಮಾಡುತ್ತಿರುವ ಶಾಲಾ ಮಕ್ಕಳಿಗೆ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ, ಇಲ್ಲವೇ ಮಾತೃ ಭಾಷೆಯನ್ನಾಗಿ ಕಡ್ಡಾಯಗೊಳಿಸಬೇಕೆಂಬುದು ಈ ಮಸೂದೆಯ ಮೂಲ ಉದ್ದೇಶ. ನಮ್ಮ ಮಕ್ಕಳಿಗೆ ನಾವೇ ಕನ್ನಡ ಕಲಿಸಲು ಆದ್ಯತೆ ನೀಡದಿದ್ದರೆ ಹೇಗೆ? ರಾಜ್ಯ ಸರಕಾರ ಪರ್ಯಾಯ ಮಾರ್ಗವನ್ನು ಹುಡುಕಲಿ ಎಂದು ಸಲಹೆ ಮಾಡಿದರು.

ಕಳೆದ ಎಂಟು ವರ್ಷಗಳಿಂದ ಈ ವಿಧೇಯಕಕ್ಕೆ ಅನುಮೋದನೆ ಸಿಕ್ಕಿಲ್ಲ. ರಾಜ್ಯವನ್ನು ಪ್ರತಿನಿಧಿಸುವ ಸಂಸದರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ ಎಂದು ಧ್ವನಿಗೂಡಿಸಿದರು.

ಆಗ ಮಧುಬಂಗಾರಪ್ಪ, ಪ್ರಥಮ ಭಾಷೆಯಾಗಿ ಕನ್ನಡವನ್ನು ಕಡ್ಡಾಯ ಮಾಡಿದ್ದೇವೆ. ಆದರೆ ಕೇಂದ್ರ ಸರಕಾರ ಮೀಡಿಯಂ ಆಫ್ ಸ್ಟಡಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನ ತೀರ್ಪಿನ ಹಿನ್ನಲೆಯಲ್ಲಿ ಕಡ್ಡಾಯ ಮಾಡಲು ಬರುವುದಿಲ್ಲ ಎಂದು ರಾಜ್ಯ ಸರಕಾರ ಕಳುಹಿಸಿದ ಮಸೂದೆಯನ್ನು ತಿರಸ್ಕರಿಸಿದೆ ಎಂದರು. ತದನಂತರ, ಯು.ಬಿ.ವೆಂಕಟೇಶ್, ಈ ಮಸೂದೆಯನ್ನು ಕೇಂದ್ರ ತಿರಸ್ಕರಿಸಿದೆ ಎಂದರೆ ಕೇಂದ್ರ ಸರಕಾರ ನಮ್ಮ ಮೇಲೆ ಬಲವಂತವಾಗಿ ಹಿಂದಿ ಹೇರುತ್ತಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News