‘ವಾರ್ತಾಭಾರತಿ’ ಅಂಕಣಕಾರ ಸನತ್ ಕುಮಾರ್ ಬೆಳಗಲಿಗೆ ‘ರಾಷ್ಟ್ರೀಯ ಮಾಧ್ಯಮ ಶ್ರೀ’ ಪ್ರಶಸ್ತಿ ಪ್ರದಾನ

Update: 2023-08-06 15:28 GMT

ಮುಂಬೈ, ಆ. 6: ಹಿರಿಯ ಪತ್ರಕರ್ತ ಹಾಗೂ ‘ವಾರ್ತಾಭಾರತಿ’ ಪತ್ರಿಕೆಯ ಅಂಕಣಕಾರರೂ ಆಗಿರುವ ಸನತ್ ಕುಮಾರ್ ಬೆಳಗಲಿ ಅವರಿಗೆ ಮಹಾರಾಷ್ಟ್ರ ರಾಜ್ಯದ ಕನ್ನಡ ಪತ್ರಕರ್ತರ ಸಂಘ ಇವರಿಂದ ನೀಡುವ ಪ್ರತಿಷ್ಠಿತ ‘ರಾಷ್ಟ್ರೀಯ ಮಾಧ್ಯಮ ಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ರವಿವಾರ ಮುಂಬೈನಲ್ಲಿ ಕನ್ನಡ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ಕೆ.ಟಿ.ವೇಣುಗೋಪಾಲ್ ಮಾಧ್ಯಮ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ‘ಮಹಾರಾಷ್ಟ್ರದಲ್ಲಿ ಕನ್ನಡ ಪತ್ರಿಕಾ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಕನ್ನಡ ಪತ್ರಕರ್ತರ ಸಂಘ ಮಹಾರಾಷ್ಟ್ರಕ್ಕೆ 1ಕೋಟಿ ರೂ.ನೆರವು ನೀಡಬೇಕು’ ಎಂದು ಮನವಿ ಮಾಡಿದರು.

‘ಪತ್ರಕರ್ತ’ ಸರಕಾರ-ಸಮಾಜದ ಮಧ್ಯೆ ಸೇತುವೆ: ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ‘ಮರಾಠಿ ನೆಲದಲ್ಲಿ ಕನ್ನಡ ಸಂಸ್ಕೃತಿಯ ಕಂಪನ್ನು ಕಪಸಮ (ಕನ್ನಡ ಪತ್ರಕರ್ತರ ಸಂಘ ಮಹಾರಾಷ್ಟ್ರ) ಹರಡುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಮುಂಬೈನಂತಹ ಮಹಾ ನಗರದಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಕನ್ನಡ ಪತ್ರಿಕೆಗಳನ್ನು ಹುಟ್ಟುಹಾಕುವುದು ಯಶಸ್ವಿಯಾಗಿ ನಡೆಸುವುದು ಸವಾಲಿನದ್ದು. ಈ ಸವಾಲನ್ನು ಕಪಸಮ ಅರ್ಥಪೂರ್ಣವಾಗಿ ನಿಭಾಯಿಸಿದೆ’ ಎಂದು ಅವರು ನುಡಿದರು.

 

‘ಆಧುನಿಕ ತಂತ್ರಜ್ಞಾನ ಮಾಹಿತಿ ಜಗತ್ತು ಮತ್ತು ಪತ್ರಿಕಾ ವೃತ್ತಿಗೆ ವ್ಯಾಪಕ ಅವಕಾಶಗಳನ್ನು ತೆರೆದಿಟ್ಟಿದೆ. ಆದರೆ ಪತ್ರಕರ್ತರ ಬದುಕು ಮಾತ್ರ ಸಮಸ್ಯೆಗಳಲ್ಲೇ ಮುಳುಗಿದೆ. ಮಹಾರಾಷ್ಟ್ರ ನೆಲದಲ್ಲಿ ಕನ್ನಡ ಪತ್ರಕರ್ತರ ಸಮಸ್ಯೆಗಳಿಗೆ ಕನ್ನಡ ಪತ್ರಕರ್ತರ ಸಂಘ, ಮಹಾರಾಷ್ಟ್ರ ಬಹಳ ಹೃದಯಸ್ಪರ್ಷಿಯಾಗಿ ಸ್ಪಂದಿಸುತ್ತಿದೆ ಎನ್ನುವುದು ಸಮಾಧಾನದ ಸಂಗತಿ’ ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಂಬೈ ಬಂಟ್ಸ್ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಯ ಶ್ರೀಕೃಷ್ಣ, ಎಲ್.ವಿ.ಅಮೀನ್ ಸೇರಿ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

 

 

 

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News