ರಾಜ್ಯದಲ್ಲಿರುವ 1695 ಅನಧಿಕೃತ ಶಾಲೆಗಳನ್ನು ಹಂತ ಹಂತವಾಗಿ ಮುಚ್ಚುತ್ತೇವೆ: ಸಚಿವ ಮಧು ಬಂಗಾರಪ್ಪ

Update: 2023-08-11 17:07 GMT

ಬೆಂಗಳೂರು, ಆ.11: ರಾಜ್ಯಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವನ್ನು ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಶುಕ್ರವಾರ ನಗರದ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಧಿಕೃತ ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ. ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರಕಾರದ ಕರ್ತವ್ಯವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮ ಜರುಗಿಸಲಾಗುವುದು ಎಂದರು.

ರಾಜ್ಯದಲ್ಲಿ 26 ಶಾಲೆಗಳು ನೋಂದಣಿಯನ್ನೇ ಮಾಡಿಲ್ಲ, ಅನುಮತಿ ಪಡೆಯದೆ ಉನ್ನತೀಕರಿಸಿರುವ ಶಾಲೆಗಳು 76, ಇತರೆ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳು 143, ಅನುಮತಿ ಪಡೆಯದೆ ಹೆಚ್ಚುವರಿ ವಿಭಾಗಗಳನ್ನು ಪಡೆದಿರುವ 631, ಅನುಮತಿ ಪಡೆಯದೆ ಸ್ಥಳಾಂತರಿಸಿರುವ 190, ಅನುಮತಿ ಪಡೆಯದೆ ಹಸ್ತಾಂತರ ಮಾಡಿರುವ 15, ಒಂದೇ ಕಟ್ಟಡದಲ್ಲಿ ಕೇಂದ್ರ ಮತ್ತು ರಾಜ್ಯ ಪಠ್ಯಕ್ರಮ ಬೋಧಿಸುತ್ತಿರುವ ಶಾಲೆಗಳು 95 ಶಾಲೆಗಳಿವೆ ಎಂದು ಸಚಿವರು ಮಾಹಿತಿ ನೀಡಿದರು.

ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಮುಂದಾಗುವಂತೆ ಆಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಆ.18ರಂದು ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 10ನೆ ತರಗತಿ ಮಕ್ಕಳಿಗೆ ವಾರದಲ್ಲಿ 2 ದಿನ ನೀಡುತ್ತಿರುವ ಮೊಟ್ಟೆ ವಿತರಣೆ ಯೋಜನೆಯನ್ನು ಶಾಲೆಯೊಂದರಲ್ಲಿ ಮೊಟ್ಟೆ/ಬಾಳೇಹಣ್ಣು/ಶೇಂಗಾ ಚಿಕ್ಕಿ ವಿತರಿಸುವ ಮೂಲಕ ಚಾಲನೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಬಜೆಟ್‍ನಲ್ಲಿ ಘೋಷಿಸಿದ್ದಂತೆ ಶಾಲಾ ಆವರಣ ಮತ್ತು ಸುತ್ತಲಿನ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ 50 ಲಕ್ಷ ಗಿಡಗಳನ್ನು ನೆಡುವ ‘ಸಸ್ಯ ಶ್ಯಾಮಲಾ’ ಯೋಜನೆ ಅನುμÁ್ಠನಕ್ಕೆ ಚರ್ಚಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಖಾಸಗಿ ಶಾಲೆಗಳು ಪ್ರತಿವರ್ಷ ಆಗ್ನಿಶಾಮಕ ದಳದಿಂದ ಅನುಮತಿ ನವೀಕರಣ ಮಾಡಿಕೊಳ್ಳಬೇಕು ಎಂಬ ನಿಯಮವನ್ನು ಸಡಿಲಿಸಲು ಸಾಧ್ಯವಿಲ್ಲ. ನಮಗೆ ಮಕ್ಕಳ ಸುರಕ್ಷತೆ ಮುಖ್ಯ. ಅದೇ ರೀತಿ ಶಾಲಾ ಮಕ್ಕಳನ್ನು ಮ್ಯಾನೇಜ್ಮೆಂಟ್‍ನ ಸೇವೆಗಳಿಗೆ ಬಳಸಿದರೆ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಗಿಡ ನೆಡುವುದು ಮುಂತಾದ ಕಲಿಕೆಯ ಉದ್ದೇಶದ ಕೆಲಸಗಳಿಗೆ ವಿನಾಯಿತಿಯಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಶಾಲಾ ವಿದ್ಯುತ್, ನೀರು ಬಿಲ್ ಮನ್ನಾ ಚಿಂತನೆ: ಸರಕಾರಿ ಶಾಲೆಗಳ ನೀರು ಮತ್ತು ವಿದ್ಯುತ್ ಬಿಲ್ ಮೊತ್ತವನ್ನು ಮನ್ನಾ ಮಾಡುವಂತೆ ಸರಕಾರಕ್ಕೆ ಮನವಿ ಮಾಡಲಾಗುತ್ತದೆ. ಸರಕಾರಿ ಶಾಲೆಗಳಲ್ಲಿ ಅತಿ ಕಡಿಮೆ ಮೊತ್ತದ ಬಿಲ್ ಗಳಿರುವುದರಿಂದ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು ಎಂದು ಸಚಿವರು ತಿಳಿಸಿದರು. ಈ ವೇಳೆ ಶಾಲಾ ಶಿಕ್ಷಣ ಆಯುಕ್ತೆ ಬಿ.ಬಿ. ಕಾವೇರಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News