ಚಳಿಗಾಲದ ಅಧಿವೇಶನ: ಹತ್ತು ದಿನದ ವಿಧಾನಸಭೆ ಕಲಾಪದಲ್ಲಿ 66 ಗಂಟೆ 10 ನಿಮಿಷ ಚರ್ಚೆ

Update: 2023-12-15 14:49 GMT

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿ.4ರಿಂದ 15ರ ವರೆಗೆ ಹತ್ತು ದಿನ ನಡೆದ ವಿಧಾನಸಭೆಯ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಲ್ಪಟ್ಟಿದ್ದು, ಪ್ರಸಕ್ತ ಅಧಿವೇಶನವು ಸುಮಾರು 66 ಗಂಟೆ 10 ನಿಮಿಷಗಳ ಕಾಲ ಚರ್ಚೆ ನಡೆದಿದೆ.

ಶುಕ್ರವಾರ ವಿಧಾನಸಭೆಯಲ್ಲಿ ಪ್ರಸಕ್ತ ಅಧಿವೇಶನದ ಸಂಕ್ಷಿಪ್ತ ವರದಿಯನ್ನು ಮಂಡಿಸಿದ ಸ್ಪೀಕರ್ ಯು.ಟಿ.ಖಾದರ್, ‘ಈ ಅಧಿವೇಶನದಲ್ಲಿ ಇತ್ತೀಚೆಗೆ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚನಾ ನಿರ್ಣಯ ಮಂಡಿಸಿ, ಅಂಗೀಕರಿಸಲಾಗಿದೆ. ರಾಷ್ಟ್ರಪತಿ, ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಬಗ್ಗೆ ಕಾರ್ಯದರ್ಶಿಯವರ ವರದಿಯನ್ನು ಮಂಡಿಸಲಾಗಿದೆ ಎಂದರು.

2023-24ನೇ ಸಾಲಿನ ಪೂರಕ ಅಂದಾಜುಗಳ ಮೊದಲನೆ ಕಂತನ್ನು ಡಿ.11ರಂದು ಮಂಡಿಸಿದ್ದು, ಡಿ.13ರಂದು ಮತಕ್ಕೆ ಹಾಕಿ ಅಂಗೀಕರಿಸಲಾಗಿದೆ. 2023-24ನೆ ಸಾಲಿನ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿಯನ್ನು ಡಿ.14ರಂದು ಮಂಡಿಸಲಾಗಿದೆ. ಅಧಿವೇಶನದಲ್ಲಿ ಧನವಿನಿಯೋಗ ವಿಧೇಯಕವು ಸೇರಿದಂತೆ ಒಟ್ಟು 17 ವಿಧೇಯಕಗಳನ್ನು ಮಂಡಿಸಿ, ಅಂಗೀಕರಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದರು.

ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ವ್ಯಕ್ತಿಗಳ ನಾಮಕರಣ ಮಾಡಬೇಕೆಂದು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವ ಅಧಿಕೃತ ನಿರ್ಣಯವನ್ನು ಹಾಗೂ ಮಹಾತ್ಮ ಗಾಂಧಿ ಬೆಳಗಾವಿಗೆ ಆಗಮಿಸಿದ ಶತಮಾನೋತ್ಸವದ ಸಂಭ್ರಮದಲ್ಲಿ ಸ್ಮಾರಕ ನಿರ್ಮಾಣ ಮಾಡುವ ಕುರಿತು ಖಾಸಗಿ ಸದಸ್ಯರ ನಿರ್ಣಯವನ್ನು ಡಿ.14ರಂದು ಸದನವು ಸರ್ವಾನುಮತದಿಂದ ಅಂಗೀಕರಿಸಿದೆ. ನಿಯಮ 60 ರಡಿಯಲ್ಲಿ ನೀಡಿದ್ದ 4 ಸೂಚನೆಗಳ ಪೈಕಿ 3 ಸೂಚನೆಗಳನ್ನು ನಿಯಮ 69ಕ್ಕೆ ಪರಿವರ್ತಿಸಲಾಗಿದ್ದು, ಒಟ್ಟು 5 ಸೂಚನೆಗಳನ್ನು ನಿಯಮ 69ರಡಿಯಲ್ಲಿ ಚರ್ಚಿಸಲಾಗಿದೆ ಎಂದು ಅವರು ಹೇಳಿದರು.

ವಿಧಾನ ಮಂಡಲದ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2023-24ನೇ ಸಾಲಿನ ಮೊದಲನೆ ಹಾಗೂ ಮಧ್ಯಂತರ ವರದಿ, ಸಾರ್ವಜನಿಕ ಉದ್ಯಮಗಳ ಸಮಿತಿಯ 136ನೇ ವರದಿ, ವಿಧಾನಸಭೆ ಸದಸ್ಯರ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿಯ 2023-24ನೇ ಸಾಲಿನ ಮೊದಲನೆ ವರದಿಯನ್ನು ಸದನದಲ್ಲಿ ಮಂಡಿಸಲಾಗಿದ್ದು ಒಟ್ಟು 9 ಅಧಿಸೂಚನೆಗಳು, 3 ಅಧ್ಯಾದೇಶಗಳು ಮತ್ತು 61 ವಾರ್ಷಿಕ ವರದಿಗಳು, 105 ಲೆಕ್ಕ ಪರಿಶೋಧನಾ ವರದಿಗಳು ಹಾಗೂ 01 ಲೆಕ್ಕ ತಪಾಸಣಾ ವರದಿಯನ್ನು ಸದನದಲ್ಲಿ ಮಂಡಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದರು.

ರಾಜ್ಯ ಗ್ರಂಥಾಲಯ ಪ್ರಾಧಿಕಾರಕ್ಕೆ ನಾಲ್ಕು ಸದಸ್ಯರನ್ನು ನಾಮನಿರ್ದೇಶನ ಮಾಡಲು ಡಿ.15ರಂದು ಸಭಾಧ್ಯಕ್ಷರಿಗೆ ಸದನವು ಅಧಿಕಾರ ನೀಡಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಸದನದಲ್ಲಿ ವಿಶೇಷ ಚರ್ಚೆ ನಡೆಸಲಾಗಿದ್ದು, ಒಟ್ಟು 42 ಸದಸ್ಯರು 11 ಗಂಟೆ 4 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದು ಅವರು ಹೇಳಿದರು.

18 ಅರ್ಜಿಗಳನ್ನು ಒಪ್ಪಿಸಲಾಗಿದೆ. ಒಟ್ಟು 3038 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾಗಿದ್ದ 150 ಪ್ರಶ್ನೆಗಳ ಪೈಕಿ 148 ಪ್ರಶ್ನೆಗಳಿಗೆ ಹಾಗೂ ಲಿಖಿತ ಮೂಲಕ ಉತ್ತರಿಸುವ 2206 ಪ್ರಶ್ನೆಗಳ ಪೈಕಿ 2010 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ನಿಯಮ 351 ರಡಿಯಲ್ಲಿ 200 ಸೂಚನೆಗಳನ್ನು ಅಂಗೀಕರಿಸಿದ್ದು, 110 ಸೂಚನೆಗಳ ಉತ್ತರಗಳನ್ನು ಸ್ವೀಕರಿಸಲಾಗಿದೆ. ಗಮನ ಸೆಳೆಯುವ 174 ಸೂಚನೆಗಳ ಪೈಕಿ 140 ಸೂಚನೆಗಳನ್ನು ಚರ್ಚಿಸಿ, ಮಂಡಿಸಲಾಗಿದೆ. ಒಟ್ಟಾರೆಯಾಗಿ 197 ಸೂಚನೆಗಳಿಗೆ ಉತ್ತರವನ್ನು ಸ್ವೀಕರಿಸಲಾಗಿದೆ. ಶೂನ್ಯ ವೇಳೆಯಲ್ಲಿ ಒಟ್ಟು 31 ಸೂಚನೆಗಳನ್ನು ಚರ್ಚಿಸಲಾಗಿದೆ ಎಂದು ಖಾದರ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News