ಮಂಗಳೂರು: ಸರಗಳ್ಳತನ, ದ್ವಿ ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ; 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

Update: 2023-06-26 08:02 GMT

ಮಂಗಳೂರು, ಜೂ.26: ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಸುರತ್ಕಲ್ ಪೊಲೀಸರು ನಡೆಸಿದ ಕಾರ್ಯಾಚರಣೆ ಯಲ್ಲಿ ಬಂಧಿಸಿದ್ದಾರೆ.

ಸುರತ್ಕಲ್ ಕೃಷ್ಣಾಪುರದ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಹಾಗೂ ಉಳ್ಳಾಲದ ಕೋಡಿಯ ಮುಹಮ್ಮದ್ ಫೈಝಲ್ ಯಾನೆ ಶಾಕಿರ್ ಯಾನೆ ಫೈಜು ಬಂಧಿತ ಆರೋಪಿಗಳು.

ಬಂಧಿತರಿಂದ 12,48,550 ರೂ.ಮೌಲ್ಯದ ಚಿನ್ನಾಭರಣ ಮತ್ತು 1,34,000 ರೂ.ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೋಲಿಸ್ ಕಮೀಶನರ್ ಕುಲದೀಪ್ ಕುಮಾರ್ ಆರ್ ಜೈನ್ ಸೋಮವಾರ ತಿಳಿಸಿದ್ದಾರೆ.

ಆರೋಪಿಗಳ ಬಂಧನೊಂದಿಗೆ ಎರಡು ಜಿಲ್ಲೆಗಳಲ್ಲಿ ನಡೆದಿರುವ ಸರಗಳ್ಳತನ ಮತ್ತು ಮತ್ತು ದ್ವಿಚಕ್ರ ವಾಹನಗಳ ಕಳ್ಳತನ ಸೇರಿದಂತೆ 13 ಪ್ರಕರಣಗಳು ಪತ್ತೆಯಾಗಿವೆ.

ಆರೋಪಿ ಹಬೀಬ್ ಹಸನ್ ಎಂಬಾತನು ಈ ಹಿಂದೆ ಎರಡೂ ಜಿಲ್ಲೆಗಳ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 35ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಇನ್ನೊಬ್ಬ ಆರೋಪಿ ಮಹಮ್ಮದ್ ಫೈಜಲ್ 15 ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿದ್ದ. ಈತ ಪ್ರಕರಣವೊಂದರಲ್ಲಿ ಜೈಲು ಸಜೆ ಅನುಭವಿಸಿ ಎಪ್ರಿಲ್ ನಲ್ಲಿ ಜೈಲಿನಿಂದ ಹೊರಬಂದಿದ್ದ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಆರೋಪಿಗಳನ್ನು ನಗರದ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯಕ್ಕೆ ಜೂ.24ರಂದು ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.


 



Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News