ಮಾರ್ಚ್ನಲ್ಲೇ 39 ಸೆ. ಉಷ್ಣಾಂಶ; ಎಪ್ರಿಲ್, ಮೇ ತಿಂಗಳಲ್ಲಿ ಎಚ್ಚರವಹಿಸಿ: ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ, ಮಾ.25: ಈ ಸಲದ ಬೇಸಿಗೆಯ ಮಾರ್ಚ್ ತಿಂಗಳಿನಲ್ಲಿಯೇ ಜಿಲ್ಲೆಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡುಬಂದಿದ್ದು, ಮುಂಬರುವ ಎಪ್ರಿಲ್ ಹಾಗೂ ಮೇ ತಿಂಗಳಲ್ಲಿ ಉಷ್ಣಾಂಶವು ಮತ್ತಷ್ಟು ಹೆಚ್ಚುವ ಎಲ್ಲಾ ಸಾಧ್ಯತೆಗಳಿವೆ. ಇದರಿಂದಾಗಿ ಬಿಸಿಗಾಳಿ ಶಾಖ (ಹೀಟ್ವೇವ್ ಸ್ಟ್ರೋಕ್) ದಿಂದ ಮನುಷ್ಯನ ದೇಹದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಜಿಲ್ಲೆಯ ಜನತೆಗೆ ಜಾಗೃತಿಯ ಸಂದೇಶ ನೀಡಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಹೀಗಾಗಿ ಜನತೆಗೆ ಹೆಚ್ಚು ಹೆಚ್ಚು ನೀರು ಸೇವನೆ, ವಿಶ್ರಾಂತಿ, ಚಟುವಟಿಕೆಗಳ ಅವಧಿ ಬದಲಾವಣೆ ಸೇರಿದಂತೆ ವಿವಿಧ ಮುಂಜಾ ಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ವಾತಾವರಣದ ಉಷ್ಣಾಂಶ ದಿನೇ ದಿನೇ ಹೆಚ್ಚುತ್ತಿದೆ. ಸಾರ್ವಜನಿಕರಿಗೆ ಬಿಸಿಗಾಳಿ ಹಾಗೂ ಶಾಖದಿಂದ ತಮ್ಮ ದೇಹದ ಆರೋಗ್ಯ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಉತ್ತಮ ಆರೋಗ್ಯ ಹೊಂದುವಂತೆ ನೋಡಿಕೊಳ್ಳಬೇಕು ಎಂದು ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು.
ಪ್ರಸ್ತುತ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿಲ್ಲ. ಕಳೆದ ಸಾಲಿನಲ್ಲಿ ಸಮಸ್ಯೆ ಉಂಟಾದ ಗ್ರಾಮ ಅಥವಾ ವಾರ್ಡ್ಗಳಲ್ಲಿ ಮುಂದೆ ಸಮಸ್ಯೆಗಳಾದಲ್ಲಿ ಕುಡಿ ಯುವ ನೀರು ಒದಗಿಸಲು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು. ಕಲುಷಿತ ಕುಡಿಯುವ ನೀರು ಸರಬರಾಜು ಆಗದಂತೆ ಅಗತ್ಯ ಕ್ರಮವಹಿಸಬೇಕು. ಆಗಿಂದಾಗ್ಗೆ ಕುಡಿಯುವ ನೀರಿನ ಪರೀಕ್ಷೆ ಮಾಡಿಸಬೇಕು ಎಂದರು.
ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಸಿಡಿಲು-ಗುಡುಗುಗಳಿಂದ ಮಾನವ ಜೀವ ಸೇರಿದಂತೆ ಸಾಕಷ್ಟು ಹಾನಿ ಉಂಟಾಗಿತ್ತು. ಸಿಡಿಲು-ಗುಡುಗು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಿ, ಸಾವು-ನೋವುಗಳು ಉಂಟಾಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ವಿದ್ಯುಚ್ಛಕ್ತಿ ಸರಬರಾಜಿನ ಹಾಳಾದ ಕಂಬಗಳು, ನೇತಾಡುವ ತಂತಿಗಳ ತೆರವು ಕಾರ್ಯಗಳನ್ನು ಹಾಗೂ ಅರಣ್ಯ ಪ್ರದೇಶದಲ್ಲಿ ಅಪಾಯಕಾರಿ ಮರ ಹಾಗೂ ಗೆಲ್ಲುಗಳ ತೆರವು ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದ ಅವರು, ಯಾವುದೇ ಭಾಗದಲ್ಲಿ ದುರಸ್ಥಿಗಾಗಿ ವಿದ್ಯುತ್ಚ್ಛಕ್ತಿ ಸರಬರಾಜಿನ ವ್ಯತ್ಯಯ ಉಂಟುಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪ್ರಕಟಣೆಯ ಮೂಲಕ ಮಾಹಿತಿ ನೀಡಬೇಕು ಎಂದರು.
ರಸ್ತೆ ಬದಿಯಲ್ಲಿರುವ, ಸಾರ್ವಜನಿಕ ಸ್ಥಳಗಳಲ್ಲಿರುವ ಅಪಾಯಕಾರಿ ಮರಗಳ ತೆರವು ಕಾರ್ಯಗಳನ್ನು ನಿರ್ಲಕ್ಷ್ಯವಿಲ್ಲದೇ ಜರೂರಾಗಿ ಕೈಗೊಳ್ಳಬೇಕು. ಮಳೆ ನೀರು ಸರಾಗವಾಗಿ ಹರಿದುಹೋಗಲು ಅನುಕೂಲ ವಾಗುವಂತೆ ತೋಡು ಹಾಗೂ ಚರಂಡಿಗಳ ಸ್ವಚ್ಛತಾ ಕಾರ್ಯಗಳನ್ನು ತಕ್ಷಣವೇ ಕೈಗೊಳ್ಳಬೇಕು ಎಂದು ತಿಳಿಸಿದರು.
ಸ್ಥಳೀಯ ಸಂಸ್ಥೆಗಳು ಬೇಸಿಗೆಯಲ್ಲಿ ಕುಡಿಯುವ ನೀರನ್ನು ಒದಗಿಸಲು ಅಗತ್ಯವಿರುವ ಅನುದಾನವನ್ನು ಎಸ್ಎಫ್ಸಿಯಲ್ಲಿ ಶೇ.50ರಷ್ಟು ಮೀಸಲಿರಿ ಸಬೇಕು ಎಂದ ಅವರು, ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳು ಆಗಿಂದಾಗ್ಗೆ ಸಭೆ ನಡೆಸಿ, ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು ಎಂದರು.
ನೆರೆ ಎದುರಿಸಲು ಸಿದ್ಧತೆ: ಮಳೆಗಾಲದಲ್ಲಿ ನೆರೆಯಿಂದ ತೊಂದರೆ ಉಂಟಾಗುವ ಗ್ರಾಮ ಅಥವಾ ವಾರ್ಡ್ ಗಳ ಪ್ರವಾಹ ಪೀಡಿತ ಪ್ರದೇಶಗಳ ನಿರ್ವಹಣೆ ಯೋಜನೆಗಳನ್ನು ತಯಾರಿಸಿ ಇಟ್ಟುಕೊಳ್ಳಬೇಕು ಎಂದ ಜಿಲ್ಲಾಧಿಕಾರಿ, ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ಸಾಮರ್ಥ್ಯದ ದೃಢೀಕರಣ ಪತ್ರಗಳನ್ನು ಅಭಿಯಂತರರುಗಳಿಂದ ಪಡೆದು, ಸಲ್ಲಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕಳೆದ ಸಾಲಿ ನಲ್ಲಿ ಗ್ರಾಮೀಣ ಭಾಗದ ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ತೊಂದರೆ ಉಂಟಾ ಗಿತ್ತು. ಈಗಾಗಲೇ ಸಂಬಂಧಪಟ್ಟ ಗ್ರಾಮ ಪಂಚಾಯತಿಗಳಿಗೆ ಮುಂದಾಗುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಖಾಸಗಿ ಬೋರ್ವೆಲ್ಗಳಿಂದ ನೀರು ಪಡೆಯಲು ಒಪ್ಪಂದ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲು ನಿರ್ದೇಶನ ನೀಡಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಕುಂದಾಪುರ ಡಿಎಫ್ಓ ಗಣಪತಿ, ಕಾರ್ಕಳ ವನ್ಯಜೀವಿ ವಿಭಾಗದ ಡಿಎಫ್ಓ ಶಿವರಾಮ ಎಂ ಬಾಬು, ಎಎಸ್ಪಿ ಸಿದ್ದಲಿಂಗಪ್ಪ, ಸಹಾಯಕ ಕಮಿಷನರ್ ಮಹೇಶ್ಚಂದ್ರ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕುಗಳ ತಹಶೀಲ್ದಾರ್ಗಳು, ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.
"ಬೇಸಿಗೆಯಲ್ಲಿ ಸಾಮಾನ್ಯವಾಗಿ ಬೆಂಕಿ ಅವಘಡಗಳು ಉಂಟಾಗುವ ಸಾಧ್ಯತೆಗಳು ಹೆಚ್ಚು ಇರುವ ಕಾರಣ ಅಗ್ನಿಶಾಮಕ ದಳದವರು ಸದಾ ಸನ್ನದ್ಧ ಸ್ಥಿತಿಯಲ್ಲಿರಬೇಕು. ಅಗ್ನಿ ನಂದಿಸುವ ವಾಹನಗಳ ಕೊರತೆ ಇದ್ದಲ್ಲಿ ಕೂಡಲೆ ಸರಕಾರಕ್ಕೆ ಪತ್ರ ಬರೆದು ಅವುಗಳನ್ನು ತರಿಸುವ ಕಾರ್ಯವಾಗಬೇಕು".
ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ ಉಡುಪಿ

