ಉಡುಪಿ ಜಿಲ್ಲೆಯಲ್ಲಿ 11.45ಕೋಟಿ ರೂ. ಬರ ಪರಿಹಾರಕ್ಕೆ ಅನುದಾನದ ಪ್ರಸ್ತಾವನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2023-11-01 13:40 GMT

ಉಡುಪಿ, ನ.1: ಈ ಬಾರಿಯ ಪ್ರಾಕೃತಿಕ ಏರುಪೇರುಗಳಿಂದಾಗಿ ವಾಡಿಕೆ ಮಳೆ ಬಾರದೇ ರಾಜ್ಯದ 220ಕ್ಕೂ ಅಧಿಕ ತಾಲೂಕುಗಳಲ್ಲಿ ಬರದ ಛಾಯೆ ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆಯಲ್ಲೂ ಮಳೆ ಕೊರತೆಯಿಂದಾಗಿ ಒಟ್ಟು 13,937 ಹೆಕ್ಟೇರ್ ಪ್ರದೇಶದ ಭತ್ತದ ಬೆಳೆ ಹಾನಿಯಾಗಿದ್ದು, 11.85 ಕೋಟಿ ರೂ. ಪರಿಹಾರ ಅನುದಾನ ನೀಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಜಿಲ್ಲಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವವಂದನೆ ಸ್ವೀಕರಿಸಿ, ರಾಜ್ಯೋತ್ಸವ ಸಂದೇಶ ನೀಡಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಮಳೆಗಾಲದ ವಾಡಿಕೆ ಮಳೆ 4418ಮಿ.ಮೀ. ಇದ್ದರೆ, ಈ ಬಾರಿ 3332ಮಿ.ಮೀ. ಮಾತ್ರ ಮಳೆ ಸುರಿದು ಶೇ.25ರಷ್ಟು ಮಳೆಯ ಕೊರತೆ ಉಂಟಾಗಿದೆ. ಹೀಗಾಗಿ ಈಗಾಗಲೇ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಗಳನ್ನು ಸಂಪೂರ್ಣ ಬರ ಪೀಡಿತ ತಾಲೂಕು ಹಾಗೂ ಬ್ರಹ್ಮಾವರ ತಾಲೂಕನ್ನು ಸಾಧಾರಣ ಬರ ಪೀಡಿತ ತಾಲೂಕು ಎಂದು ಷೋಷಿಸಲಾಗಿದೆ ಎಂದರು.

ಇದರಿಂದ ಕಾರ್ಕಳ ತಾಲೂಕಿನಲ್ಲಿ 4103 ಹೆ. ಹೆಬ್ರಿ ತಾಲೂಕಿನಲ್ಲಿ 1283 ಹೆ. ಹಾಗೂ ಬ್ರಹ್ಮಾವರ ತಾಲೂಕಿನಲ್ಲಿ 8551ಸೇರಿದಂತೆ ಒಟ್ಟು 13,937 ಹೆಕ್ಟೇರ್ ಪ್ರದೇಶದ ಭತ್ತದ ಬೆಳೆ ಹಾನಿ ಅಂದಾಜಿಸಿದ್ದು 11.85 ಕೋಟಿ ರೂ. ಪರಿಹಾರ ಅನುದಾನ ನೀಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದವರು ತಿಳಿಸಿದರು.

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಬಜೆ ಅಣೆಕಟ್ಟಿನ ಹೂಳು ತೆಗೆಯಲು ಟೆಂಡರ್ ಕರೆಯಲಾಗಿದೆ. ವಾರಾಹಿಯಿಂದ ಕುಡಿಯುವ ನೀರು ಯೋಜನೆಯ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸಲು ಸೂಚಿಸಲಾಗಿದೆ.ಜನಸಾಮಾನ್ಯರೂ ಸಹ ನೀರಿನ ಮಿತ ಬಳಕೆಯ ಮೂಲಕ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದರು.

ತಾಲೂಕು ಮಟ್ಟದಲ್ಲಿ ಕಾರ್ಯಪಡೆಗಳನ್ನು ರಚಿಸಿ ಬರ ನಿರ್ವಹಣೆಗೆ ಮುಂದಾಗಲಾಗುವುದು. ನಮ್ಮ ರೈತರು ಸಹ ನೀರು ಸಂರಕ್ಷಣೆ, ಮಳೆ ಕೊಯ್ಲು, ಜಲಮರು ಪೂರಣ, ವನಸಂರಕ್ಷಣೆಯಂಥ ಕ್ರಮಗಳಿಗೆ ಒತ್ತು ನೀಡಬೇಕು ಎಂದೂ ಅವರು ಮನವಿ ಮಾಡಿದರು.

56 ಕಿಂಡಿ ಅಣೆಕಟ್ಟಿಗೆ 450 ಕೋಟಿ: ರಾಜ್ಯ ಸರಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಪಶ್ಚಿಮ ವಾಹಿನಿಯಡಿ ಜಿಲ್ಲೆಯಲ್ಲಿ ಸುಮಾರು 450 ಕೋಟಿ ರೂ. ವೆಚ್ಚದಲ್ಲಿ 56 ಕಿಂಡಿ ಅಣೆಕಟ್ಟು ನಿರ್ಮಾಣ ಯೋಜನೆಯನ್ನು ಹಾಕಿಕೊಳ್ಳ ಲಾಗಿದೆ. ಇದರಿಂದ ಸುಮಾರು 2476.70 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಸಂರಕ್ಷಣೆಗಾಗಿ 26.46 ಕೋಟಿ ರೂ.ಮೊತ್ತದಲ್ಲಿ 5.20ಕಿ.ಮೀ. ಉದ್ದಕ್ಕೆ ನದಿ ದಂಡೆ ಸಂರಕ್ಷಣಾ ಕಾಮಗಾರಿ ಯನ್ನು ಕೈಗೊಳ್ಳಲಾಗಿದೆ. ಕೆರೆ ಆಧುನೀಕರಣ ಯೋಜನೆಯಡಿ ಸುಮಾರು ನಾಲ್ಕು ಕೋಟಿ ರೂ.ಅಂದಾಜು ವೆಚ್ಚದಲ್ಲಿ ಎರಡು ಕೆರೆಗಳನ್ನು ಅಭಿವೃದ್ಧಿ ಪಡಿಸಿ 12 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಲಾಗಿದೆ ಎಂದರು.

ಖಾರ್‌ಲ್ಯಾಂಡ್ ಯೋಜನೆಗೆ 24 ಕೋಟಿ: ಸಮುದ್ರದ ಹಿನ್ನೀರಿನಿಂದಾಗಿ ಕೃಷಿ ಭೂಮಿಗಳು ಲವಣಯುಕ್ತವಾಗುವುದನ್ನು ತಪ್ಪಿಸಲು ಸುಮಾರು 24 ಕೋಟಿ ರೂ.ಮೊತ್ತದ ಖಾರ್‌ಲ್ಯಾಂಡ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾ ಗುವುದು. ಅಲ್ಲದೇ 81.90 ಕೋಟಿ ರೂ. ವೆಚ್ಚದಲ್ಲಿ ಎರಡು ಏತ ನೀರಾವರಿ ಯೋಜನೆಗಳಿಗೆ ಅನಮೋದನೆ ನೀಡಲಾಗಿದೆ.ಇದರಿಂದ ಸುಮಾರು 325 ಹೆರ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರಕಲಿದೆ ಎಂದು ವಿವರಿಸಿದರು.

ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯ 3,67,343 ವಿದ್ಯುತ್ ಗ್ರಾಹಕರ ಪೈಕಿ 3,06,106 ಗ್ರಾಹಕರು ಹೆಸರು ನೊಂದಾಯಿಸಿಕೊಂಡಿದ್ದು ಪ್ರತಿ ತಿಂಗಳು 200 ಯುನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯುತಿದ್ದಾರೆ. ಕಳೆದೆರಡು ತಿಂಗಳಲ್ಲಿ ಇವರಿಗೆ ಒಟ್ಟು 34.82 ಕೋಟಿ ರೂ. ರಿಯಾಯಿತಿ ನೀಡಲಾಗಿದೆ ಎಂದರು.

ಶಕ್ತಿ ಯೋಜನೆಯಡಿ ಕಳೆದ ಜೂನ್ ತಿಂಗಳಿನಿಂದ ಈವರೆಗೆ 43.20 ಲಕ್ಷ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಸೌಲಭ್ಯ ಪಡೆದುಕೊಂಡಿದ್ದು, ರಾಜ್ಯ ಸರಕಾರ 15.84 ಕೋಟಿ ರೂ.ವನ್ನು ಭರಿಸಿದೆ. ಗೃಹಲಕ್ಷ್ಮೀ ಯೋಜನೆ ಯಡಿ ಜಿಲ್ಲೆ ಯಲ್ಲಿ 2.13 ಲಕ್ಷ ಫಲಾನುಭವಿಗಳು ನೊಂದಾವಣಿಗೊಂಡಿದ್ದು, 1.77 ಲಕ್ಷ ಫಲಾನುಭವಿಗಳ ಖಾತೆಗೆ 40.67 ಕೋಟಿ ರೂ.ಹಣ ಜಮಾ ಮಾಡಿ ಶೇ.88ರಷ್ಟು ಸಾಧನೆ ಮಾಡಲಾಗಿದೆ ಎಂದರು.

100 ಗ್ರಾಮ ನ್ಯಾಯಾಲಯ: ರಾಜ್ಯಾದ್ಯಂತ 40 ಕೋಟಿ ರೂ.ವೆಚ್ಚದಲ್ಲಿ 4000 ಗ್ರಾಪಂಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗಾಗಿ ‘ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗಿದೆ. ರಾಜ್ಯದಲ್ಲಿ 100 ಗ್ರಾಮ ನ್ಯಾಯಾಲಯಗಳನ್ನು 25 ಕೋಟಿ ರೂ.ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಜಿಲ್ಲೆಯ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪೊಲೀಸ್, ಗೃಹರಕ್ಷಕ ದಳ ಹಾಗೂ ವಿವಿಧ ಇಲಾಖೆಗಳು ಸೇರಿದಂತೆ 14 ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಸಚಿವರು ಗೌರವ ವಂದನೆ ಸ್ವೀಕರಿಸಿದರು. ಕೊನೆಯಲ್ಲಿ ವಿವಿಧ ಶಾಲಾ ತಂಡಗಳಿಂದ ಆಕರ್ಷಕ ಸಾಂಸ್ಕೃತಿಕ, ನೃತ್ಯ ಕಾರ್ಯಕ್ರಮಗಳು ನಡೆದವು.

ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 29 ಮಂದಿಗೆ ಹಾಗೂ ಐದು ಸಂಘಸಂಸ್ಥೆಗಳಿಗೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು. ಕಾರ್ಯ ಕ್ರಮಕ್ಕೂ ಮುನ್ನ ಬೋರ್ಡ್ ಹೈಸ್ಕೂಲಿನಿಂದ ಅಜ್ಜರಕಾಡು ಮೈದಾನದವರೆಗೆ ಭುವನೇಶ್ವರಿ ದೇವಿಯ ಮೆರವಣಿಗೆ ನಡೆಯಿತು. ಉಸ್ತುವಾರಿ ಸಚಿವರು ಮೆರವಣಿಗೆಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಸಿಇಓ ಪ್ರಸನ್ನ ಎಚ್., ಎಸ್ಪಿ ಡಾ.ಅರುಣ್, ಎಡಿಸಿ ಮಮತಾದೇವಿ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉಪಸ್ಥಿತರಿದ್ದರು.

ಕಾಪು, ಬೈಂದೂರಿನಲ್ಲಿ ಇಂದಿರಾ ಕ್ಯಾಂಟಿನ್

ರಾಜ್ಯದ ಜನರಿಗೆ ಕಡಿಮೆ ದರದಲ್ಲಿ ಉಪಾಹಾರ, ಊಟ ಒದಗಿಸಲು ಪ್ರಾರಂಭಿಸಲಾದ ಇಂದಿರಾ ಕ್ಯಾಂಟಿನ್‌ಗಳನ್ನು ಮತ್ತೆ ಪ್ರಾರಂಭಿಸಿ ಉಪಹಾರ ಹಾಗೂ ಊಟ ಲಭಿಸುವಂತೆ ಮಾಡಲಾಗಿದೆ. ಜಿಲ್ಲೆಯಲ್ಲಿ ನಾಲ್ಕು ಇಂದಿರಾ ಕ್ಯಾಂಟೀನ್‌ಗಳಲ್ಲಿ ಮತ್ತೆ ಊಟ, ಉಪಹಾರ ದೊರೆಯುತ್ತಿದ್ದು, ಬಡ ಜನರ ಹಸಿವು ನೀಗಿಸುತ್ತಿದೆ.

ಇದರೊಂದಿಗೆ ಜಿಲ್ಲೆಯ ಕಾಪು ಮತ್ತು ಬೈಂದೂರು ವ್ಯಾಪ್ತಿಯಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಲಾ ಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ಜಿಲ್ಲೆಯ 122 ಗ್ರಾಮಗಳಿಗೆ ಬಹು ಗ್ರಾಮ ಕುಡಿಯುವ ನೀರು ಯೋಜನೆಯಡಿ 1600 ಕೋಟಿ ರೂ.ಮೊತ್ತದ ಕಾಮಗಾರಿ ಯನ್ನು ಪೂರ್ಣ ಗೊಳಿಸಲಾಗಿದೆ. 59 ಗ್ರಾಮಗಳಲ್ಲಿ 585 ಕೋಟಿ ರೂ.ಮೊತ್ತದ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.












 


 


 


 


 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News