ಮೀಟರ್ ಆಧಾರದಲ್ಲಿ ಬಾಡಿಗೆ ಪಡೆಯದ ಆಟೋ ರಿಕ್ಷಾಗಳ ವಿರುದ್ಧ ಕ್ರಮ: ಡಿಸಿ ವಿದ್ಯಾ ಕುಮಾರಿ

Update: 2023-12-31 10:09 GMT

ಉಡುಪಿ, ಡಿ.31: ಆಟೋ ಚಾಲಕರು ಸಾರ್ವಜನಿಕರನ್ನು ಬಾಡಿಗೆ ಆಧಾರದಲ್ಲಿ ಕರೆದೊಯ್ಯುವಾಗ ತಪ್ಪದೇ ಮೀಟರ್ ಆಧಾರದ ಮೇಲೆ ಬಾಡಿಗೆಯನ್ನು ಪಡೆಯಬೇಕು. ಮೀಟರ್ ಬಳಸದ ಬಗ್ಗೆ ಸಾರ್ವಜನಿಕರಿಂದ ದೂರು ಬಂದರೆ ಕಾನೂನು ಕ್ರಮ ಜರಗಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಎಚ್ಚರಿಕೆ ನೀಡಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕ/ಮಾಲಕರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕನಿಷ್ಠ ದರ ಒಂದುವರೆ ಕಿಲೋಮೀಟರ್ ಗೆ 40 ರೂ., ನಂತರದ ಒಂದು ಕಿಲೋ ಮೀಟರ್‌ಗೆ 20 ರೂ., ರಾತ್ರಿ 10ರಿಂದ ಬೆಳಗ್ಗೆ 5 ರವರೆಗೆ ಒಂದುವರೆ ಪಟ್ಟು ಶುಲ್ಕ ಪಡೆಯಬಹುದಾಗಿದೆ. ಒಂದೊಮ್ಮೆ ಹೆಚ್ಚು ಶುಲ್ಕ ಪಡೆದರೆ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಆಟೋ ಚಾಲಕರು ರಹದಾರಿ ಪಡೆದ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಡಿಗೆಗೆ ವಾಹನವನ್ನು ಚಾಲನೆ ಮಾಡಬಹುದಾಗಿದ್ದು, ಇವರು ತಮ್ಮ ಕ್ಷೇತ್ರ ವ್ಯಾಪ್ತಿ ಬಿಟ್ಟು ಚಾಲನೆ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ಖಾಸಗಿ ವಾಹನಗಳಲ್ಲಿ ಬಾಡಿಗೆ ಆಧಾರದ ಮೇಲೆ ಸಾರ್ವಜನಿಕರನ್ನು ಸಾಗಾಣಿಕೆ ಮಾಡುವುದು ಕಂಡು ಬಂದಲ್ಲಿ ಅರ್‌ಟಿಓ ಹಾಗೂ ಪೊಲೀಸ್ ಇಲಾಖೆಗಳು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿ ದರು. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಗಳಿಂದ ಸಾರ್ವ ಜನಿಕರ ಸಾಗಾಣಿಕೆಯ ಖಾಸಗಿ ವಾಹನಗಳಲ್ಲಿ ಬಾಡಿಗೆ ಪಡೆದು ಸಂಚರಿಸುತ್ತ ಇರುವುದು ಹೆಚ್ಚು ಕಂಡು ಬರುತ್ತಿದೆ. ಇದರಿಂದ ಸರಕಾರಕ್ಕೆ ತ್ರೈಮಾಸಿಕ ತೆರಿಗೆ ವಂಚನೆ ಆಗುವುದರ ಜೊತೆಗೆ ಅದನ್ನೇ ನಂಬಿ ಟ್ಯಾಕ್ಸಿ ಚಾಲಕರಿಗೆ ಅನಾನುಕೂಲ ವಾಗುತ್ತಿದೆ ಎಂದು ಅವರು ತಿಳಿಸಿದರು.

ಯಶೋಧ ಆಟೋ ಚಾಲಕ ಮತ್ತು ಮಾಲಕರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಮಾತನಾಡಿ, ಆಟೋ ಚಾಲಕರನ್ನು ಕಾರ್ಮಿಕರ ವ್ಯಾಪ್ತಿಗೆ ಸೇರಿಸಿ ಕಾರ್ಮಿಕ ಇಲಾಖೆಯಿಂದ ನೀಡುತ್ತಿರುವ ಸರಕಾರಿ ಸೌಲಭ್ಯಗಳನ್ನು ಒದಗಿಸಬೇಕು. ನಗರಸಭಾ ವ್ಯಾಪ್ತಿಯ 35 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಬರುವ ಉಡುಪಿ ಸಾರಿಗೆ ಪ್ರಾಧಿಕಾರದ ನಿಯಮದನ್ವಯ ವಲಯ -1 ರ ಪರವಾನಿಗೆ ಹೊಂದಿದ ರಿಕ್ಷಾಗಳಿಗೆ ನಗರದಲ್ಲಿ ಸಂಚರಿಸುವ ಮತ್ತು ರಿಕ್ಷಾ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲು ಅವಕಾಶ ಒದಗಿಸಿಕೊಡಬೇಕು ಎಂದರು.

ಉಡುಪಿ ಜಿಲ್ಲಾ ಟ್ಯಾಕ್ಸಿ ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ರಘುಪತಿ ಭಟ್ ಮಾತನಾಡಿ, ಖಾಸಗಿ ವಾಹನದ ಮಾಲೀಕರು ಅನಧಿಕೃತವಾಗಿ ಬಾಡಿಗೆಗೆ ತಮ್ಮ ವಾಹನಗಳನ್ನು ಕಲಿಸಿದ್ದಲ್ಲಿ, ಅಪಘಾತವಾದ ಸಂದರ್ಭದಲ್ಲಿ ಪರಿಹಾರ ಧನ ಹಣವನ್ನು ಪಡೆಯಲು ತೊಂದರೆ ಉಂಟಾಗುತ್ತಿದೆ. ನಿಜವಾಗಿಯೂ ಟ್ಯಾಕ್ಸಿ ಚಾಲನೆ ಮಾಡುತ್ತಿರುವ ವೃತ್ತಿಪರರಿಗೆ ಜೀವನ ನಿರ್ವಹಣೆಗೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಉಡುಪಿ ಎಸ್ಪಿ ಡಾ.ಅರುಣ್ ಕೆ., ಹೆಚ್ಚುವರಿ ಎಸ್ಪಿಎಸ್.ಟಿ.ಸಿದ್ಧಲಿಂಗಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಪಿ.ರವಿಶಂಕರ್, ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್, ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News