ಉಡುಪಿಯಲ್ಲಿ ಅಗ್ನಿ ಬನ್ನಿರಾಯ ಜಯಂತಿ ಆಚರಣೆ

ಉಡುಪಿ: ದಾರ್ಶನಿಕರು ತಮ್ಮ ಜೀವನವನ್ನು ಮುಡಿಪಾಗಿಟ್ಟು ಸಮಾಜಕ್ಕಾಗಿ ವಿಶೇಷ ಸೇವೆಯನ್ನು ಸಲ್ಲಿಸಿದ್ದಾರೆ. ಇಂದಿನ ಯುವ ಪೀಳಿಗೆ ಇಂಥ ದಾರ್ಶನಿಕರ ಮಾರ್ಗದಲ್ಲಿ ನಡೆಯುವ ಮೂಲಕ ಉತ್ತಮ ರಾಷ್ಟ್ರ, ನಾಡುನುಡಿಯ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದ್ದಾರೆ.
ಉಡುಪಿ ಬ್ರಹ್ಮಗಿರಿಯ ರೆಡ್ಕ್ರಾಸ್ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಇಂದು ನಡೆದ ಶ್ರೀ ಅಗ್ನಿ ಬನ್ನಿರಾಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಗ್ನಿ ಬನ್ನಿರಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡುತಿದ್ದರು.
ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವಕ್ಕೆ ಮಾರ್ಗವನ್ನು ಸೂಚಿಸಿದವರು ಅಗ್ನಿ ಬನ್ನಿರಾಯರು. ಇಂತಹ ವೀರ ಪುರುಷರ ಜಯಂತಿ ಆಚರಣೆ ಅರ್ಥ ಪೂರ್ಣ ಎಂದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶ್ರೀನಿವಾಸ್ ರಾವ್ ಮಾತನಾಡಿ, ಅಗ್ನಿ ಬನ್ನಿರಾಯರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ತಿಳಿಯುವುದರ ಜೊತೆಗೆ ಅವರ ತತ್ವ ಸಿದ್ದಾಂತಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.
ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಮಹಾಪುರುಷರ ವ್ಯಕ್ತಿತ್ವ ಹಾಗೂ ಅವರ ತತ್ವ ಸಿದ್ದಾಂತಗಳ ಅರಿವು ಹೊಂದುವುದು ಅತ್ಯವಶ್ಯವಾಗಿದ್ದು, ವಿದ್ಯಾರ್ಥಿಗಳು ಪ್ರಜ್ಞಾವಂತ ರಾಗಿ ಇಂಥ ಮಹನೀಯರ ಕುರಿತು ಹೆಚ್ಚಿನ ವಿಚಾರಗಳನ್ನು ಅರಿಯುವ ಮೂಲಕ ಜಯಂತಿಯನ್ನು ಅರ್ಥ ಪೂರ್ಣವಾಗಿಸಬೇಕು ಎಂದರು.
ಕಾರ್ಕಳ ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಸುಲೋಚನ ಪಚ್ಚಿನಡ್ಕ ಶ್ರೀಅಗ್ನಿ ಬನ್ನಿರಾಯರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಖಜಾಂಜಿ ರಮಾದೇವಿ, ಉಪಸಭಾಪತಿ ಡಾ.ಅಶೋಕ್ ವೈ.ಜಿ, ಮಾಜಿ ಸದಸ್ಯ ಕಾರ್ಯದರ್ಶಿ ಕೆ.ಬಾಲಕೃಷ್ಣ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಇಲಾಖೆಯ ವರ್ಷಾ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
