ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಬೈಂದೂರಿನಲ್ಲಿ ಚುನಾವಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Update: 2024-03-23 15:17 GMT

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯನ್ನು ನ್ಯಾಯಸಮ್ಮತ ಹಾಗೂ ನಿರ್ಭೀತವಾಗಿ ನಡೆಸಲು ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಶನಿವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಕೇಂದ್ರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಸಿದ್ಧತೆ ಕುರಿತ ಅಂತರ್ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡುತ್ತಿದ್ದರು.

ಬೈಂದೂರು ವಿಧಾನಸಭಾ ಕ್ಷೇತ್ರದ ನಗರ ವ್ಯಾಪ್ತಿಯಲ್ಲಿ 26 ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ 220 ಒಟ್ಟು 246 ಮತಗಟ್ಟೆಗಳಿದ್ದು, 1,16,310 ಪುರುಷರು, 1,21,413 ಮಹಿಳೆಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,37,726 ಮತದಾರರು ಇದ್ದಾರೆ ಎಂದರು.

ಜಿಲ್ಲೆಯಲ್ಲಿ 246 ಮತದಾನ ಕೇಂದ್ರಗಳಿದ್ದು ಅವುಗಳಲ್ಲಿ 42 ಸೂಕ್ಷ್ಮ 12 ಅತಿಸೂಕ್ಷ್ಮ ಹಾಗೂ 190 ಸಾಮಾನ್ಯ ಮತಗಟ್ಟೆ ಕೇಂದ್ರಗಳಾಗಿವೆ ಎಂದ ಅವರು, ಎಂ.ಸಿ.ಸಿ ಉಲ್ಲಂಘನೆಯ ದೂರು ನಿರ್ವಹಣೆಗೆ ಸಹಾಯಕ ಚುನಾವಣೆ ಅಧಿಕಾರಿಗಳ ಕಚೇರಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಮ್ ಕಾರ್ಯ ನಿರ್ವಹಿಸುತಿದ್ದು, ಇದರ ದೂರವಾಣಿ ಸಂಖ್ಯೆ: 18004252099 ಆಗಿರುತ್ತದೆ ಎಂದರು.

ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಎಫ್‌ಎಸ್‌ಟಿ, ವಿಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ 21ಜನ ಸೆಕ್ಟರ್ ಆಫೀಸರ್‌ಗಳನ್ನು ನೇಮಕ ಮಾಡಲಾಗಿದೆ ಎಂದರು.

ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದ ಅವರು ಈ ಕಾರ್ಯಕ್ಕೆ ಚುನಾವಣಾ ವೆಚ್ಚ ನಿಗಾ ಸಮಿತಿ, ಎಂಸಿಎಂಸಿ ಸಮಿತಿ ಹಾಗೂ ಸಿ-ವಿಜಲ್ ಸಮಿತಿಯು ಸಹಾಯಕ ಚುನಾವಣೆ ಅಧಿಕಾರಿಗಳ ಉಸ್ತುವಾರಿಯಲ್ಲಿ ನಡೆಯಲಿದೆ ಎಂದರು.

ಚುನಾವಣಾ ಅಕ್ರಮಗಳನ್ನು ತಡೆಯಲು ಅಂತರ್ ಜಿಲ್ಲಾ ಗಡಿಗಳಲ್ಲಿ 26 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಎರಡು ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು, ಪೊಲೀಸ್, ಫಾರೆಸ್ಟ್ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಇ.ವಿ.ಎಂ ಹಾಗೂ ವಿ.ವಿ.ಪ್ಯಾಟ್‌ಗಳನ್ನು ರಾಂಡಮೈಜೇಶನ್ ಮಾಡುವ ಮೂಲಕ ಹಂಚಿಕೆ ಮಾಡಲಾಗಿದೆ ಎಂದರು.

ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಶಿವಮೊಗ್ಗದ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಉಡುಪಿಯ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News