ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ

ಉಡುಪಿ : ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಸೋಮವಾರ ಸಂಭ್ರಮ ಸಡಗರದಿಂದ ಆಚರಿಸಿದರು.
ಉಡುಪಿ ನಗರ, ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನ ರಹಮತುಲ್ಲಾಹ್ ಕೋಲ್ಕಾರ್ ನದ್ವಿ ಅವರ ನೇತೃತ್ವದಲ್ಲಿ ನಮಾಝ್ ನಿರ್ವಹಿಸಲಾಯಿತು.
ಈ ಸಂದರ್ಭದಲ್ಲಿ ಧರ್ಮಗುರುಗಳು ತಮ್ಮ ಈದ್ ಸಂದೇಶದಲ್ಲಿ ಯುವಜನತೆ ಮಾದಕ ವ್ಯಸನಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸಿದರು. ಅಲ್ಲದೇ ಯುದ್ಧಪೀಡಿತ ಫೆಲೆಸ್ತಿನ್ ಜನತೆಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಅಲ್ಲದೆ ಎಲ್ಲರೂ ಪರಸ್ಪರ ಸಹೋದರಂತೆ ಬದುಕಿ ಶಾಂತಿಯ ವಾತಾವರಣ ನಿರ್ಮಿಸುವಂತೆ ಸೌಹಾರ್ದ ಸಂದೇಶ ನೀಡಿದರು.
ಕೊಂಬಗುಡ್ಡೆ ಜಾಮಿಯಾ ಮಸ್ಜಿದ್ ಜದೀದ್ ಕಲಾನ್ ಮಸೀದಿಯ ಇಮಾಮ್ ಮೌಲಾನ ಮುಹಮ್ಮದ್ ಫರ್ವೀಝ್ ಆಲಂ ಈದ್ ನಮಾಜ್ ನಿರ್ವಹಿಸಿ ನಂತರ ಈದ್ ಖುತ್ಬಾ ಪಾರಾಯಣ ಮಾಡಿದರು. ಅಧ್ಯಕ್ಷ ಶಭಿ ಅಹಮದ್ ಖಾಝೀ, ಉಪಾಧ್ಯಕ್ಷ ಅಷ್ಪಾಕ್ ಅಬ್ದುಲ್ ಅಲಿ, ಕಾರ್ಯದರ್ಶಿ ಅನ್ವರ್ ಅಲಿ, ಜೊತೆ ಕಾರ್ಯದರ್ಶಿ ಮುಹಮ್ಮದ್ ಅಲಿ, ಕೋಶಾಧಿಕಾರಿ ಮುಹಮ್ಮದ್ ಇಕ್ಬಾಲ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿ ಕೊಂಡರು.
ಹೆನ್ನಾಬೈಲ್ ಮುಹಿಯುದೀನ್ ಜುಮಾ ಮಸೀದಿಯ ಈದ್ಗಾ ಮೈದಾನದಲ್ಲಿ ಈದುಲ್ ಫಿತ್ರ್ ಪ್ರಾರ್ಥನೆ ನೆರವೇರಿಸಿ ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯಗಳನ್ನು ಕೋರಿದರು. ಪ್ರಾರ್ಥನೆಯ ನೇತೃತ್ವ ವಹಿಸಿದ ಧರ್ಮಗುರು ಮೌಲಾನಾ ಮುಹಮ್ಮದ್ ಹಫೀಜ್ ರಜ್ವಿ ಈದ್ ಸಂದೇಶ ನೀಡಿದರು. ಮಸೀದಿಯ ಅಧ್ಯಕ್ಷ ಸೈಯದ್ ರಫೀಕ್, ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಮೊದಲಾದವರು ಉಪಸ್ಥಿತರಿದ್ದರು.
ಹಬ್ಬದ ದಿನ ಯಾವುದೇ ಅಹಿತಕರ ಘಟನೆ ನಡೆದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
‘ಮಾದಕ ದ್ರವ್ಯ ವ್ಯಸನದಿಂದ ದೂರವಿರಿ’ :
ಇಂದು ಯುವಜನತೆಯನ್ನು ಕಾಡುತ್ತಿರುವ ಬಹಳ ದೊಡ್ಡ ಸಮಸ್ಯೆ ಅಂದರೆ ಮಾದಕ ದ್ರವ್ಯ ವ್ಯಸನ. ಇದರಲ್ಲಿ ಮುಸ್ಲಿಂ ಯುವಕರು ಕೂಡ ಹೊರತಾಗಿಲ್ಲ. ಯುವಜನತೆ ಈ ರೀತಿಯ ಚಟಕ್ಕೆ ಬಲಿಯಾಗುತ್ತಿರುವುದರಿಂದ ದೇಶದ ಅಭಿವೃದ್ಧಿಗೆ ಬಹಳ ದೊಡ್ಡ ತೊಡಕಾಗುತ್ತಿದೆ. ಆದುದರಿಂದ ಯುವಜನತೆ ಈ ಮಾದಕ ದ್ರವ್ಯ ವ್ಯಸನದಿಂದ ದೂರ ಇದ್ದು, ಸ್ವಸ್ಥ ಸಮಾಜ ನಿರ್ಮಿಸುವ ಮೂಲಕ ದೇಶ ಕಟ್ಟುವಲ್ಲಿ ಕೈಜೋಡಿಸಬೇಕು ಎಂದು ಬ್ರಹ್ಮಗಿರಿ ನಾಯರ್ಕೆರೆಯ ಹಾಶಿಮಿ ಮಸೀದಿಯ ಇಮಾಮ್ ಒಬೇದುರ್ರಹ್ಮಾನ್ ನದ್ವಿ ಈದ್ ಸಂದೇಶದಲ್ಲಿ ಕರೆ ಕೊಟ್ಟರು.
ಯುವಜನತೆ ಇಂದು ಶಿಕ್ಷಣಕ್ಕೆ ಬಹಳಷ್ಟು ಒತ್ತು ನೀಡಬೇಕು. ಇದರಿಂದ ದೇಶಕ್ಕೆ ಬಹಳ ದೊಡ್ಡ ಕೊಡುಗೆ ನೀಡಲು ಸಾಧ್ಯ. ಆದುದರಿಂದ ಶಿಕ್ಷಣ ಪಡೆಯುವುದೇ ನಮ್ಮ ಜೀವನದ ಮುಖ್ಯ ಗುರಿಯಾಗಬೇಕೆ ಹೊರತು ಇಂತಹ ಮಾದಕ ದ್ರವ್ಯ ಸೇವನೆ ಚಟಗಳಲ್ಲ. ಪೋಷಕರು ಕೂಡ ತಮ್ಮ ಮಕ್ಕಳ ಚಟುವಟಿಕೆಗಳ ಬಗ್ಗೆ ಬಹಳಷ್ಟು ನಿಗಾವಹಿಸಬೇಕು ಎಂದರು.