ಉಡುಪಿ ಜಿಲ್ಲೆಯ ಇನ್ನೂ 32 ಸ್ಥಳಗಳು ಪ್ರವಾಸಿ ತಾಣಗಳಾಗಿ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2023-08-14 14:21 GMT

ಉಡುಪಿ, ಆ.14: ಜಿಲ್ಲೆಯಲ್ಲಿ ಈಗಾಗಲೇ 48 ಸ್ಥಳಗಳನ್ನು ಪ್ರವಾಸಿ ತಾಣಗಳೆಂದು ಗುರುತಿಸಲಾಗಿದೆ. ಇವುಗಳೊಂದಿಗೆ ಇನ್ನೂ 32 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಹೊಸದಾಗಿ ಸೇರ್ಪಡೆಗೊಳಿಸಿ ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

ಎರಡು ದಿನಗಳ ಉಡುಪಿ ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ ಸಚಿವೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿಗೆ ಬೇಕಾದ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ದೇಶ-ವಿದೇಶಗಳಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಆದ್ಯತೆಯ ಮೇಲೆ ಕಲ್ಪಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಜಿಲ್ಲೆಯ ಪ್ರಕೃತಿ ಸೌಂದರ್ಯ, ಧಾರ್ಮಿಕ ಕೇಂದ್ರಗಳು ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಿವೆ. ಇಲ್ಲಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ಆಗಮಿಸುವ ಪ್ರವಾಸಿಗರಿಗೆ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ, ವಾಹನಗಳ ಪಾರ್ಕಿಂಗ್ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ನಿರ್ದೇಶನ ನೀಡಿದರು.

ಪ್ರವಾಸಿ ಕೇಂದ್ರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಸೂಚನಾ ಫಲಕಗಳನ್ನು ಅಳವಡಿಸುವುದರ ಜೊತೆಗೆ ಪ್ರವಾಸಿ ಮಿತ್ರ ರನ್ನು ನಿಯೋಜಿಸಿ ಅಪಘಾತಗಳು ಆಗದಂತೆ ನೋಡಿಕೊಳ್ಳಬೇಕು ಎಂದರು.

ಹೊರಗಿನಿಂದ ಬರುವ ಪ್ರವಾಸಿಗರು ಹೆಚ್ಚಾಗಿ ಮಲ್ಪೆ, ಕಾಪು, ಮರವಂತೆ ಬೀಚ್‌ಗಳಿಗೆ ಭೇಟಿ ನೀಡುತ್ತಿದ್ದು, ವಾರಾಂತ್ಯದಲ್ಲಿ ಜನದಟ್ಟಣೆ ಹೆಚ್ಚಿರುತ್ತದೆ. ಇದಲ್ಲದೇ ಇನ್ನೂ ಅನೇಕ ಕಡಲತೀರಗಳು ಸುಂದರವಾದ ಪ್ರಕೃತಿ ಸೌಂದರ್ಯವನ್ನು ಹೊಂದಿವೆ. ಇವುಗಳ ಕುರಿತಂತೆ ಹೆಚ್ಚಿನ ಪ್ರಚಾರ ನೀಡಿ ಜನರು ಅಲ್ಲಿಗೆ ಭೇಟಿ ನೀಡುವಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ದಿಯಿಂದ ಸ್ಥಳೀಯ ಜನರಿಗೆ ಉದ್ಯೋಗವಕಾಶ ಕಲ್ಪಿಸುವುದರ ಜೊತೆಗೆ ಆರ್ಥಿಕ ಸ್ವಾವಲಂಬಿಗಳಾಗಲು ಸಹಾಯವಾಗುತ್ತದೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರಕಾರ ನೀಡಿರುವ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರೊಂದಿಗೆ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು. ಒಂದೊಮ್ಮೆ ಅನುದಾನದ ಕೊರತೆಯಾದಲ್ಲಿ ಸರಕಾರದಿಂದ ಮಂಜೂರು ಮಾಡಿಸಿ ಕೊಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಕಾಮಗಾರಿಗಳನ್ನು ಕೈಗೊಳ್ಳಲು ಸಿಆರ್‌ಝಡ್‌ನಿಂದ ನಿರಾಕ್ಷೇಪಣಾ ಪತ್ರವನ್ನು ಶೀಘ್ರದಲ್ಲಿಯೇ ಪಡೆದು ಪೂರ್ಣಗೊಳಿಸಬೇಕು. ಪಕ್ಕದ ರಾಜ್ಯ ಗೋವಾದಲ್ಲಿ ಪ್ರವಾಸಿ ಚಟುವಟಿಕೆಗಳನ್ನು ಅತೀಹೆಚ್ಚು ಕೈಗೊಳ್ಳುವ ಮೂಲಕ ಹೆಚ್ಚಿನ ಜನರನ್ನು ಆಕರ್ಷಿಸುತ್ತಿದೆ. ಆದರೆ ನಮ್ಮ ಜಿಲ್ಲೆಯಲ್ಲಿ ಉತ್ತಮ ಕಡಲತೀರ ಗಳಿದ್ದರೂ ಹೆಚ್ಚು ಪ್ರಚಾರ ಸಿಗುತ್ತಿಲ್ಲ. ಜನಾಕರ್ಷಣೀಯವಾದ ಜಲ ಸಾಹಸ ಕ್ರೀಡೆಗಳು ಸೇರಿದಂತೆ ವಿವಿಧ ಪ್ರವಾಸಿ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸ ಬೇಕಾದ ಅಗತ್ಯವಿದೆ ಎಂದರು.

ಪ್ರಸಾದ್ ಯೋಜನೆಯಡಿಯಲ್ಲಿ ವಿವಿಧ ಧಾರ್ಮಿಕ ಹೆರಿಟೇಜ್ ಸ್ಥಳಗಳಲ್ಲಿ ಪ್ರವಾಸಿಗರಿಗೆ ಸೌಲಭ್ಯ ಒದಗಿಸುವ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಅವರು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಅಕ್ಷಯ್ ಎಂ ಹಾಕೆ, ಅಪರ ಜಿಲ್ಲಾಧಿಕಾರಿ ಮಮತಾದೇವಿ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News