ಮಳೆಗಾಲದ ಅವಘಡಗಳ ಬಗ್ಗೆ ಎಚ್ಚರಿಕೆ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

Update: 2024-06-12 14:24 GMT

ಉಡುಪಿ, ಜೂ.12: ಜಿಲ್ಲೆಯಲ್ಲಿ ಮುಂಗಾರು ಮಳೆಯ ಸಂದರ್ಭದಲ್ಲಿ ನೆರೆ ಸೇರಿದಂತೆ ವಿವಿಧ ಅವಘಡಗಳಿಂದ ಜನ, ಜಾನುವಾರುಗಳಿಗೆ ಸಾವು ನೋವುಗಳಾಗದಂತೆ, ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ತಮ್ಮ ತುರ್ತು ಕೆಲಸಕಾರ್ಯಗಳಿಗಾಗಿ ಜನಸಾಮಾನ್ಯರು ಕಚೇರಿಗಳಿಗೆ ಭೇಟಿ ನೀಡಿದಾಗ ಅವರಿಗೆ ತಕ್ಷಣ ಸ್ಪಂದಿಸಿ, ನಿಯಮಾನುಸಾರ ಕೆಲಸಗಳನ್ನು ಮಾಡಿಕೊಡಬೇಕು ಎಂದೂ ಅವರು ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದೆ. ಜಿಲ್ಲೆಯಲ್ಲಿಯೂ ಸಹ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ಮಳೆಯಿಂದ ನೆರೆ ಸೇರಿದಂತೆ ಉಂಟಾಗುವ ವಿವಿಧ ಅವಘಡಗಳಿಂದ ಜನ-ಜಾನುವಾರುಗಳು ತೊಂದರೆಗೆ ಸಿಲುಕದಂತೆ, ಜನರ ಆಸ್ತಿಗಳಿಗೆ ಹೆಚ್ಚಿನ ಹಾನಿಯಾಗದಂತೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಈಗಾಗಲೇ ಸಿಡಿಲು ಬಡಿತದಿಂದ ಮೂವರು ಸಾವನ್ನಪ್ಪಿದ್ದಾರೆ. ಜನಸಾಮಾನ್ಯರಿಗೆ ಸಿಡಿಲು ಬಡಿತದಿಂದ ರಕ್ಷಣೆ ಕುರಿತು ಅರಿವು ಮೂಡಿಸ ಬೇಕು ಎಂದ ಅವರು, ಮುಂದಿನ ದಿನಗಳಲ್ಲಿ ಮಳೆಯಿಂದ ಹಾನಿಗೊಳಗಾ ದವರಿಗೆ ಆದಷ್ಟು ತ್ವರಿತವಾಗಿ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ತಿಳಿಸಿದರು.

ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆಗೆ ಸಿಇಒಗೆ ಸೂಚನೆ ನೀಡಿದ ಸಚಿವರು, ಉಡುಪಿ ನಗರ ಪ್ರದೇಶದಲ್ಲಿ ಮಳೆ ನೀರು ಸರಾಗವಾಗಿ ಹರಿಯದ ಸಮಸ್ಯೆ ಕಳೆದ ಬಾರಿ ಉಂಟಾಗಿದ್ದು, ಈ ಬಾರಿ ಅಂತಹ ಅನಾಹುತ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಆದಷ್ಟು ಶೀಘ್ರವಾಗಿ ಆದ್ಯತೆ ಮೇಲೆ ಕೈಗೊಳ್ಳಬೇಕು. ಕುಡಿಯುವ ನೀರಿನೊಂದಿಗೆ ಕಲುಷಿತ ನೀರು ಮಿಶ್ರಣಗೊಳ್ಳದಂತೆ ಕ್ರಮ ವಹಿಸಬೇಕು. ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಆಗಿಂದಾಗ್ಗೆ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಬೇಕು ಎಂದರು.

400 ಕಾಲುಸಂಕ ನಿರ್ಮಾಣಕ್ಕೆ ಕ್ರಮ: ಜಿಲ್ಲೆಯ ಬೈಂದೂರು ಸೇರಿದಂತೆ ಗ್ರಾಮೀಣ ಭಾಗದ ಜನರು ಹಳ್ಳಕೊಳ್ಳ ದಾಟಲು ಕಾಲುಸಂಕಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಈ ಬಾರಿ ಆದ್ಯತೆ ಮೇರೆಗೆ ಕಾಲು ಸಂಕಗಳನ್ನು ನಿರ್ಮಿಸಬೇಕು ಎಂದ ಸಚಿವೆ, ಜಿಲ್ಲೆಯಲ್ಲಿ 400ರಷ್ಟು ಕಾಲುಸಂಕಗಳನ್ನು ನಿರ್ಮಿಸಲು ಶೀಘ್ರವೇ ಕ್ರಮಕೈಗೊಳ್ಳಲು ಲೋಕೋಪಯೋಗಿ ಇಲಾಖೆಗೆ ತಿಳಿಸಲಾಗಿದೆ ಎಂದರು.

ಈ ಬಾರಿ ಜಿಲ್ಲೆಯ 35,509 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆ ಮಾಡಲು ಗುರಿ ಹೊಂದಲಾಗಿದೆ. ಕಳೆದ ಒಂದು ವಾರ ದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನುಗಳನ್ನು ಇಟ್ಟು ಕೊಂಡು, ರೈತರಿಗೆ ಸಮರ್ಪಕವಾಗಿ ವಿತರಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸಚಿವೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಎಂ 4 ಭತ್ತದ ಬೀಜಕ್ಕೆ ಹೆಚ್ಚಿನ ಬೇಡಿಕೆ ಕೇಳಿಬರುತ್ತಿದೆ. ಹೊರ ಜಿಲ್ಲೆಗಳಲ್ಲಿ ಈ ಭತ್ತದ ತಳಿಯ ಬೀಜಗಳು ಲಭ್ಯವಿದ್ದರೆ ತರಿಸಿಕೊಡಬೇಕು. ಕಡಲಕೊರೆತ ತಡೆಗೆ ವೈಜ್ಞಾನಿಕ ರೀತಿಯ ತಡೆಗೋಡೆ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರಕಾರ ತಾತ್ಕಾಲಿಕ ಕಡಲ ಕೊರೆತ ನಿವಾರಣೆಗೆ ಜಿಲ್ಲೆಗೆ 5 ಕೋಟಿ ರೂ. ಹಣ ಬಿಡುಗಡೆ ಮಾಡಿದೆ ಎಂದರು.

ಜಲ ಜೀವನ್ ಮಿಷನ್: ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರಿಗೆ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತೀಮನೆಗೆ ನಳ್ಳಿ ಸಂಪರ್ಕ ಕಲ್ಪಿಸಿರುವ ಕಾಮಗಾರಿ, ಈಗಾಗಲೇ ಸಂಪರ್ಕ ಕಲ್ಪಿಸಿರುವ ಮನೆಗಳಿಗೆ ನೀರು ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ನಳ್ಳಿ ಸಂಪರ್ಕ ಕಲ್ಪಿಸಿರುವ ಪ್ರತಿಶತಃ ನೂರು ಮನೆಗಳಿಗೆ ಕುಡಿಯುವ ನೀರಿನ ಸರಬರಾಜು ಆಗಬೇಕು. ಸ್ಥಳೀಯವಾಗಿ ಲಭ್ಯವಾಗುವ ನೀರಿನ ಮೂಲಗಳ ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

400 ಕಿಂಡಿ ಅಣೆಕಟ್ಟು: ಜಿಲ್ಲೆಯಲ್ಲಿ 400ಕ್ಕೂ ಹೆಚ್ಚು ಕಿಂಡಿ ಆಣೆಕಟ್ಟು ನಿರ್ಮಾಣದಿಂದ ಪಶ್ಚಿಮಾಭಿಮುಖವಾಗಿ ಹರಿಯುವ ನದಿ ನೀರು ಸಮುದ್ರ ಸೇರಿ ವ್ಯರ್ಥವಾಗಬಾರದೆಂಬ ಉದ್ದೇಶವಿದೆ. ಕಳೆದ ಸಾಲಿನಲ್ಲಿ ಸೆಪ್ಟಂಬರ್ ತಿಂಗಳಲ್ಲೇ ಹಲಗೆಗಳ ಅಳವಡಿಕೆಯಿಂದ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಕೊಂಚ ತಪ್ಪುವುದರ ಜೊತೆಗೆ ಅಂತರ್ಜಲ ಮಟ್ಟವು ಹೆಚ್ಚಿದೆ. ಈಗ ಮಳೆ ಆರಂಭವಾದ ಹಿನ್ನೆಲೆಯಲ್ಲಿ ಅವುಗಳಿಗೆ ಅಳವಡಿಸಿರುವ ಹಲಗೆಗಳನ್ನು ತೆಗೆಯಬೇಕು. ಮಳೆಗಾಲ ನೋಡಿಕೊಂಡು ಸೆಪ್ಟಂಬರ್‌ನಲ್ಲಿ ಅವಶ್ಯವಿದ್ದಲ್ಲಿ ಈ ವರ್ಷವೂ ಸಹ ಹಲಗೆಗಳನ್ನು ಅಳವಡಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್, ಡಿಎಫ್‌ಓಗಳಾದ ಗಣಪತಿ ಹಾಗೂ ಶಿವರಾಂ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆಗೆ ಅಭಿನಂದನೆ

ಈ ಬಾರಿಯ ಎಸೆಸೆಲಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಅಗ್ರಸ್ಥಾನಕ್ಕೇರಿದ ಉಡುಪಿ ಜಿಲ್ಲೆಯ ಸಾಧನೆಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಡಿಡಿಪಿಐ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಅಭಿನಂದಿಸಿದರು.

ಕಳೆದ ಬಾರಿ 17ನೇ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ ಈ ಬಾರಿ ಮೊದಲ ಸ್ಥಾನ ಅಲಂಕರಿಸಿದೆ. ಇದಕ್ಕೆ ಶಿಕ್ಷಣ ಇಲಾಖೆಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, 143 ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದಿರುವುದು ಅತ್ಯಂತ ಖುಷಿಯ ವಿಷಯ. ಪ್ರಸಕ್ತ ಸಾಲಿನಲ್ಲಿ ಇನ್ನೂ ಹೆಚ್ಚು ಶಾಲೆಗಳಿಗೆ ಈ ರೀತಿಯ ಫಲಿತಾಂಶ ಬರಬೇಕು ಎಂದು ಶುಭ ಹಾರೈಸಿದರು.

ಶಾಲಾ-ಕಾಲೇಜುಗಳು, ಅಂಗನವಾಡಿ ಕೇಂದ್ರಗಳ ದುರಸ್ತಿ ಕಾರ್ಯಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸುವಂತೆ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಗೆ ಹೊಸದಾಗಿ ಪ್ರಸಕ್ತ ಸಾಲಿನಿಂದ ಮೂರು ಹೊಸ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಸರಕಾರ ಅನುಮತಿ ನೀಡಿದೆ. ಇದಕ್ಕೆ ಅಗತ್ಯವಿರುವ ಕಟ್ಟಡಗಳನ್ನು ಗುರುತಿಸಿ, ಪ್ರಸಕ್ತ ಸಾಲಿನ ಆರಂಭದಿಂದಲೇ ಅವು ಪ್ರಾರಂಭಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಆಗಿಂದಾಗ್ಗೆ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ಪರಿಶೀಲಿಸಬೇಕೆಂದು ಸೂಚನೆ ನೀಡಿದರು.






 

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News